ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳು ಆರೋಪ ಮಾಡುವುದು ಸರಿಯಲ್ಲ: ಜಿ ಪರಮೇಶ್ವರ್

2 years ago

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಸಂಪೂರ್ಣ ನಿಯಂತ್ರಣದಲ್ಲಿದೆ. ಅಲ್ಲಲ್ಲಿ ನಡೆದ ಕೆಲವು ಸಣ್ಣಪುಟ್ಟ ಘಟನೆಗಳನ್ನು ಹಿಡಿದುಕೊಂಡು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳು ಆರೋಪ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ವಿಧಾನಸೌಧದ ಭದ್ರತೆ ಮತ್ತು ಅತಿಗಣ್ಯರ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಹೇಳುವುದಿಲ್ಲ, ನಮಗೆ ಇದರ ಅರಿವಿದೆ. ಆದರೆ ನಮಗೂ ಜವಾಬ್ದಾರಿಯಿದೆ. ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇವೆ ಎಂದರು.

ಹುಬ್ಬಳ್ಳಿಯ ಯುವತಿ ಅಂಜಲಿ ಹತ್ಯೆ ಆರೋಪಿಯನ್ನು ಬಂದಿಸಲಾಗಿದೆ. ಅಂಜಲಿ ಕುಟುಂಬದ ಸದಸ್ಯರು ಆರೋಪಿಯಿಂದ ಆತಂಕ ಇರುವ ಬಗ್ಗೆ ಪೊಲೀಸ್‍ ಅಧಿಕಾರಿಗಳಿಗೆ ಮೌಖಿಕ ಮಾಹಿತಿ ನೀಡಿದ್ದರು. ಲಿಖಿತ ದೂರು ನೀಡಿರಲಿಲ್ಲ ಎಂಬ ವರದಿ ಇದೆ. ಒಂದು ವೇಳೆ ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದರೂ ಪೊಲೀಸರು ಕ್ರಮ ಕೈಗೊಳ್ಳದೇ ಇದ್ದರೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಮೇಲ್ನೋಟಕ್ಕೆ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಸೇರಿದಂತೆ ಕೆಲವರನ್ನು ಅಮಾನತುಗೊಳಿಸಲಾಗಿದೆ. ಮುಂದಿನ ಹಂತದಲ್ಲಿ ಅಗತ್ಯ ಶಿಸ್ತು ಕ್ರಮವನ್ನೂ ಜರುಗಿಸಲಾಗುವುದು ಎಂದರು.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಇಂತಹ ಘಟನೆ ನಡೆದಿರುವುದು ಬೇಸರದ ಸಂಗತಿ. ಈ ಹಿನ್ನೆಲೆಯಲ್ಲಿ ಎಡಿಜಿಪಿ ಅವರಿಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ಈ ವರದಿ ಬಂದ ನಂತರ ಅದನ್ನು ಆಧರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಪೆನ್ ಡ್ರೈವ್ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶದಿಂದ ಕರೆತಂದು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆ ಚಾಲನೆಯಲ್ಲಿದೆ. ಇಂತಹ ಪ್ರಕರಣವನ್ನು ಯಾರೂ ಹಗುರವಾಗಿ ಪರಿಗಣಿಸುವಂತಿಲ್ಲ ಎಂದರು.

Leave a Reply