ಎಸಿ-ಡಿಸಿ ಕಚೇರಿಗಳಲ್ಲೂ ಭೂ ದಾಖಲೆ ಡಿಜಿಟಲೀಕರಿಸುವ ಭೂ ಸುರಕ್ಷಾ ಯೋಜನೆಗೆ ಚಾಲನೆ

5 months ago

ಚಾಲನೆ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

• 70ತಾಲೂಕುಗಳಲ್ಲಿ ಸ್ಕ್ಯಾನಿಂಗ್ ಕೆಲಸ ಸಂಪೂರ್ಣ
• ರಾಜ್ಯಾದ್ಯಂತ 63 ಕೋಟಿ ಪುಟಗಳ ಸ್ಕ್ಯಾನಿಂಗ್
• ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಎಲ್ಲವೂ ಸ್ಕ್ಯಾನ್
• ಸರ್ವೇ-ನೋಂದಣಿ ಇಲಾಖೆಯ ಭೂ ದಾಖಲೆಗಳೂ ಸ್ಕ್ಯಾನ್

ಬೆಂಗಳೂರು: ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲಾ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳ ಸ್ಕ್ಯಾನಿಂಗ್ಗೂ ಇಂದಿನಿಂದ ಚಾಲನೆ ನೀಡಲಾಗಿದೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಬೆಂಗಳೂರು ಉತ್ತರ ಮತ್ತು ದಕ್ಷಿಣ ಉಪವಿಭಾಗಾಧಿಕಾರಿಗಳ ಕಚೇರಿಯ ಕಂದಾಯ ದಾಖಲಾತಿಗಳ ಸ್ಕ್ಯಾನಿಂಗ್ ಮತ್ತು ಡಿಜಿಟಲೀಕರಣಗೊಳಿಸುವ ಭೂ ಸುರಕ್ಷಾ ಯೋಜನೆಯನ್ನು ಬೆಂಗಳೂರು ಕಂದಾಯ ಭವನದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಭೂ ದಾಖಲೆಗಳಲ್ಲಿ  ನಕಲಿ ಎಂಟ್ರಿಗಳು ಹಾಗೂ ಸುಳ್ಳು ದಾಖಲೆಗಳ ಸೃಷ್ಟಿಯನ್ನು ತಡೆಯುವ ಸಲುವಾಗಿ ಭೂ ದಾಖಲೆಗಳ ಡಿಜಿಟಲೀಕರಣ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕಂದಾಯ ಇಲಾಖೆ ಎಲ್ಲಾ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಶಾಶ್ವತವಾಗಿ ಸಂರಕ್ಷಿಸಲಾಗುತ್ತಿದೆ. ಈ ಅಭಿಯಾನಕ್ಕೆ ಕಳೆದ ಜನವರಿಯಲ್ಲಿ ಚಾಲನೆ ನೀಡಲಾಗಿತ್ತು. ಇದೀಗ 240 ತಾಲೂಕುಗಳ  ಪೈಕಿ 70 ತಾಲೂಕುಗಳಲ್ಲಿ ಗಣಕೀಕರಣ ಸಂಪೂರ್ಣವಾಗಿ ಮುಗಿಸಲಾಗಿದೆ. ರಾಜ್ಯಾದ್ಯಂತ 100 ಕೋಟಿ ಪುಟಗಳಷ್ಟು ಭೂ ದಾಖಲೆ ಇದ್ದು, 62 ಕೋಟಿ ಪುಟಗಳನ್ನು ಈಗಾಗಲೇ ಸ್ಕ್ಯಾನ್ ಮಾಡಿ ಮುಗಿಸಲಾಗಿದೆ. ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಎಲ್ಲಾ ಪುಟಗಳನ್ನೂ ಸಂಪೂರ್ಣ ಸ್ಕ್ಯಾನ್ ಮಾಡಲಾಗುವುದು ಎಂದರು.

ತಾಲೂಕು ಕಚೇರಿಗಳ ಮೂಲ ದಾಖಲೆ ಸ್ಕ್ಯಾನಿಂಗ್ ಪ್ರಗತಿಯ ಹಾದಿಯಲ್ಲಿರುವಾಗಲೇ ಭೂ ಸುರಕ್ಷಾ ಯೋಜನೆಯ ಅಡಿಯಲ್ಲಿ ಉಪ ವಿಭಾಗ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡುವ ಕೆಲಸಕ್ಕೂ ಮುಂದಾಗಿ ಈಗಾಗಲೇ ಕಳೆದ ತಿಂಗಳಿನಿಂದ ಕೆಲಸ ಆರಂಭಿಸಿದ್ದು, ಇಂದು ಎಸಿ ಕಚೇರಿಗಳ ಸ್ಕ್ಯಾನಿಂಗ್ ಗೆ ಸಾಂಕೇತಿಕವಾಗಿ ಚಾಲನೆ ನೀಡುವ ಮೂಲಕ ಇಡೀ ರಾಜ್ಯಾದ್ಯಂತ ಎಸಿ ಡಿಸಿ ಕಚೇರಿಗಳ ಕಂದಾಯ ದಾಖಲೆಗಳ ಗಣಕೀಕರಣಕ್ಕೆ ಸಾಂಕೇತಿಕ ಚಾಲನೆ ನೀಡಲಾಗಿದೆ ಎಂದರು.

ಈ ಹಿಂದೆ  ಹೊರ ಬಂದಿರುವ  ನಕಲಿ  ದಾಖಲೆಗಳ ಸೃಷ್ಟಿ ಪ್ರಕರಣಗಳನ್ನು  ಗಂಭೀರವಾಗಿ  ಪರಿಗಣಿಸಿದ್ದೇವೆ. ಪ್ರತಿಯೊಂದು ಅನುಮಾನಾಸ್ಪದ ಪ್ರಕರಣಗಳನ್ನು ಕುಲಂಕೂಷವಾಗಿ ಪರಿಶೀಲಿಸಿ  ಅಗತ್ಯವಿದ್ದಲ್ಲಿ  ಫೋರೆನ್ಸಿಕ್ ಲ್ಯಾಬ್ ಗೆ ಕಳಿಸಿ  ದಾಖಲೆಗಳ ನೈಜತೆ ಕುರಿತು  ವರದಿಯನ್ನು  ಪಡೆದು  ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ಸ್ಕ್ಯಾನಿಂಗ್ ಮೂಲಕ  ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ  ರಕ್ಷಿಸುವುದರಿಂದ ಭವಿಷ್ಯದಲ್ಲಿ  ನಕಲಿ ದಾಖಲೆಗಳ ಸೃಷ್ಟಿಗೆ  ಕಡಿವಾಣ  ಹಾಕಿದಂತಾಗುವುದು. ಕಂದಾಯ ದಾಖಲೆಗಳು ಅಥವಾ  ಕಡತಗಳು ಕಳುವಾಗುವುದನ್ನು  ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಸಾರ್ವಜನಿಕರ ಕೈಬೆರಳ ತುದಿಯಲ್ಲೇ ಅವರ ಜಮೀನಿನ ದಾಖಲೆ ಸುಲಭವಾಗಿ  ಲಭ್ಯವಾಗಿಸುವುದೇ ನಮ್ಮ ಮೂಲ  ಉದ್ದೇಶ. ಇಂದು ನಮ್ಮ ಉದ್ದೇಶ ಯಶಸ್ವಿಯಾಗಿದ್ದು, ಸಾರ್ವಜನಿಕರು ಭೂ ಸುರಕ್ಷಾ ವೆಬ್ ಸೈಟ್ ಮೂಲಕ   ತಮ್ಮ ಮನೆಯಲ್ಲಿದ್ದೇ ಭೂ  ದಾಖಲೆಗಳನ್ನು ಪಡೆಯಬಹುದಾಗಿದೆ. ಈಗಾಗಲೇ ಸ್ಕ್ಯಾನಿಂಗ್ ಆಗಿರುವ ಎಲ್ಲಾ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯವಿದ್ದು, 36,36,596 ಪುಟಗಳನ್ನು ಸಾರ್ವಜನಿಕರು ಆನ್ಲೈನ್ ಮೂಲಕ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನೂ ಮುಂದೆ  ದಾಖಲೆಗಳನ್ನು  ಸ್ಕ್ಯಾನ್ ಮಾಡುವಾಗ ಅನುಮಾನಾಸ್ಪದವಾದ ದಾಖಲೆಗಳನ್ನು ಫೋರೆನ್ಸಿಕ್ ಮೂಲಕ ತನಿಖೆ ಮಾಡಿಸಿ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದ ಎಲ್ಲಾ ಎಸಿ, ಡಿಸಿ ಕಚೇರಿಯ ದಾಖಲೆಗಳ ಸ್ಕ್ಯಾನಿಂಗ್  ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳಲ್ಲಿ ಮುಗಿಸಲಾಗುವುದು. ಸರ್ವೇ ಇಲಾಖೆ ಹಾಗೂ ನೋಂದಣಿ ಇಲಾಖೆಯಲ್ಲೂ ಸ್ಕ್ಯಾನಿಂಗ್ ಕೆಲಸಗಳು ಬಹುತೇಕ ಆರಂಭವಾಗಿದ್ದು, ಈ ಎಲ್ಲಾ ಕೆಲಸಗಳಿಗೆ ರೂ.150 ಕೋಟಿ ಅನುದಾನ ಇದೆ. ಈಗಾಗಲೇ ರೂ.100 ಕೋಟಿ ಖರ್ಚು ಮಾಡಲಾಗಿದೆ ಎಂದರು

ಆನೇಕಲ್, ದೇವನಹಳ್ಳಿ ಸೇರಿದಂತೆ ಕೆಲವು ತಾಲೂಕುಗಳಲ್ಲಿ ನಕಲಿ ದಾಖಲೆಗಳನ್ನೂ ಸ್ಕ್ಯಾನ್ ಮಾಡಿರುವ ದೂರು ಇದ್ದು 16 ಜನರ ಮೇಲೆ ಎಫ್ಐಆರ್ ಮಾಡಲಾಗಿದೆ. ಇಂತಹ ಕೆಲಸಕ್ಕೂ ನಿಯಂತ್ರಣ ಹೇರಲಾಗುತ್ತಿದೆ. ಆದರೆ, ಸ್ಕ್ಯಾನಿಂಗ್ ನಂತರ ಯಾವುದೇ ಫ್ರಾಡ್ಗೆ ಅವಕಾಶ ಇಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಠಾರಿಯಾ, ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

Leave a Reply