ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ತಡೆಗೆ ಜೆಡಿಎಸ್ ಮನವಿ

2 years ago

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಾರದ ಹೆಸರಿನಲ್ಲಿ ಮತದಾರರಿಗೆ ಗ್ಯಾರಂಟಿ ಕಾರ್ಡುಗಳನ್ನು ವಿತರಿಸುತ್ತಿದ್ದು, ಅದಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿ ಜೆಡಿಎಸ್ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.

ದೆಹಲಿಯಲ್ಲಿ ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿರುವ ಜೆಡಿಎಸ್ ಮುಖಂಡರು, ರಾಜ್ಯ ಸರ್ಕಾರ ಮತದಾರರಿಗೆ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಗಳು ಒಂದು ರೀತಿಯಲ್ಲಿ ಆಮಿಷದಂತೆ ಇವೆ. ಹೀಗಾಗಿ ಇವುಗಳನ್ನು ವಿತರಿಸದಂತೆ ಸೂಚನೆ ನೀಡಬೇಕು ಎಂದು ಕೋರಿದರು.

ಇತ್ತ ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಆರ್. ಪ್ರಕಾಶ್ ಅವರನ್ನೊಳಗೊಂಡ ಜೆಡಿಎಸ್ ನಿಯೋಗ ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಸಲ್ಲಿಸಿದೆ.

ಮತದಾರರ ಮೇಲೆ ಪರಿಣಾಮ ಬೀರುವಂತಹ ಅಂಶವುಳ್ಳ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸದಂತೆ ನಿರ್ಬಂಧಿಸಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ. 5 ಗ್ಯಾರಂಟಿಯ ನ್ಯಾಯ ಪತ್ರ ಎಂಬ ಹೆಸರಿನ ಪ್ರಣಾಳಿಕೆಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಗಾಗಿ ಬಿಡುಗಡೆ ಮಾಡಿದೆ.

ಪ್ರಣಾಳಿಕೆಯಲ್ಲಿನ ಅಂಶಗಳನ್ನು ಗ್ಯಾರಂಟಿ ಕಾರ್ಡಿನಲ್ಲಿ ಮುದ್ರಿಸಿ ಸರ್ಕಾರದ ಯೋಜನೆಗಳೆಂಬಂತೆ ಕಾಂಗ್ರೆಸ್ ನಿಂದ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ಪಕ್ಷವು ಹಲವಾರು ಭರವಸೆಗಳು ಮತ್ತು ಆಶ್ವಾಸನೆಗಳನ್ನು ಘೋಷಿಸುವ ಮೂಲಕ ಸಮಾಜದ ವಿವಿಧ ವರ್ಗದವರನ್ನು ತಲುಪಲು ಪ್ರಯತ್ನಿಸಿದ್ದು, ಇದು ಮತದಾರರಿಗೆ ಆಮಿಷ ಒಡ್ಡಿದಂತಾಗುತ್ತದೆ. ಮತದಾರರಿಗೆ ಈ ರೀತಿಯ ಆಮಿಷಗಳು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿವೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.

Leave a Reply