ಕಸ್ತೂರಿ ರಂಗನ್ ವರದಿ: ಸಿಎಂ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ: ಈಶ್ವರ್ ಖಂಡ್ರೆ

2 years ago

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆಗಸ್ಟ್ 2ರಂದು ಕಸ್ತೂರಿ ರಂಗನ್ ಸಮಿತಿ ವರದಿ ಸಂಬಂಧ ಹೊರಡಿಸಿರುವ 6ನೇ ಅಧಿಸೂಚನೆ ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲು ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದ ಸಂಪುಟ ಉಪ ಸಮಿತಿ ನಿರ್ಧರಿಸಿದೆ.

ಕಸ್ತೂರಿರಂಗನ್ ವರದಿ ಜಾರಿಗೊಳಿಸುವ ಕುರಿತು ರಾಜ್ಯದ ಮಲೆನಾಡಿನ 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಸಂಪುಟಕ್ಕೆ ಅಭಿಪ್ರಾಯ ಮಂಡಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಂಪುಟ ಉಪಸಮಿತಿ ಸಭೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶದ ಕುರಿತು ಕೇಂದ್ರದ ಅಧಿಸೂಚನೆ ಒಪ್ಪಿಕೊಂಡರೆ ಪಶ್ಚಿಮಘಟ್ಟದ ಜನರ ಬದುಕಿನ ಮೇಲೆ ಆಗಬಹುದಾದ ಪರಿಣಾಮ, ಸಾಧಕ ಬಾಧಕಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದ ಪಶ್ಚಿಮ ಘಟ್ಟದಲ್ಲಿ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವಂತೆ ಸೂಚಿಸಿದೆ. ಆದರೆ ಈಗಾಗಲೇ ರಾಜ್ಯ ಸರ್ಕಾರ ವನ್ಯಜೀವಿಧಾಮ, ಅಭಯಾರಣ್ಯ, ಹುಲಿ ಸಂರಕ್ಷಿತ ಮೀಸಲು ಸೇರಿದಂತೆ ವಿವಿಧ ಅರಣ್ಯ ಪ್ರದೇಶದಲ್ಲಿ 16632 ಚದರ ಕಿ.ಮೀ.ಪ್ರದೇಶವು ಘೋಷಿತ ಅರಣ್ಯ, ಸಂರಕ್ಷಿತ ಪ್ರದೇಶ ಮತ್ತು ಸಂರಕ್ಷಿತ ಪ್ರದೇಶಗಳಿಗೆ ಹೊಂದಿಕೊಂಡಿರುವ ಪರಿಸರ ಸೂಕ್ಷ್ಮ ವಲಯ (ಇ.ಎಸ್.ಝಡ್) ಎಂದು ಘೋಷಿಸಿದ್ದು, ಈ ಎಲ್ಲ ಪ್ರದೇಶಗಳು ಸಂರಕ್ಷಿತವಾಗಿರುತ್ತದೆ ಎಂದರು.

ಹೀಗಾಗಿ ಇದಕ್ಕಷ್ಟೇ ಸೀಮಿತಗೊಳಿಸಿ ಡಾ. ಕಸ್ತೂರಿ ರಂಗನ್ ಸಮಿತಿಯ ಶಿಫಾರಸಿನಂತೆ ಕೇಂದ್ರ ಸರ್ಕಾರ ಹೊರಡಿಸಿರುವ 6ನೇ ಅಧಿಸೂಚನೆಗೆ ಸರ್ಕಾರದ ನಿಲುವು ವ್ಯಕ್ತಪಡಿಸಲು ಸಚಿವ ಸಂಪುಟಕ್ಕೆ ಶಿಫಾರಸು ಮಾಡಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಪಶ್ಚಿಮ ಘಟ್ಟ ಪ್ರದೇಶದಲ್ಲಿ 1533 ವಸತಿ ಪ್ರದೇಶಗಳಿದ್ದು, ಇಲ್ಲಿರುವ ಜನರ ಬದುಕಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ನಿರ್ದಿಷ್ಟ ಷರತ್ತುಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರಕ್ಕೆ ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ನಿಲುವು ತಿಳಿಸಬೇಕಾಗುತ್ತದೆ ಎಂದರು.

ಅಂತಿಮವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಂತರ ಪಶ್ಚಿಮಘಟ್ಟದ 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯಪಡೆದು ಸಚಿವ ಸಂಪುಟಕ್ಕೆ ಅಂತಿಮ ಶಿಫಾರಸು ಸಲ್ಲಿಸಲು ತೀರ್ಮಾನಿಸಲಾಯಿತು.

Leave a Reply