ಕರವೇ ನಡೆಸುತ್ತಿರುವ ಚಳವಳಿ ನಿಗದಿಯಂತೆ ನಡೆಯಲಿದೆ: ನಾರಾಯಣ ಗೌಡ

5 years ago

ಜನರಿಗೆ ಹತ್ತಿರದಲ್ಲೇ ಲಸಿಕೆ ಬೂತ್ ಗಳನ್ನು ಸ್ಥಾಪಿಸಲು ಒತ್ತಾಯ

ಜೂ. 10ರಂದು‌ ಬೆಳಿಗ್ಗೆ 9.10 ಗಂಟೆಗೆ  ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಚಳವಳಿ ನಿಗದಿಯಾದಂತೆ ನಡೆಯುತ್ತದೆ. ಜೂನ್ ಅಂತ್ಯದೊಳಗೆ ಲಸಿಕೆಯ ಮೊದಲ ಡೋಸ್, ಸೆಪ್ಟೆಂಬರ್ ಅಂತ್ಯದೊಳಗೆ ಎರಡನೇ ಡೋಸ್ ಕರ್ನಾಟಕದ ಪ್ರತಿಯೊಬ್ಬ ನಾಗರಿಕನಿಗೂ ಸಿಗಬೇಕು ಎಂಬ ಬೇಡಿಕೆಯೊಂದಿಗೆ ಈ ಚಳವಳಿ ನಡೆಸಲಾಗುತ್ತದೆ.

ಈಗಾಗಲೇ ನಮ್ಮೆಲ್ಲ ಕಾರ್ಯಕರ್ತರಿಗೆ ಕರೆ ನೀಡಿದಂತೆ, ಕೋವಿಡ್ ನಿಯಮಾವಳಿಗಳನ್ನು ಪಾಲಿಸುತ್ತ, ಎಲ್ಲರೂ ಶಾಂತಿಯುತವಾಗಿ ಪ್ರತಿಭಟನೆಗಳನ್ನು ನಡೆಸಬೇಕು. ಈ ಮೂಲಕ ಸಮಸ್ತ ಕನ್ನಡದ ಜನತೆಗೆ ಕಾಲಮಿತಿಯೊಳಗೆ ಲಸಿಕೆ‌ ನೀಡಿ, ಅವರಿಗೆ ಕೋವಿಡ್ ನಿಂದ ರಕ್ಷಣೆ ನೀಡಬೇಕು ಎಂದು ನಾನು ಮನವಿ ಮಾಡುತ್ತೇನೆ.‌

ಪ್ರಧಾನಮಂತ್ರಿ ನರೇಂದ್ರಮೋದಿಯವರು ಜೂ.21 ರಿಂದ ದೇಶದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ‌ ಕೊಡುವುದಾಗಿ ಇಂದು ಘೋಷಿಸಿದ್ದಾರೆ. ಇದು ಸ್ವಾಗತಾರ್ಹ ಬೆಳವಣಿಗೆ. ಕರ್ನಾಟಕ ರಕ್ಷಣಾ‌ ವೇದಿಕೆ ಹಮ್ಮಿಕೊಂಡಿರುವ ಹೋರಾಟಕ್ಕೆ ಭಾಗಶಃ ಯಶಸ್ಸು ದೊರೆತಂತಾಗಿದೆ. ಆದರೆ ಬೇಗನೇ ಲಸಿಕೆ ನೀಡಬೇಕೆಂಬ ನಮ್ಮ ಹೋರಾಟ ಮುಂದುವರೆಯಲಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಶೇ.25ರಷ್ಟು ಲಸಿಕೆ ಕೊಡುವ ಕಾರ್ಯಕ್ರಮ ಮುಂದುವರೆದರೆ ಮತ್ತೆ ಕಾಳಸಂತೆ ವ್ಯವಹಾರಗಳು, ದುಬಾರಿ ಬೆಲೆಯ ಹೊರೆ, ಅನಾರೋಗ್ಯಕರ ಸ್ಪರ್ಧೆ ಏರ್ಪಡುವುದರಿಂದ, ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರವೇ ಲಸಿಕೆ ಹಣ ಪಾವತಿಸಿ ಅಲ್ಲೂ ಸಹ ಉಚಿತವಾಗಿಯೇ ಸಾರ್ವಜನಿಕರಿಗೆ ಲಸಿಕೆ ನೀಡಬೇಕು.

ಲಸಿಕೆಯೆಂಬುದು ಭಾರತದ ಪ್ರತಿಯೊಬ್ಬ ನಾಗರಿಕನ ಹಕ್ಕು. ಅದರ ಹಂಚಿಕೆಯೂ ಸಮಾನತೆಯ ಆಶಯಕ್ಕೆ ಧಕ್ಕೆಯಾಗದಂತೆ ಇರಬೇಕು. ಹೀಗಾಗಿ ಎಲ್ಲ ರಾಜ್ಯಗಳಿಗೂ ಜನಸಂಖ್ಯೆ ಆಧಾರದಲ್ಲಿ‌ ಲಸಿಕೆ ವಿತರಣೆಯಾಗಬೇಕು. ಉತ್ತರದ ರಾಜ್ಯಗಳಿಗೆ ಹೆಚ್ಚು, ದಕ್ಷಿಣದ ರಾಜ್ಯಗಳಿಗೆ ಕಡಿಮೆ ಲಸಿಕೆ ನೀಡಿದ್ದನ್ನು ನಾವು ನೋಡಿದ್ದೇವೆ. ಈ ಅನ್ಯಾಯ ಕೊನೆಗೊಳ್ಳಬೇಕು.

ಪ್ರಧಾನ ಮಂತ್ರಿಗಳು ಉಚಿತವಾಗಿ ಲಸಿಕೆ ಕೊಡುವುದಾಗಿ ಘೋಷಿಸಿದ್ದರೂ, ಎಷ್ಟು ದಿನಗಳೊಳಗೆ ಲಸಿಕೆ ಕೊಡುತ್ತೇವೆ ಎಂಬುದನ್ನು ಹೇಳಿಲ್ಲ. ಮತ್ತೊಂದು ಅಲೆ ಬಂದು ಇನ್ನಷ್ಟು ಜೀವಗಳು ಹೋಗುವಂತಾದರೆ ಉಚಿತ ಲಸಿಕೆಗೆ ಅರ್ಥವಿರುವುದಿಲ್ಲ. ಕೋವಿಡ್ ಮೂರನೇ ಅಲೆ ಅಕ್ಟೋಬರ್ ನಲ್ಲಿ ಬರುವ ಸಾಧ್ಯತೆ ಇರುವುದರಿಂದ ಅಷ್ಟರೊಳಗೆ ಎರಡೂ ಡೋಸ್ ಲಸಿಕೆ ಎಲ್ಲ ನಾಗರಿಕರಿಗೂ‌ ಸಿಗಬೇಕು.

ಪ್ರತಿ ಚುನಾವಣೆಗಳ ಸಂದರ್ಭದಲ್ಲಿ ಸ್ಥಾಪಿಸಲಾಗುವ ಮತದಾನದ ಬೂತ್ ಗಳ‌ ಮಾದರಿಯಲ್ಲೇ ಜನರಿಗೆ ಅತಿಹೆಚ್ಚು ಹತ್ತಿರದಲ್ಲೇ ಲಸಿಕೆ ಬೂತ್ ಗಳನ್ನು ಸ್ಥಾಪಿಸಬೇಕು. ಲಸಿಕೆಗಾಗಿ ನೋಂದಾವಣಿ ಪ್ರಕ್ರಿಯೆಯನ್ನು ಕನಿಷ್ಠಗೊಳಿಸಿ, ಪ್ರತಿಯೊಬ್ಬನಿಗೂ ಲಸಿಕೆ‌ ಸಿಗುವಂತೆ ನೋಡಿಕೊಳ್ಳಬೇಕು. ಲಸಿಕೆ ಜನಸಾಮಾನ್ಯರ ಬಳಿಗೇ ಹೋಗುವಂತಾಗಬೇಕು.

ಟಿ.ಎ.ನಾರಾಯಣಗೌಡ, ರಾಜ್ಯಾಧ್ಯಕ್ಷ, ಕರ್ನಾಟಕ ರಕ್ಷಣಾ‌ ವೇದಿಕೆ

Leave a Reply