ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ಪರಿಶೀಲನೆ ನಡೆಸಿದ ಕೆ.ಎನ್.ಫಣೀಂದ್ರ

11 months ago

ಹಾಸನ: ಉಪ ಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಅವರು ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.



ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಅಗತ್ಯ ಪ್ರಮಾಣದಲ್ಲಿ ತರಕಾರಿ ಮತ್ತು ಬೇಳೆಕಾಳುಗಳನ್ನು ಬಳಸಬೇಕು. ಜೊತೆಗೆ ಗುಣಮಟ್ಟ ಹಾಗೂ ರುಚಿಕರವಾಗಿ ಆಹಾರ ಸಿದ್ಧಪಡಿಸಲು ನಿಗಾ ವಹಿಸಿ ಕ್ರಮಕೈಗೊಳ್ಳಲು ಸೂಚಿಸಿದರು.

ವಾರಕ್ಕೊಮ್ಮೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ವಸತಿ ನಿಲಯಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸುವುದರ ಜೊತೆಗೆ ಮಕ್ಕಳೊಂದಿಗೆ ಊಟ ಮಾಡಲು ಸೂಚಿಸಿದರು.

ಮಕ್ಕಳ ಕುರಿತು ಕಾಳಜಿವಹಿಸಿ ಕರ್ತವ್ಯ ನಿರ್ವಹಿಸದ ಕಾರಣ ವಸತಿ ನಿಲಯದ ನಿಲಯ ಪಾಲಕರು ಹಾಗೂ ಅಡುಗೆ ಸಿಬ್ಬಂದಿಗಳನ್ನು ಬದಲಾವಣೆ ಮಾಡುವಂತೆ ಸೂಚಿಸಿದರು.

ವಿದ್ಯಾರ್ಥಿ ನಿಲಯದಲ್ಲಿ 20 ಕಂಪ್ಯೂಟರ್‌ಗಳಿದ್ದು ಅವುಗಳನ್ನು ಬಳಕೆ ಮಾಡಲು ನೀಡುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಸಮಸ್ಯೆಗೆ ತಿಳಿಸಿದ್ದಾಗ ಕೂಡಲೇ ಇಂಟರ್ ನೆಟ್ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಬಳಕೆಗೆ ನೀಡಲು ತಿಳಿಸಿದರು.

ವಿದ್ಯಾರ್ಥಿನಿಯರ ಕೋರಿಕೆಗೆ ಮೇರಿಗೆ ವಸತಿ ನಿಲಯದ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವತ್ತಿರುವ ಕೋರ್ಸ್ಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಒದಗಿಸುವಂತೆ ಸೂಚಿಸಿದರು.

ವಿದ್ಯಾರ್ಥಿನಿಯರು ಸರ್ಕಾರದ ಈ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ತಮ್ಮ ಗುರಿ ಸಾಧಿಸಿ, ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ಸಲಹೆ ನೀಡಿದರು.

ಈ ವೇಳೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಾಕ್ಷಾಯಿಣಿ ಬಿ.ಕೆ., ಸಿವಿಲ್ ನ್ಯಾಯಾಧೀಶರು ಹಾಗೂ ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ ಪಾಟೀಲ್, ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಹಾಗೂ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸ್ನೇಹ ಉಪಸ್ಥಿತರಿದ್ದರು.

Leave a Reply