ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ

1 year ago

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ದಿನ ಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಜಾಹೀರಾತು ನೀಡಿದ್ದನ್ನು ಆಕ್ಷೇಪಿಸಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬಿಜೆಪಿ ಹೂಡಿರುವ ಮಾನಹಾನಿ ಪ್ರಕರಣ ರದ್ದುಪಡಿಸುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿದೆ.

ರಾಹುಲ್ ಗಾಂಧಿ ಅವರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಕೆ ಶಶಿಕಿರಣ್ ಶೆಟ್ಟಿ, ಬಿಜೆಪಿ (ಜಾಹೀರಾತನ್ನು) ತಪ್ಪಾಗಿ ಅರ್ಥೈಸಿದೆ. ಹೀಗಾಗಿ ಅವರ ವಿರುದ್ದದ ಮಾನ ಹಾನಿ ಪ್ರಕರಣದ ವಿಚಾರಣೆ ಮುಂದುವರೆಸುವುದಕ್ಕೆ ಅವಕಾಶ ನೀಡಬಾರದು ಎಂದು ಪೀಠಕ್ಕೆ ವಿವರಿಸಿದರು.

ಇದನ್ನು ಆಲಿಸಿದ ಪೀಠ, ರಾಹುಲ್ ಗಾಂಧಿ ಅವರ ವಿರುದ್ಧದ ನ್ಯಾಯಾಂಗ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ವಿಧಿಸಲಾಗಿದೆ. ಪ್ರತಿವಾದಿಗೆ ತುರ್ತು ನೋಟಿಸ್ ಜಾರಿ ಮಾಡಲಾಗಿದೆ ಎಂದು ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿತು.

ಇದೇ ಆರೋಪ ಸಂಬಂಧ 2023ರ ಜೂನ್ನಲ್ಲಿ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಐಪಿಸಿ ಸೆಕ್ಷನ್ಗಳಾದ 499 ಮತ್ತು 500ರ ಅಡಿ ಕಾಂಗ್ರೆಸ್, ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಸಂಜ್ಞೇಯ ಅಪರಾಧ ಎಂದು ಪರಿಗಣಿಸಿತ್ತು. ಇದಾದ ನಂತರ ರಾಹುಲ್, ಸಿದ್ದರಾಮಯ್ಯ ಹಾಗೂ ಡಿಕೆ. ಶಿವಕುಮಾರ್ ವಿಚಾರಣೆಗೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.

Leave a Reply