ಕಿತ್ತೂರು ರಾಣಿ ಚೆನ್ನಮ್ಮ ಭರತ ಖಂಡದ ಸ್ವಾಭಿಮಾನದ ಪ್ರತೀಕ

6 months ago

ಕಾರವಾರ: ಕಿತ್ತೂರು ರಾಣಿ ಚೆನ್ನಮ್ಮ ಭರತ ಖಂಡದ ಸ್ವಾಭಿಮಾನದ ಪ್ರತೀಕ. ಅವರು ದೇಶಕ್ಕೆ ಸ್ವಾಭಿಮಾನದ ದಿಕ್ಸೂಚಿ ತೋರಿಸಿದ್ದಾರೆ. ಈ ದಿಕ್ಸೂಚಿಯಡಿ ನಾವೆಲ್ಲರೂ ನಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಈಗ 200 ವರ್ಷ ಆಗಿದೆ. ಚೆನ್ನಮ್ಮ ರವರ ಶೌರ್ಯ, ಧೈರ್ಯ, ಹೋರಾಟ, ದೇಶಭಕ್ತಿ ಮತ್ತು ಜೀವನ ಸಂದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಕರೆ ನೀಡಿದರು.

ತನ್ನ ಸಾಮ್ರಾಜ್ಯದ ಜನರನ್ನು ಒಗ್ಗೂಡಿಸಿ, ಸೈನ್ಯ ಕಟ್ಟಿ, ಬ್ರಿಟಿಷರ ವಿರುದ್ಧ ಹೋರಾಡಿದ ರಾಣಿ ಚೆನ್ನಮ್ಮ, ಪರಿಸ್ಥಿತಿ ಬಂದರೆ ದೇಶಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ದವಾಗಿರಬೇಕು ಎಂಬ ಸಂದೇಶವನ್ನು ನೀಡಿದ ವೀರ ರಾಣಿ. ಯುವಪೀಳಿಗೆ ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಿಕ್ಕ ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಯಮುನಾ ಗಾಂವಕರ, ಕಿತ್ತೂರು ರಾಣಿ ಚೆನ್ನಮ್ಮ ಅವರು ಕತ್ತಿವರಸೆ, ಬಿಲ್ಲುಗಾರಿಕೆಯ ತರಬೇತಿ ಪಡೆದಿದ್ದರು. ನಿರಂತರವಾದ ಒಳ್ಳೆಯ ಅಭ್ಯಾಸಗಳು ನಮ್ಮನ್ನು ಉತ್ತಮಗೊಳಿಸುತ್ತದೆ. ಕಿತ್ತೂರು ರಾಣಿ ಚೆನ್ನಮ್ಮ ಅವರು ಸಾಹಸ, ಶೌರ್ಯ, ಧೈರ್ಯ, ದೇಶಪ್ರೇಮದ ಪ್ರತಿರೂಪ. ಅವರಂತೆ ಎಲ್ಲರೂ ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸತೀಶ ನಾಯ್ಕ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ರಾಮಾ ನಾಯ್ಕ, ಗೌರವ ಕಾರ್ಯದರ್ಶಿ ಮನೋಜ, ಕಾಲೇಜಿನ ಉಪನ್ಯಾಸಕರಾದ ಮಂಜುನಾಥ ಗುನಗಾ, ಸತೀಶ, ವಿದ್ಯಾರ್ಥಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ಶಿಕ್ಷಕಿ ವನಿತಾ ಶೇಟ ಮತ್ತಿತರರು ಉಪಸ್ಥಿತರಿದ್ದರು.

Leave a Reply