ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2025 ಅಂಗೀಕಾರ

1 year ago

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕಂದಾಯ ನಿವೇಶನದಂತಹ ಅನಧಿಕೃತ ಆಸ್ತಿಗಳಿಗೆ ಪ್ರತ್ಯೇಕ ಖಾತೆ ನೀಡಿ ದಂಡ ವಿಧಿಸಿ ತೆರಿಗೆ ವ್ಯಾಪ್ತಿಗೆ ತರಲು ಅವಕಾಶ ಕಲ್ಪಿಸುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2025 ಅನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.

ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವ್ಯಾಪ್ತಿಯ ಆಸ್ತಿಗಳು ನಕ್ಷೆ ಮಂಜೂರಾತಿ ಪಡೆಯದೆ ಕಂದಾಯ ನಿವೇಶನದಲ್ಲಿ ಮತ್ತು ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳನ್ನು ಬಿ ರಿಜಿಸ್ಟರ್ ನಡಿ ಇ-ಖಾತಾ ನೀಡಲು ತೀರ್ಮಾನಿಸಲಾಗಿತ್ತು. ಇದೇ ಮಾದರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಲ್ಲಿರುವ ಆಸ್ತಿಗಳಿಗೆ ಖಾತೆ ನೀಡಿ ತೆರಿಗೆ ವ್ಯಾಪ್ತಿಗೆ ತರಲು ವಿಧೇಯಕದಲ್ಲಿ 199 ಬಿ ಮತ್ತು 199 ಸಿಗೆ ತಿದ್ದುಪಡಿ ತರಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಕಂದಾಯ ನಿವೇಶನಗಳಿಗೆ ಇ-ಖಾತೆ ನೀಡಲು ಸರ್ಕಾರ ಅವಕಾಶ ನೀಡಲಿದೆ.

ಉದ್ದೇಶಿತ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಅಧಿನಿಯಮ -2025 ಕ್ಕೆ ರಾಜ್ಯಪಾಲರು ಅಂಗೀಕಾರ ನೀಡಿದ್ದಾರೆ. ಈ ಮೂಲಕ ನಗರ, ಪಟ್ಟಣ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಜಾರಿಗೆ ಬಂದಿರುವ ಅನಧಿಕೃತ ಆಸ್ತಿಗಳಿಗೆ ಬಿ-ಖಾತಾ ಸ್ವರೂಪದ ಇ- ಖಾತೆ ನೀಡುವ ವ್ಯವಸ್ಥೆ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಣೆಯಾಗಲಿದೆ.

ಗ್ರಾಮೀಣ ಪ್ರದೇಶದ ಅನಧಿಕೃತ ನಿವೇಶನ ಕಟ್ಟಡ ಬಡಾವಣೆಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಅದರ ಮಾಲೀಕರಿಗೆ ನೆಮ್ಮದಿ ನೀಡುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ. ಅನಧಿಕೃತ ನಿವೇಶನ ಮತ್ತು ಬಡಾವಣೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ತೆರಿಗೆ ರೂಪದಲ್ಲಿ ಆರ್ಥಿಕ ಬಲವರ್ಧನೆಗೆ ಅನುಕೂಲವಾಗಲಿದೆ.

Leave a Reply