ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ, ಬಹುತ್ವದ ರಾಷ್ಟ್ರ: ಸಿದ್ದರಾಮಯ್ಯ

1 year ago

ಮೈಸೂರು: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಭಾಗಮಂಡಲದಲ್ಲಿ ನೂತನ‌ ಮೇಲ್ಸೇತುವೆಗಳ ಲೋಕರ್ಪಣೆಗೊಳಿಸಿ, ಮಾತನಾಡಿದ ಅವರು, ಎಲ್ಲಾ ಧರ್ಮಗಳ, ಜಾತಿಗಳ ಜನರು ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನವು ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು ಎಂದರು.

ನಮ್ಮ  ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ ಎಂದರು.

ಯಾವ ಪಕ್ಷ ನುಡಿದಂತೆ ನಡೆಯುತ್ತದೆ, ಜನಪರವಾಗಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಪ್ರಮುಖವಾಗಿ ಭರವಸೆ ನೀಡಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ ಎಂದರು.

ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದು ಸಮಾಜದಲ್ಲಿನ ಎಲ್ಲಾ ಜಾತಿಯ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಮಾಡಿದ್ದೇವೆ ಎಂದರು.

ಕೊಡಗಿನ ಜನ ರಾಜಕೀಯವಾಗಿ ಪ್ರಬುದ್ಧರಾಗಿದ್ದು, ಯಾವ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಯೋಚಿಸಬೇಕು. ಭಾರತ ದೇಶ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ದ್ವೇಷ ಮಾಡಬಾರದು ಎಂದು ಕರೆ ನೀಡಿದರು.

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ ಅನುದಾನ ನೀಡಿದಂತೆ, ಈ ಬಾರಿಯೂ ಕೊಡಗಿನ ರಸ್ತೆ ಹಾಗೂ ಇತರೆ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗುವುದು. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ ಕೊಡಗಿನ ಜನತೆಗೆ ಧನ್ಯವಾದಗಳು ಎಂದರು.

ಗ್ಯಾರಂಟಿಗಳ ಮೂಲಕ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ ಎಂದರು.

ಈ ಭಾಗದ ಜನರು ಮೈಕ್ರೋಫೈನಾನ್ಸ್ ನಿಂದ ಅನುಭವಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಮೈಕ್ರೋಫೈನಾನ್ಸ್ ಸಂಸ್ಥೆಗಳ ನಿಯಂತ್ರಣಕ್ಕಾಗಿ ಸುಗ್ರೀವಾಜ್ಞೆಯನ್ನು ಸದ್ಯದಲ್ಲಿಯೇ ಜಾರಿಗೊಳಿಸಲಾಗುವುದು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ದುಡುಕಿ‌ ಆತ್ಮಹತ್ಯೆಯಂತಹ ನಿರ್ಣಯ ಕೈಗೊಳ್ಳಬೇಡಿ ಎಂದು ಮನವಿ ಮಾಡಿದರು.

Leave a Reply