ಜೈಲು ಪಾಲಾಗಿದ್ದ ಬಿಜೆಪಿ ನಾಯಕ ಗಾಲಿ ಜನಾರ್ದನ ರೆಡ್ಡಿಗೆ ಬಿಡುಗಡೆ ಭಾಗ್ಯ

10 months ago

ಹೈದರಾಬಾದ್‌: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿದ ಕೋರ್ಟ್ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಗಾಲಿ ಜನಾರ್ದನ ರೆಡ್ಡಿಗೆ ಬಿಡುಗಡೆ ಭಾಗ್ಯ ಲಭಿಸಿದೆ.

ಪ್ರಕರಣದ ತೀರ್ಪು ಪ್ರಶ್ನಿಸಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್‌ ಹಲವು ಷರತ್ತುಗಳನ್ನು ವಿಧಿಸಿ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಓಬಳಾಪುರ ಮೈನಿಂಗ್ ಸಂಸ್ಥೆ ಮೂಲಕ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದ‌ ಬಗ್ಗೆ ತನಿಖೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ಕೋರ್ಟ್ ಜನಾರ್ದನ ರೆಡ್ಡಿ ಮತ್ತಿತರರಿಗೆ ಏಳು ವರ್ಷ ಜೈತು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಜನಾರ್ದನ ರೆಡ್ಡಿ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಶಿಕ್ಷೆಗೆ ತಡೆಯಾಜ್ಞೆ ನೀಡಿ ಹತ್ತು ಲಕ್ಷ ರೂ. 2 ಶೂರಿಟಿ ಹಾಗೂ ಪಾಸ್‌‍ಪೋರ್ಟ್‌ಗಳನ್ನು ನೀಡುವುದೂ ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

2009ರ ಡಿಸೆಂಬರ್ 8ರಂದು ಜರ್ನಾದನ ರೆಡ್ಡಿ ಸೇರಿದಂತೆ ಇತರೆ ಆರೋಪಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಕರ್ನಾಟಕ-ಆಂಧ್ರಪ್ರದೇಶದ ಗಡಿಯಲ್ಲಿರುವ ಬಳ್ಳಾರಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಂತರ ರಾಜ್ಯ ಗಡಿ ಗುರುತುಗಳನ್ನು ನಾಶ ಮಾಡಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಿ ರೆಡ್ಡಿ ಮತ್ತು ಇತರರ ವಿರುದ್ಧ ಸಿಬಿಐ 2011ರಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು.

2007 ಮತ್ತು 2009ರ ನಡುವೆ ನಡೆದ ಅಕ್ರಮ ಗಣಿಗಾರಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ ₹884 ಕೋಟಿ ನಷ್ಟವಾಗಿದೆ ಎಂದು ಸಿಬಿಐ ಪರ ವಕೀಲರು ವಾದಿಸಿದ್ದರು. ಆರೋಪಿಗಳ ವಿರುದ್ಧ ಸಿಬಿಐ 2009ರ ಡಿಸೆಂಬರ್‌ 8ರಂದು ಪ್ರಕರಣ ದಾಖಲಿಸಿತ್ತು.

ಮೊದಲ ಆರೋಪಪಟ್ಟಿಯನ್ನು 2011ರ ಡಿಸೆಂಬರ್‌ 3ರಂದು ಸಲ್ಲಿಸಿತ್ತು. ನಂತರ ಗಣಿ ಕಂಪನಿಯ ನಿರ್ದೇಶಕರೂ ಆಗಿರುವ ರೆಡ್ಡಿ, ಶ್ರೀನಿವಾಸ್ ರೆಡ್ಡಿ, ರಾಜಗೋಪಾಲ್, ದಿವಂಗತ ಆರ್. ಲಿಂಗಾ ರೆಡ್ಡಿ ಮತ್ತು ಒಎಂಸಿ ವಿರುದ್ಧದ ಪ್ರಕರಣದಲ್ಲಿ ಮೂರು ಪೂರಕ ಆರೋಪಪಟ್ಟಿಗಳನ್ನು ಸಲ್ಲಿಸಿತ್ತು. ನ್ಯಾಯಾಲಯ 219 ಸಾಕ್ಷಿಗಳ ವಿಚಾರಣೆ ನಡೆಸಿತ್ತು. ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಾಗಿ 3,336 ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.

Leave a Reply