ಕಲಬುರಗಿಯನ್ನು1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು: ಸಿದ್ದರಾಮಯ್ಯ

2 years ago

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಪ್ರಮುಖ ನಗರ ಕಲಬುರಗಿಯನ್ನು1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಟಾರ್ಟ್ ಸಿಟಿಯಾಗಿ ಅಭಿವೃದ್ಧಿಪಡಿಸುವುದರಿಂದ ಇಲ್ಲಿನ ಜನರ ಜೀವನ ಗುಣಮಟ್ಟ ಸುಧಾರಿಸಲಿದ್ದು, ಹಿಂದುಳಿದ ಜಿಲ್ಲೆಗಳಿಗೆ ಹೂಡಿಕೆಯನ್ನು ಆಕರ್ಷಿಸುತ್ತದೆ ಎಂದರು.

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿಯಲ್ಲಿ ಕಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ತಲಾ 200 ಕೋಟಿ ರೂ.ಗಳನ್ನು ನೀಡಲಾಗುವುದು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರಸ್ತೆ ಸಂಪರ್ಕ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಸುಧಾರಿಸಲು “ಕಲ್ಯಾಣ ಪಥ” ಎಂಬ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.

ಕಲ್ಯಾಣಪಥ ಯೋಜನೆಯಡಿ ರಾಜ್ಯ ಸರ್ಕಾರ  1,000 ಕೋಟಿ ವೆಚ್ಚದಲ್ಲಿ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ 1,150 ಕಿ.ಮೀ ರಸ್ತೆಗಳನ್ನು ಅಭಿವೃದ್ಧಿಪಡಿಸಲಿದೆ. ರಾಯಚೂರಿನಲ್ಲಿ ಏಮ್ಸ್ ಸಂಸ್ಥೆ ಸ್ಥಾಪಿಸಲು ಅಗತ್ಯವಿರುವ ಎಲ್ಲ ನೆರವು ನೀಡಲು ಸರ್ಕಾರ ಸಿದ್ಧವಿದ್ದು, ಏಮ್ಸ್ ಆರಂಭಿಸಲು ಕೇಂದ್ರ ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

2024-25ರಲ್ಲಿಈ ಪ್ರದೇಶದ ಏಳು ಜಿಲ್ಲೆಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ  ಅಡಿಯಲ್ಲಿ 4.85 ಕೋಟಿ ಮಾನವ ದಿನಗಳ ಕೆಲಸವನ್ನು ಸೃಜಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಇಲ್ಲಿಯವರೆಗೆ, 3.43 ಕೋಟಿ ಮಾನವ ದಿನಗಳನ್ನು ಸೃಜಿಸಲಾಗಿದ್ದು, 13.69 ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸಲಾಗಿದೆ ಎಂದರು.

ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ನೀಡಲಾಗುವುದು. ಬಳ್ಳಾರಿಯಲ್ಲಿ ಅಸಂಘಟಿತ ಜೀನ್ಸ್ ಕೈಗಾರಿಕೆಗಳನ್ನು ಸಂಘಟಿಸಿ ಜೀನ್ಸ್ ಅಪ್ಯಾರಲ್ ಪಾರ್ಕ್ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಿ ಅವುಗಳನ್ನು ವಿಶ್ವದರ್ಜೆ ಮಟ್ಟಕ್ಕೆ ಏರಿಸಲಾಗುವುದು ಎಂದರು.

Leave a Reply