ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷ ನೇಮಕ ಸಾಧ್ಯತೆ

1 year ago

ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ಮಹತ್ವದ ವಿದ್ಯಮಾನಗಳು ನಡೆಯುತ್ತಿದ್ದು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ 5 ವರ್ಷಗಳ ಅವಧಿ ಪೂರ್ಣಗೊಳಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್ ಇದೀಗ ಪಕ್ಷದ ಅಧ್ಯಕ್ಷ ಸ್ಥಾನ ತೊರೆಯಲು ಸಜ್ಜಾಗಿದ್ದಾರೆ.

ಎರಡು ಅವಧಿಗೆ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿರುವ ಡಿ ಕೆ ಶಿವಕುಮಾರ್ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಯಶಸ್ಸು ತಂದುಕೊಟ್ಟಿದ್ದಾರೆ. ಸದ್ಯ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿರುವ ಅವರು ತಮ್ಮನ್ನು ಪಕ್ಷದ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಕೋರಿದ್ದಾರೆ.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರ ಸಲಹೆ ಮೇರೆಗೆ ಇದೀಗ ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುತ್ತಿದ್ದು, ಇವರಿಂದ ತೆರವಾಗುವ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬ ಕುರಿತು ಹೈಕಮಾಂಡ್ ಚರ್ಚೆ ಆರಂಭಿಸಿದೆ.

ಡಿ ಕೆ ಶಿವಕುಮಾರ್ ಅವರ ಜೊತೆಯಲ್ಲಿ ಪಕ್ಷದ ಕಾರ್ಯಾಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿರುವ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಈಶ್ವರ ಖಂಡ್ರೆ ಅವರ ಹೆಸರು ಈ ಹುದ್ದೆಗೆ ಪ್ರಮುಖವಾಗಿ ಕೇಳಿ ಬರುತ್ತಿದೆ. ಹೈಕಮಾಂಡ್ ಇವರ ಜೊತೆ ಚರ್ಚೆ ಕೂಡ ಮಾಡಿದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಸಿದ್ದರಾಮಯ್ಯ ಕೂಡ ಈಶ್ವರ ಖಂಡ್ರೆ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೇಮಿಸಲು ಒಲವು ಹೊಂದಿದ್ದಾರೆ ಎನ್ನಲಾಗಿದೆ. ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಅಧ್ಯಕ್ಷರಾಗಿರುವ ಈಶ್ವರ ಖಂಡ್ರೆ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಭಾವಿ ನಾಯಕರಾಗಿದ್ದಾರೆ. ಜೊತೆಗೆ ಪ್ರಭಾವಿ ಸಮುದಾಯದ ಮುಖಂಡನಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಇವರಿಗೆ ನೀಡುವುದು ಸಿದ್ದರಾಮಯ್ಯ ಹೈಕಮಾಂಡ್ ಗೆ ವರದಿ ನೀಡಿದ್ದಾರೆ ಎನ್ನಲಾಗಿದೆ. 

ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಈಶ್ವರ ಖಂಡ್ರೆ ಅವರನ್ನು ಪಕ್ಷದ ಕಚೇರಿಗೆ ಕರೆಸಿಕೊಂಡು ಈ ಕುರಿತಂತೆ ಮಾತುಕತೆ ನಡೆಸಿದ್ದಾರೆ. ತಮ್ಮ ಪುತ್ರ ಹಾಗೂ ಬೀದರ್ ಸಂಸದ ಸಾಗರ್ ಖಂಡ್ರೆ ಜೊತೆಗೆ ವೇಣುಗೋಪಾಲ್ ಹಾಗೂ ಹೈಕಮಾಂಡ್ ನ ಇತರೆ ನಾಯಕರನ್ನು ಭೇಟಿ ಮಾಡಿರುವ ಈಶ್ವರ ಖಂಡ್ರೆ, ಸದ್ಯ ಅರಣ್ಯ ಸಚಿವರಾಗಿದ್ದು ಇದರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಿದರೆ ನಿಭಾಯಿಸಲು ಸಿದ್ಧ ಎಂದು ಹೇಳಿರುವುದಾಗಿ ಗೊತ್ತಾಗಿದೆ. 

ಹೈಕಮಾಂಡ್ ಖಂಡ್ರೆ ಅವರಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಲು ಸಹಮತ ಹೊಂದಿದೆ. ಆದರೆ ಅದರ ಜೊತೆಗೆ ಸಚಿವ ಸ್ಥಾನದಲ್ಲೂ ಮುಂದುವರಿಸಬೇಕು ಎನ್ನುವ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಕುರಿತಂತೆ ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದು ಖಂಡ್ರೆ ಅವರಿಗೆ ತಿಳಿಸಿರುವುದಾಗಿ ಗೊತ್ತಾಗಿದೆ.

ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎನ್ನುವ ನಿಯಮವನ್ನು ಪಾಲಿಸಲಾಗುತ್ತಿದೆ. ದೇಶದ ಎಲ್ಲಾ ಕಡೆಯಲ್ಲೂ ಇದೇ ನಿಯಮವಿದೆ. ಆದರೆ 2023ರ ವಿಧಾನಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕಕ್ಕೆ ಸೀಮಿತಗೊಳಿಸಿ ಕೊಂಚ ರಿಯಾಯಿತಿ ನೀಡಲಾಗಿತ್ತು. ಹಾಗಾಗಿ ಡಿಕೆ ಶಿವಕುಮಾರ್ ಡಿಸಿಎಂ ಮತ್ತು ಪಕ್ಷದ ಅಧ್ಯಕ್ಷರಾಗಿ ಮುಂದುವರೆದಿದ್ದರು. ಈಗ ಇದನ್ನು ಮುಂದುವರಿಸಲು ಸಾಧ್ಯವಿಲ್ಲ. ಹೀಗಾಗಿ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಪಕ್ಷದ ನೇತೃತ್ವದಲ್ಲಿ ಅಸ್ತಿತ್ವಕ್ಕೆ ತರುವಂತೆ ಖಂಡ್ರೆ ಅವರಿಗೆ ವೇಣುಗೋಪಾಲ್ ಹೇಳಿದ್ದಾರೆ ಎನ್ನಲಾಗಿದೆ.

ಸತೀಶ್ ಜಾರಕಿಹೊಳಿ ಮನವಿ: ಈ ನಡುವೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರು ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿಂದೆ ಪಕ್ಷದ ಕಾರ್ಯಾಧ್ಯಕ್ಷನಾಗಿ ಕೆಲಸ ಮಾಡಿರುವ ಅನುಭವವಿದೆ. ಹೀಗಾಗಿ ತಮಗೆ ಈ ಹುದ್ದೆಯನ್ನು ನೀಡಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಅದಕ್ಕೆ ಅವಕಾಶ ನೀಡುವಂತೆ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರು ಮತ್ತು ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.

ಆದರೆ ಸತೀಶ್ ಜಾರಕಿಹೊಳಿ ಅವರು ವಾಲ್ಮೀಕಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸದ್ಯ ಕಾಂಗ್ರೆಸ್ ನ ಬಗ್ಗೆ ರಾಜ್ಯದ ಪ್ರಭಾವಿ ಸಮುದಾಯಗಳು ಅಷ್ಟೊಂದು ವಿಶ್ವಾಸ ಹೊಂದಿಲ್ಲ. ಹೀಗಾಗಿ ಈ ಸಮುದಾಯಗಳ ವಿಶ್ವಾಸವನ್ನು ಗಿಟ್ಟಿಸುವ ದೃಷ್ಟಿಯಿಂದ ಲಿಂಗಾಯಿತ ಸಮುದಾಯಕ್ಕೆ ಹುದ್ದೆ ನೀಡಬೇಕು ಎಂಬ ವಾದವನ್ನು ಸಿದ್ದರಾಮಯ್ಯ ಮಂಡಿಸಿದ್ದು, ಸತೀಶ್ ಜಾರಕಿಹೊಳಿ ಅವರ ಬೇಡಿಕೆಗೆ ಸಹಮತ ವ್ಯಕ್ತಪಡಿಸಲು ಹೈಕಮಾಂಡ್ ಆಸಕ್ತಿ ಹೊಂದಿರುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಇದೆ ವೇಳೆ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರು ತಾವು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ತಮಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿದರೆ ಅದನ್ನು ನಿಭಾಯಿಸಲು ಸಿದ್ಧನಿದ್ದೇನೆ. ಆದರೆ ಇದರ ಜೊತೆಗೆ ಸಚಿವ ಸ್ಥಾನದಲ್ಲೂ ಮುಂದುವರಿಸಬೇಕು ಎಂದು ಮಾನವಿ ಮಾಡಿದ್ದು, ಹೈಕಮಾಂಡ್ ಇದರ ಬಗ್ಗೆ ಅಷ್ಟೊಂದು ಆಸಕ್ತಿ ಹೊಂದಿಲ್ಲ ಎನ್ನಲಾಗುತ್ತಿದೆ.

Leave a Reply