ಕರ್ನಾಟಕದ 2ನೇ ಹಂತದ ಚುನಾವಣೆ: ಘಟಾನುಘಟಿಗಳಿಂದ ನಾಮಪತ್ರ

2 years ago

ಬೆಂಗಳೂರು: ಲೋಕಸಭೆಗೆ ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆಯಿಂದ ನಡೆಯುತ್ತಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಮೇಶ್ ಜಿಗಜಿಣಗಿ ಕಾಂಗ್ರೆಸ್ಸಿನ ಗೀತಾ ಶಿವರಾಜ್ ಕುಮಾರ್, ರಾಜು ಅಲಗೂರು ಸೇರಿದಂತೆ ಘಟಾನುಘಟಿಗಳು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರ ಜೊತೆಗೂಡಿ ಮೆರವಣಿಗೆ ಮೂಲಕ ಆಗಮಿಸಿ ಅನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ತಮ್ಮ ಶಕ್ತಿ ಪ್ರದರ್ಶಿಸಲು ಯತ್ನಿಸಿದರು.

ಕಡು ಬೇಸಿಗೆಯ ಮಧ್ಯಾಹ್ನದ ಉರಿ ಬಿಸಿಲನ್ನು ಲೆಕ್ಕಿಸದೇ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಶಿವಮೊಗ್ಗಕ್ಕೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಪಾಲ್ಗೊಂಡರು. ಪತಿ, ಶಿವರಾಜಕುಮಾರ್ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಗೀತಾ, ನಂತರ ಇಲ್ಲಿನ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಪಕ್ಷದಿಂದ ಆಯೋಜಿಸಿರುವ ಮೆರವಣಿಗೆಯಲ್ಲಿ ಭಾಗಿಯಾದರು.

ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತೊಮ್ಮೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ಧಾರವಾಡದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನಾಮಪತ್ರ ಸಲ್ಲಿಸಿದರು. ಜೋಷಿ ಅವರೊಂದಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಘಟಾನುಘಟಿ ನಾಯಕರು ಜೊತೆ ನೀಡಿದರು.

ಕಾಂಗ್ರೆಸ್ ಹಾಗೂ ದಿಂಗಾಲೇಶ್ವರ ಸ್ವಾಮೀಜಿಗೆ ತಿರುಗೇಟು ನೀಡುವಂತೆ ಬಿಜೆಪಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ಜೋಷಿ ಅವರು ಧಾರವಾಡದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ನಾಮಪತ್ರ ಸಲ್ಲಿಸಿದರು.

ಹಾವೇರಿಯಿಂದ ಮೊದಲ ಬಾರಿಗೆ ಅದೃಷ್ಟ ಪಣಕ್ಕಿಟ್ಟಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸಿದರು. ಇವರಿಗೆ ಯಡಿಯೂರಪ್ಪ, ಮಾಜಿ ಸಚಿವ ಬಿ.ಸಿ.ಪಾಟೀಲ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು.

ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್, ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ನಾಮಪತ್ರ ಸಲ್ಲಿಸಿದರು. ಸೋಮವಾರ ಕೆಲವು ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ಒಂದೆರಡು ದಿನದಲ್ಲಿ ಭಾರೀ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮತ್ತೊಂದು ಬಾರಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ನಾಮಪತ್ರ ಸಲ್ಲಿಸಿದರು. ಇವರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ. ಡಿಸಿಎಂ ಡಿಕೆ ಶಿವಕುಮಾರ್, ಬೆಳಗಾವಿಯ ಶಾಸಕರು ಸಾತ್ ನೀಡಿದರು.

2ನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕಡೆಯ ದಿನವಾಗಿದ್ದು, ಶುಭ ಮುಹೂರ್ತ, ಶುಭ ಗಳಿಗೆ ನೋಡಿಕೊಂಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಕ್ಷಣ, ದಿನಗಣನೆ ಮಾಡುತ್ತಿದ್ದಾರೆ.

Leave a Reply