ಕನಕಪುರದ ಬಂಡೆ ಸದಾ ಸಿದ್ದರಾಮಯ್ಯ ಅವರ ರಕ್ಷಣೆಗೆ ನಿಂತಿರುತ್ತದೆ: ಡಿ ಕೆ ಶಿವಕುಮಾರ್

1 year ago

ಹಾಸನ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಜನಕಲ್ಯಾಣ ಸಮಾವೇಶದ ಮೂಲಕ ಶಕ್ತಿಪ್ರದರ್ಶನ ನಡೆಸಿದ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಒಕ್ಕೊರಲ ಬೆಂಬಲ ವ್ಯಕ್ತಪಡಿಸಿದೆ. ವಾಲ್ಮೀಕಿ, ಮುಡಾ ನಿವೇಶನ ಹಂಚಿಕೆ ಅಕ್ರಮ ಸೇರಿದಂತೆ ಹಲವು ಆರೋಪಗಳನ್ನು ಮಾಡುತ್ತಾ ಸಿದ್ದರಾಮಯ್ಯ ಪದಚ್ಯುತಿಗೆ ಆಗ್ರಹಿಸುತ್ತಿರುವ ಜೆಡಿಎಸ್ ಮತ್ತು ಬಿಜೆಪಿಗೆ ಶಕ್ತಿ ಪ್ರದರ್ಶನದ ಮೂಲಕ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ.

ಸಮಾವೇಶ ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್, ಕನಕಪುರದ ಈ ಬಂಡೆ ಸದಾ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಕ್ಷಣೆಗೆ ನಿಂತಿರುತ್ತದೆ ಎಂದು ಹೇಳಿದ್ದೇನೆ. ಈ ಮಾತು ಅಚಲ ಎಂದರು.

ಮುಖ್ಯಮಂತ್ರಿ ಅವರ ಜೊತೆ ಬಂಡೆಯಂತೆ ನಿಂತಿದ್ದೇನೆ. ಮುಂದೆಯೂ ನಿಂತಿರುತ್ತೇನೆ. ಸಾಯುವವರೆಗೆ ಅವರ ಜೊತೆ ನಿಲ್ಲುತ್ತೇನೆ. ಇದು ಕನಕಪುರ ಬಂಡೆಯ ಇತಿಹಾಸ. ನಾನು ಎಲ್ಲಿರುತ್ತೆನೋ ಅಲ್ಲಿ ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಇರುತ್ತೇನೆ. ಇದು ನನ್ನ ಕರ್ತವ್ಯ ಎಂದು ಭಾವಿಸಿದ್ದೇನೆ ಎಂದರು.

ಐದು ಗ್ಯಾರಂಟಿಗಳು ಪರ್ಮನೆಂಟ್, 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ನಿಶ್ಚಿತ. ಬಿಜೆಪಿ-ಜೆಡಿಎಸ್ನವರ ಟೀಕೆಗಳಿಗೆ ರಾಜ್ಯದಲ್ಲಿ ನಡೆದ ಉಪ ಚುನಾವಣೆಯ ಮೂಲಕ ರಾಜ್ಯದ ಜನರು ಉತ್ತರ ನೀಡಿದ್ದಾರೆ. ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಮೂಲಕ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದ ಸಮಾಜಕ್ಕೆ ಶಕ್ತಿ ಕೊಟ್ಟಿದ್ದೇವೆ ಎಂದರು.

ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದೆ ಹಾಸನ ಜಿಲ್ಲೆಯಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಹಾಸನ ಜಿಲ್ಲೆಯನ್ನು ನೋಡಿದರೆ ಸಂಕಟವಾಗುತ್ತದೆ. ತಾಯಂದಿರ ಸ್ವಾಭಿಮಾನ ಉಳಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಿದ್ದೇವೆ ಎಂದರು.

ನಾವು ಜನರ ಭಾವನೆ, ಧರ್ಮಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಅಧಿಕಾರ ಶಾಶ್ವತವಲ್ಲ, ಕಾಂಗ್ರೆಸ್ ಸಾಧನೆಗಳು ಅಜರಾಮರ. ಗ್ಯಾರಂಟಿಯ ಗೆಲುವಿನ, ನಂಬಿಕೆಯ ಸಮಾವೇಶ ಎಂದರು.

Leave a Reply