ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ: ಅಮಿತ್ ಶಾ ಎಚ್ಚರಿಕೆ

2 years ago

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂದು ಬಿಜೆಪಿ ಪಣ ತೊಟ್ಟು ಕೆಲಸ ಮಾಡುತ್ತಿದೆ. ಇಂತಹ ಮಹತ್ವಾಕಾಂಕ್ಷೆಗೆ ರಾಜ್ಯ ನಾಯಕರ ಒಳ ಒಪ್ಪಂದದ ರಾಜಕಾರಣ ಅಡ್ಡಿಯಾಗಬಾರದು ಎಂದು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಪಕ್ಷದ ಪ್ರಚಾರ ತಂತ್ರ, ಮೈತ್ರಿ ಪಕ್ಷ ಜೆ ಡಿ ಎಸ್ ಜೊತೆಗಿನ ಸಮನ್ವಯ ಹಾಗೂ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಆಗಮಿಸಿರುವ ಅವರು, ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದರು.

ಪ್ರಮುಖವಾಗಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಅಪಸ್ವರ ಎತ್ತಿರುವ ಬೆಳಗಾವಿ, ಬೀದರ್ , ಚಿತ್ರದುರ್ಗ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ಕೋರ್ ಕಮಿಟಿ ಸದಸ್ಯರು ಮತ್ತು ರಾಜ್ಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದರು.

ಈ ಸಮಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯ ಫಲಿತಾಂಶವನ್ನು ನೆನಪಿಸಿದ ಅವರು, ಬಹುತೇಕ ಕಡೆಗಳಲ್ಲಿ ನಾಯಕರು ಮಾಡಿಕೊಂಡ ಒಳ ಒಪ್ಪಂದದ ಪರಿಣಾಮದಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರದಿಂದ ದೂರ ಉಳಿಯುವಂತಾಯಿತು. ಕಳೆದ ಚುನಾವಣೆಯಲ್ಲಿ ಎಲ್ಲೆಲ್ಲಿ ಒಳ ಒಪ್ಪಂದ ನಡೆದಿದೆ ಎಂಬ ಬಗ್ಗೆ ಹೈಕಮಾಂಡ್ ಬಳಿ ಸಂಪೂರ್ಣ ಮಾಹಿತಿ ಇದೆ. ಅದನ್ನು ಈಗ ಚರ್ಚಿಸಲು ಹೋಗುವುದಿಲ್ಲ. ನಮ್ಮ ಮುಂದೆ ಇರುವುದು ದೊಡ್ಡ ಸಮರ. ಅದನ್ನು ಎದುರಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಸಲಹೆ ಮಾಡಿರುವುದಾಗಿ ಪಕ್ಷದ ಉನ್ನತ ಮೂಲಗಳಿಂದ ವರದಿಯಾಗಿದೆ.

ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ನಡೆದ ಯಾವುದೇ ವಿದ್ಯಮಾನ ಲೋಕಸಭೆ ಚುನಾವಣೆಯಲ್ಲಿ ಪುನರಾವರ್ತನೆಯಾಗಬಾರದು. ಒಳ ಒಪ್ಪಂದದ ರಾಜಕಾರಣವನ್ನು ಹೈಕಮಾಂಡ್ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಅಂತಹ ನಾಯಕರ ವಿರುದ್ಧ ಪಕ್ಷ ಕಠಿಣ ಕ್ರಮ ಜರುಗಿಸಲಿದೆ. ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿರುವುದಾಗಿ ಗೊತ್ತಾಗಿದೆ.

ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಮಯದಲ್ಲಿ ಪಕ್ಷ ಅರ್ಹತೆ ಮತ್ತು ಗೆಲುವಿನ ಮಾನದಂಡ ಆಧರಿಸಿ ಟಿಕೆಟ್ ನೀಡಿದೆ. ಹೈಕಮಾಂಡ್ ಮಾಡಿರುವ ಈ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು. ವಲಸೆ ಬಂದವರು ಪಕ್ಷದಿಂದ ಹೊರಗಿದ್ದವರು ಎಂಬ ಕಾರಣಗಳನ್ನು ಮುಂದೊಡ್ಡಿ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವುದಾಗಿ ತಿಳಿದುಬಂದಿದೆ.

ನಂತರ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಅವರು, ಪಕ್ಷದ ಅಭ್ಯರ್ಥಿಗಳು ಎಲ್ಲೆಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ? ಅದಕ್ಕೆ ಕಾರಣವಾದ ಅಂಶಗಳೇನು? ಎಂಬುದನ್ನು ವಿವರಿಸಿದರು. ಇವುಗಳ ಬಗ್ಗೆ ವಿಶೇಷ ಗಮನ ಹರಿಸಲು ಸಲಹೆ ಮಾಡಿದರು.

ನಂತರ ಕೆಲ ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಿ ಪ್ರಸಕ್ತ ರಾಜಕೀಯ ಸನ್ನಿವೇಶಗಳು ಹಾಗೂ ಎದುರಾಳಿ ಕಾಂಗ್ರೆಸ್ ಎದುರಿಸಲು ಬಳಸಬೇಕಾದ ರಣತಂತ್ರಗಳ ಬಗ್ಗೆ ಕೆಲವು ಸೂಚನೆಗಳನ್ನು ನೀಡಿದರು. ರಾಜ್ಯ ನಾಯಕರೊಂದಿಗೆ ಕೆಲವು ಮಾಹಿತಿಗಳನ್ನು ಹಂಚಿಕೊಂಡು ಮುಂದಿನ ದಿನಗಳಲ್ಲಿ ಜೆಡಿಎಸ್ ಜತೆಗೂಡಿ ಅಬ್ಬರದ ಪ್ರಚಾರಕ್ಕೆ ನೀಲನಕ್ಷೆ ಸಿದ್ಧಪಡಿಸಿದರು.

ಬೆಳಗ್ಗೆ ಜೆಡಿಎಸ್-ಬಿಜೆಪಿ ನಾಯಕರೊಂದಿಗೆ ಉಪಾಹಾರ ಕೂಟದಲ್ಲೂ ಒಗ್ಗಟ್ಟು ಪ್ರದರ್ಶಿಸಲಾಯಿತು. ಅನಂತರ ನಡೆದ ಉಭಯ ಪಕ್ಷಗಳ ಸಮನ್ವಯ ಸಭೆಯಲ್ಲೂ ಕೇಂದ್ರ ಸರ್ಕಾರದ 10 ವರ್ಷಗಳ ಸಾಧನೆಯನ್ನು ಮನೆಮನೆಗೆ ತಲುಪಿಸಲು ಮತ್ತು ಮೈತ್ರಿ ನಾಯಕರು ಟೀಕೆಗಳನ್ನು ಮಾಡುವಾಗ ಎಚ್ಚರಿಕೆಯಿಂದಿರುವಂತೆ ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಎಲ್ಲಿಯೂ ಭಿನ್ನಾಭಿಪ್ರಾಯ ಉಂಟಾಗದಂತೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 400ಕ್ಕೂ ಹೆಚ್ಚು ಸೀಟು ಗೆಲ್ಲುವ ಗುರಿ ತಲುಪಲು ಶ್ರಮಿಸುವಂತೆ ಅಮಿತ್ ಶಾ ಕರೆ ನೀಡಿದ್ದಾರೆ.

Leave a Reply