ಬಿಜೆಪಿಯಲ್ಲಿ ಒಕ್ಕಲಿಗರಿಗೆ ಅನ್ಯಾಯ: ತೇಜಸ್ವಿನಿ ಗೌಡ

2 years ago

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ನಾಳೆ ಅಧಿಸೂಚನೆ ಹೊರ ಬೀಳುತ್ತಿದ್ದರೂ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಬಗೆಹರಿದಿಲ್ಲ.

ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಅವರು ತಮಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿ ನಾಯಕರ ನಿರ್ಧಾರ ಪ್ರತಿಭಟಿಸಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನ ಹೊರಹಾಕಿದರು.

ಒಕ್ಕಲಿಗ ಸಮುದಾಯಕ್ಕೆ ಸೇರಿದ ತಮಗೆ ಬೆಂಗಳೂರು ಉತ್ತರ, ಮಂಡ್ಯ ಅಥವಾ ಮೈಸೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಟಿಕೆಟ್ ನೀಡಬೇಕು ಎಂದು ಮನವಿ ಸಲ್ಲಿಸಿದ್ದೆ. ಹೈಕಮಾಂಡ್ ಮೈಸೂರಿನಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವ ಭರವಸೆ ನೀಡಿತ್ತು. ಆದರೆ ಅಂತಿಮ ಕ್ಷಣದಲ್ಲಿ ರಾಜಮನೆತನದವರಿಗೆ ಮಣೆಹಾಕಿದೆ. ಈ ಮೂಲಕ ಒಕ್ಕಲಿಗರನ್ನು ಮೂಲೆಗುಂಪು ಮಾಡಿದೆ ಎಂದು ಆರೋಪಿಸಿದರು.

ಬಿಜೆಪಿ ನಾಯಕರ ಧೋರಣೆ ಪ್ರತಿಭಟಿಸಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಆಪ್ತರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಘೋಷಿಸಿದರು.

ಇದಾದ ನಂತರ ಕೋಲಾರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತಂತೆ ಹೈಕಮಾಂಡ್ ಮೇಲೆ ಒತ್ತಡ ಏರಲು ಮುಂದಾಗಿರುವ ಕಾಂಗ್ರೆಸ್ಸಿನ ವಿಧಾನಪರಿಷತ್ ಸದಸ್ಯ ಅನಿಲ್ ಕುಮಾರ್ ಮತ್ತು ನಜೀರ್ ಅಹ್ಮದ್ ಅವರು ರಾಜೀನಾಮೆ ಪತ್ರದೊಂದಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದರು.

ರಾಜಿನಾಮೆ ಪತ್ರವನ್ನು ಮಾಧ್ಯಮಗಳಿಗೆ ಪ್ರದರ್ಶಿಸಿ ಸಭಾಪತಿಗಳನ್ನು ಭೇಟಿ ಮಾಡಿದ ಈ ಇಬ್ಬರೂ ರಾಜಿನಾಮೆ ಸಲ್ಲಿಸದೆ ವಾಪಸ್ ಬಂದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಜೀರ್ ಅಹ್ಮದ್ ಅವರು, ಕೋಲಾರದಲ್ಲಿ ಯಾವುದೇ ಕಾರಣಕ್ಕೂ ಸಚಿವ ಮುನಿಯಪ್ಪ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಬಾರದು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದೇವೆ. ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಒಂದು ದಿನದ ಅವಕಾಶ ನೀಡುವಂತೆ ಸಿಎಂ ಮತ್ತು ಡಿಸಿಎಂ ಕೇಳಿದ್ದಾರೆ. ಹೀಗಾಗಿ ರಾಜೀನಾಮೆ ಸಲ್ಲಿಸದೆ ವಾಪಸ್ ತೆರುಳುತ್ತಿದ್ದೇವೆ ಎಂದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ಸೂಕ್ತ ನಿಯಮದ ಪ್ರಕಾರ ತೇಜಸ್ವಿನಿ ಗೌಡ ಅವರು ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಿದ್ದೇನೆ. ಅವರ ಸದಸ್ಯತ್ವದ ಅವಧಿ ಜೂನ್ 15ಕ್ಕೆ ಅಂತ್ಯವಾಗುತ್ತಿತ್ತು. ಆದರೆ ಈಗ ಅವರ ರಾಜಿನಾಮೆ ಅಂಗೀಕಾರಗೊಂಡಿರುವ ಹಿನ್ನೆಲೆಯಲ್ಲಿ ಈ ಸ್ಥಾನ ಖಾಲಿಯಾಗಿದೆ ಎಂದರು.

ಕಾಂಗ್ರೆಸ್ಸಿನ ಅನಿಲ್ ಕುಮಾರ್ ಮತ್ತು ನಸೀರ್ ಅಹಮದ್ ಅವರು ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದರು. ಕೈ ಬರಹದಲ್ಲಿ ಪತ್ರ ನೀಡುವಂತೆ ಅವರಿಗೆ ಸೂಚಿಸಿದೆ. ಆದರೆ, ಅವರು ನಂತರ ಬರುವುದಾಗಿ ಹೇಳಿ ಹೋಗಿದ್ದಾರೆ. ರಾಜೀನಾಮೆ ಕೊಡುವುದು ಅಥವಾ ಬಿಡುವುದು ಅವರಿಗೆ ಬಿಟ್ಟ ವಿಷಯ ಎಂದರು.

Leave a Reply