ಜೆಡಿಎಸ್ ನೂತನ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರನ್ನು ನೇಮಿಸಿದ ಬಂಡಾಯ ಬಣ

2 years ago

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಬೇಕು ಎಂದು ಜೆಡಿಎಸ್ ಮಾಡಿಕೊಂಡ ಬಿಜೆಪಿಯೊಂದಿಗೆ ಮೈತ್ರಿ ಪಕ್ಷದಲ್ಲಿ ಕಲಹಕ್ಕೆ ಕಾರಣವಾಗಿದೆ. 

ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದ ಬಣ ಕೈಗೊಂಡಿರುವ ಮೈತ್ರಿ ನಿರ್ಧಾರವನ್ನು ವಿರೋಧಿಸಿರುವ ಜೆಡಿಎಸ್ ನ ಹಲವು ರಾಜ್ಯಗಳ ಘಟಕಗಳು ಇದೀಗ ಪ್ರತ್ಯೇಕ ಅಸ್ತಿತ್ವ ಕಾಯ್ದುಕೊಳ್ಳುವುದಾಗಿ ಘೋಷಿಸುವ ಮೂಲಕ ಜೆಡಿಎಸ್ ನಾಯಕರಿಗೆ ಮುಜುಗರ ಉಂಟುಮಾಡಿದ್ದಾರೆ. ಜೊತೆಗೆ ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯ ಅಧ್ಯಕ್ಷರನ್ನು ನೇಮಕ ಮಾಡುವ ಮೂಲಕ ತಿರುಗೇಟು ನೀಡಲಾಗಿದೆ.

ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿ ವಿರೋಧಿಸಿದ ಜೆಡಿಎಸ್ ನ ಸಿ.ಎಂ.ಇಬ್ರಾಹಿಂ ಬಣ ಕೇರಳ ಹಾಗೂ ಇತರ ರಾಜ್ಯಗಳ ಘಟಕಗಳ ಅಧ್ಯಕ್ಷರು ರಾಷ್ಟ್ರೀಯ ಪದಾಧಿಕಾರಿಗಳು, ಬೆಂಗಳೂರಿನ ಕಾಡುಗೊಂಡನಹಳ್ಳಿಯ ಖಾಸಗಿ ಸಭಾಭವನದಲ್ಲಿ  ಜೆಡಿಎಸ್‌ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಸಿದರು. ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಪದಚ್ಯುತಗೊಳಿಸುವ ನಿರ್ಣಯ ಅಂಗೀಕರಿಸಲಾಯಿತು. ನಂತರ ಜೆಡಿಎಸ್‌ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಅವರನ್ನು ಆಯ್ಕೆಯಾದರು. 

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ಜಾತ್ಯತೀತ ಸಿದ್ಧಾಂತದ ಮೇಲೆ ನಿಂತಿರುವ ಜೆಡಿಎಸ್‌, ಮಹಾತ್ಮಾ ಗಾಂಧೀಜಿ ಅವರ ತತ್ವಗಳನ್ನು ಪಾಲಿಸುವ ಪಕ್ಷವಾಗಿದೆ. ಆದರೆ ಗಾಂಧೀಜಿ ಅವರನ್ನು ವಿರೋಧಿಸುವವರೊಂದಿಗೆ ಜೆಡಿಎಸ್‌ ಸಖ್ಯ ಬೆಳೆಸುವುದು ಸರಿಯೇ? ಎಂದು  ‍ಪ್ರಶ್ನಿಸಿದರು.

ನಾನು ಕಳೆದ ಅನೇಕ ವರ್ಷಗಳಿಂದ ಜನತಾದಳದಲ್ಲಿ ಇದ್ದೇನೆ. ಹಿಂದಿನ ಸಭೆಗಳಲ್ಲಿ ಪಕ್ಷದ ವರಿಷ್ಠ ದೇವೇಗೌಡ ಅವರೊಂದಿಗೆ ನಾನು ಭಾಗಿಯಾಗಿದ್ದೇನೆ. ನನ್ನನ್ನು ಜನತಾದಳದಿಂದ ಉಚ್ಚಾಟಿಸಿದ ದೇವೇಗೌಡರೇ ಜೆಡಿಎಸ್‌ ಸದ್ಯ ಸಖ್ಯ ಬೆಳೆಸಿರುವ ಕ್ರಮ ಸರಿಯೇ ಎಂಬುದಕ್ಕೆ ಉತ್ತರಿಸಬೇಕು ಎಂದು ಒತ್ತಾಯಿಸಿದರು. 

ನೀವು ಪಕ್ಷದಲ್ಲಿನ ಇತರರ ಅಭಿಪ್ರಾಯಕ್ಕೆ ಮನ್ನಣೆ ಕೊಡದೇ ಬಿಜೆಪಿಯೊಂದಿಗೆ ಹೆಜ್ಜೆ ಹಾಕಿದರೆ ಇದನ್ನು ಪ್ರಶ್ನಿಸುವ ಅಧಿಕಾರ ಪಕ್ಷದಲ್ಲಿರುವ ನಾನೂ ಸೇರಿದಂತೆ ಇತರರಿಗೂ ಇದೆ. ಗಾಂಧೀಜಿಯವರ ತತ್ವಗಳನ್ನು ಬಲಿಕೊಟ್ಟು ಬರೀ ಚುನಾವಣೆಯ ಗೆಲುವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ಎಚ್.ಡಿ.ದೇವೇಗೌಡರ ವರ್ತನೆಯನ್ನು ಇಂದಿನ ಸಭೆಯಲ್ಲಿ ನಾವು ಖಂಡಿಸುತ್ತೇವೆ ಎಂದರು.

ಇದೇ ವೇಳೆ ಪ್ರತಿಕ್ರಿಯೆ ನೀಡಿದ ಸಿ.ಕೆ.ನಾನು, ಗಾಂಧೀಜಿಯವರ ತತ್ವಗಳನ್ನು ಬಿಟ್ಟುಕೊಡದೇ ಅದೇ ಜಾತ್ಯತೀತ ಸಿದ್ಧಾಂತವನ್ನು ಮೈಗೂಡಿಸಿಕೊಂಡಿರುವ ನಮ್ಮ ನೇತೃತ್ವದ ಪಕ್ಷವೇ ನಿಜವಾದ ಜನತಾದಳ. ಜಾತ್ಯತೀತ ಗುಣವೇ ನಮ್ಮ‌ ಪಕ್ಷದ ಆತ್ಮವಿದ್ದಂತೆ. ಹೀಗಾಗಿ ಯಾರು ಏನೇ ಹೇಳಲಿ ನಾವು ಪಕ್ಷವನ್ನು ಬೇರೆಯವರಿಗೆ ಅಡ ಇಡುವುದಿಲ್ಲ ಮತ್ತು ಅದಕ್ಕೆ ಅವಕಾಶವನ್ನು ಕೊಡುವುದಿಲ್ಲ ಎಂದರು.

Leave a Reply