ಬೆಂಗಳೂರು: ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಟಾಪಿಸಲು ಕಾರ್ಯಕ್ರಮ ರೂಪಿಸಲಾಗಿದೆ.
ಈ ನಿಟ್ಟಿನಲ್ಲಿ ಮಹಾರಾಷ್ಟ್ರದಲ್ಲಿರುವ ನಾಸಿಕ್ ಜಿಲ್ಲೆಯಲ್ಲಿ ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಅಂತಾರಾಷ್ಟ್ರೀಯ ಶಿಲ್ಪಿಯಿಂದ ತಯಾರಿಕೆ ಮಾಡಲಾಗುತ್ತಿದೆ.
ನಾಸಿಕ್ ಜಿಲ್ಲೆ ಪ್ರತಿಮೆ ತಯಾರಿಕೆ ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಭೇಟಿ ನೀಡಿ, ಪ್ರತಿಮೆ ತಯಾರಿಕೆ ಕಾರ್ಯ ಪರಿಶೀಲನೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎ.ಅಮೃತ್ ರಾಜ್, ವಿಶ್ವದ ಅತಿಡೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಶಾಂತಿಯುತ ಮತ್ತು ಸಹಬಾಳ್ಮೆಯಿಂದ ಸರಿಸಮಾನವಾಗಿ ನಾವು ಬದುಕು ಸಾಗುತ್ತಿದ್ದೇವೆ ಎಂದರೆ ಸಂವಿಧಾನ ನಮಗೆ ಕೊಟ್ಟ ಅತಿ ದೊಡ್ಡ ಶಕ್ತಿ ಎಂದು ಹೇಳಿದರು.
ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆ ಸ್ವಾತಂತ್ರ್ಯ ಉದ್ಯಾನವನವನದಲ್ಲಿ ಸ್ಥಾಪನೆಯಾಗಲಿದೆ. ರಾಜ್ಯದಲ್ಲಿ ಮೊಟ್ಟ ಮೊದಲ 17 ಅಡಿ ಎತ್ತರದ ಕಂಚಿನ ಪ್ರತಿಮೆ ನಾಸಿಕ್ ಜಿಲ್ಲೆಯಲ್ಲಿ ಪ್ರತಿಮೆ ತಯಾರಿಕೆ ಕಾರ್ಯ ಅಂತಿಮ ಹಂತದಲ್ಲಿ ಇದ್ದು ಇನ್ನು ಎರಡು ತಿಂಗಳಲ್ಲಿ ಲೋಕರ್ಪಣೆ ಕಾರ್ಯ ನಡೆಯಲಿದೆ ಎಂದು ಹೇಳಿದರು.
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ಪ್ರತಿಯೊಂದು ಹೋರಾಟದಲ್ಲಿ ಬಿ.ಆರ್.ಅಂಬೇಡ್ಕರ್ ರವರು ನಮಗೆ ಸ್ಪೂರ್ತಿ, ಪ್ರೇರಣೆಯಾಗಿದ್ದಾರೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಆದರ್ಶ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡರೆ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಕೆ.ಮಂಜೇಗೌಡ, ಬಿ.ಬಿ.ಶ್ರೀಧರ್, ಮಲ್ಲೇಶ್, ಹರೀಶ್ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.




