ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಸಂತ ಶ್ರೇಷ್ಠ ಕವಿ ಭಕ್ತ ಕನಕದಾಸ ಜಯಂತ್ಯೋತ್ಸವದ ಮೆರವಣಿಗೆಯು ಅದ್ದೂರಿಯಾಗಿ, ಸಂಭ್ರಮದಿಂದ ನಡೆಯಿತು.
ನಗರದ ಅಗ್ನಿಶಾಮಕ ದಳ ಕಚೇರಿ ಹತ್ತಿರ ಕನಕದಾಸ ವೃತ್ತದ ಭಕ್ತ ಕನಕದಾಸ ಅವರ ಪುತ್ಥಳಿಗೆ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿದರು. ಡಮರುಗ, ಡೊಳ್ಳು ಬಾರಿಸಿ ಸಂಭ್ರಮಿಸುವ ಮೂಲಕ ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಉಪ ಮೇಯರ್ ಬಿ.ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಕುರುಬ ಸಮಾಜದ ಮುಖಂಡರುಗಳು ಹಾಜರಿದ್ದರು.
ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ಕಹಳೆ ವಾದನ, ಗೊರವರ ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಗಮನಸೆಳೆದವು.
ಜಯಂತಿಯ ಮೆರವಣಿಗೆಯು ಕನಕದಾಸ ವೃತ್ತದಿಂದ ಆರಂಭವಾಗಿ ಎಸ್ಪಿ ಸರ್ಕಲ್ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ರಾಘವ ಕಲಾ ಮಂದಿರದ ವೇದಿಕೆ ಸಭಾಂಗಣದವರೆಗೆ ತಲುಪಿತು.




