ಮೇಯರ್ ಆಗಿ ಆಯ್ಕೆಯಾಗಿರುವುದು ನನ್ನ ಸುದೈವ: ಪಿ ಗಾದೆಪ್ಪ

6 months ago

ಬಳ್ಳಾರಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಗೆ ಬಂದಿರುವ ಸಂದರ್ಭದಲ್ಲಿಯೇ ನಾನು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಆಯ್ಕೆಯಾಗಿರುವುದು ನನ್ನ ಸುದೈವವೆಂದು ಭಾವಿಸುತ್ತೇನೆಂದು ನೂತನ ಮೇಯರ್ ಪಿ ಗಾದೆಪ್ಪ ಹೇಳಿದರು.

ಅಖಂಡ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಹಾಗೂ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ವಿವಿಧ ಹುದ್ದೆಗಳನ್ನಲಂಕರಿಸಿದ ಮತ್ತು ಪ್ರಶಸ್ತಿ ಪುರಸ್ಕೃತರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಗಡಿ ಜಿಲ್ಲೆಯಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ 1958ರಲ್ಲಿ ನಡೆದ ಸಮ್ಮೇಳನ 68 ವರ್ಷಗಳ ನಂತರ ಬಳ್ಳಾರಿಗೆ ಬಂದಿದ್ದು ಅದನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಕಂಕಣ ಬದ್ಧರಾಗೋಣ, ಜಿಲ್ಲೆಯ ಜನಪ್ರತಿನಿಧಿಗಳು, ಎಲ್ಲಾ ಸಂಘ-ಸಂಸ್ಥೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಎಲ್ಲರೂ ಒಗ್ಗೂಡಿ ಕನ್ನಡ ಸಾಹಿತ್ಯ ಸರಸ್ವತಿಯ ತೇರನ್ನು ಎಳೆಯಲು  ಕಾತರರಾಗಿದ್ದಾರೆ ಎಂದರು.

ಜಿಲ್ಲಾ  ಕ.ಸಾ.ಪ ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಡಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಪಸರಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು  ಕಾರ್ಯನಿರ್ವಹಿಸುತ್ತಿದೆ. ಅಖಂಡ ಬಳ್ಳಾರಿ ಜಿಲ್ಲೆಯ ಜನತೆ ಬಹುದಿನದಿಂದ ನಿರೀಕ್ಷಿಸುತ್ತಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿಂದ ವಿಳಂಬವಾದರೂ ಬಳ್ಳಾರಿ ಜಿಲ್ಲೆಯಲ್ಲಿಯೇ ನಡೆಯಲಿದೆ ಈ ಕುರಿತು ಯಾವುದೇ ಅನುಮಾನ ಬೇಡ ಎಂದರು.

ಸರ್ಕಾರ ಈಗಾಗಲೇ 2025-26 ನೇ ಸಾಲಿನ ಆಯವ್ಯಯದಲ್ಲಿ 10 ಕೋಟಿ ರೂಪಾಯಿಗಳ ಅನುದಾನವನ್ನು ಬಳ್ಳಾರಿಯಲ್ಲಿ ಜರುಗುವ ಸಾಹಿತ್ಯ ಸಮ್ಮೇಳನಕ್ಕೆ  ಮೀಸಲಾಗಿರಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಯ ನೂತನ ಅಧ್ಯಕ್ಷರಾದ ಅವ್ವಾರು  ಮಂಜುನಾಥ, ಕರ್ನಾಟಕ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ವೆಂಕಟೇಶ್ ಹೆಗಡೆ, ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಯಾಳ್ಪಿ ವಲಿ ಬಾಷಾ, ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ ಪೊಂಪನಗೌಡ, ಬಳ್ಳಾರಿ ಜಿಲ್ಲಾ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಗುಡಾರ ನೀಲಕಂಠಪ್ಪ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅಬ್ದುಲ್ ಹೈ ತೋರಣಗಲ್ಲು ಮಾಜಿ ಕಸಾಪ ಅಧ್ಯಕ್ಷ ಹೆಚ್ ಹಂಪನಗೌಡ, ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಡಾ. ಕೆ ಶಿವಲಿಂಗಪ್ಪ ಹಂದಿಹಾಳು ತಮ್ಮ ಅನಿಸಿಕೆಗಳನ್ನು ಈ ಸಂದರ್ಭದಲ್ಲಿ ವ್ಯಕ್ತ ಮಾಡಿದರು. ಇವರುಗಳನ್ನು ಪರಿಷತ್ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.

ಕಸಾಪ ಕೋಶಾಧ್ಯಕ್ಷ ಬಸವರಾಜ ಗದಗಿನ, ಮಹಿಳಾ ಪ್ರತಿನಿಧಿ ಡಾ. ಎ.ಎನ್. ಸಿದ್ದೇಶ್ವರಿ, ಸಂಘಟನಾ ಕಾರ್ಯದರ್ಶಿಗಳಾದ ಸಿದ್ದರಾಮಪ್ಪ ಸಿರಿಗೇರಿ, ಬಸವರಾಜ ಬಿಸಿಲಹಳ್ಳಿ, ಸಂಚಾಲಕರಾದ ಕಪ್ಪಗಲ್ಲು ಬಿ ಚಂದ್ರಶೇಖರ ಆಚಾರಿ, ಬಿ.ಎಸ್ ಪ್ರಭುಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಸಾಪ ಗೌರವ ಕಾರ್ಯದರ್ಶಿ ಡಾ. ಕೆ ಶಿವಲಿಂಗಪ್ಪ ಹಂದಿಹಾಳು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರಾದ ಸತ್ಯನಾರಾಯಣ ಕಾರ್ಯಕ್ರಮ ನಿರೂಪಿಸಿದರು, ಕಸಾಪ ಗ್ರಾಮೀಣ ಘಟಕದ ಅಧ್ಯಕ್ಷ ಎರ್ರಿಸ್ವಾಮಿ ಸ್ವಾಮಿಹಳ್ಳಿ ಅವರು ಪ್ರಾರ್ಥನೆ ಸಲ್ಲಿಸಿದರು. ನಿವೃತ್ತ ಪೊಲೀಸ್ ಇನ್ಸ್ಪೆಕ್ಟರ್ ಹುಸೇನಸಾಬ್ ಮತ್ತು ಜಡೇಶ ಎಮ್ಮಿಗನೂರು ಕನ್ನಡ ಗೀತ ಗಾಯನ ನಡೆಸಿಕೊಟ್ಟರು.

Leave a Reply