ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ: ಕೃಷ್ಣ ಬೈರೇಗೌಡ

2 years ago

ಬೆಂಗಳೂರು: ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು, ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಾಗೂ ಕಂದಾಯ ಆಯುಕ್ತಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೊಸದಾಗಿ ಆಯ್ಕೆಯಾದ 1,000 ಪರವಾನಗಿ ಭೂಮಾಪಕರುಗಳಿಗೆ ಪರವಾನಗಿ ಪ್ರಮಾಣ ಪತ್ರ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಅವರು, ಈ ಸಂಬಂಧ ನಮ್ಮ ಗ್ರಾಮಾಧಿಕಾರಿಗಳು 19 ಲಕ್ಷ ರೈತರನ್ನು ಸಂಪರ್ಕಿಸಿದ್ದಾರೆ. ಈ ಪೈಕಿ 10 ಲಕ್ಷ ರೈತರ ಆರ್‌ಟಿಸಿಗೆ ಆಧಾರ್ ಲಿಂಕ್ ಮಾಡಲಾಗಿದೆ. ಅದರಲ್ಲಿ 6 ಲಕ್ಷ ಪಹಣಿಗಳಿಗೆ ಸಂಬಂಧಿಸಿದಂತೆ ಅದರ ಖಾತೆದಾರರು ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಹೆಸರಿನಲ್ಲಿ ಪಹಣಿಗಳು ಇದ್ದರೆ ದುರಪಯೋಗ ಆಗುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಆಧಾರ್ ಜೋಡಣೆ ಮಾಡುವುದರಿಂದ ಯಾರದ್ದೋ ಆಸ್ತಿ ಮತ್ತಾರೋ ನೋಂದಣಿ ಮಾಡಿಸಿಕೊಳ್ಳುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹದು ಎಂದರು.

ಆಸ್ತಿಗಳ ನೋಂದಣಿ ಸಮಯದಲ್ಲಿಯೂ ಸಹ ಆಧಾರ್ ಕಡ್ಡಾಯವಾಗಿ ಕೇಳಲಾಗುತ್ತದೆ. ಆಗ ಆಧಾರ್ ಸಂಖ್ಯೆ ಕೊಡದಿದ್ದರೆ ಅದು ಅನುಮಾನಕ್ಕೆ ಕಾರಣವಾಗಿ ಅದರ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ತದನಂತರ ನೋಂದಣಿ ಮಾಡಿದರೆ ಒಂದಷ್ಟು ಅಕ್ರಮಗಳನ್ನು ತಡೆದಂತಾಗುತ್ತದೆ ಎಂದರು.

ಲೋಕಸಭಾ ಚುನಾವಣೆ ಘೋಷಣೆಯಾದರೂ ಸಹ ಅದರ ಮಧ್ಯೆಯೂ ಆಧಾರ್ ಜೋಡಣೆ ಕಾರ್ಯ ಮಾಡಬೇಕು ಎಂದು ಗ್ರಾಮಾಧಿಕಾರಿಗಳಿಗೆ ಸೂಚಿಸಲಾಗಿದೆ. ನಮ್ಮ ಗ್ರಾಮಾಧಿಕಾರಿಗಳೇ ಮನೆ ಮನೆಗೆ ತೆರಳಿ ಪಹಣಿ ಮತ್ತು ಆಧಾರ್ ಜೋಡಣೆ ಕಾರ್ಯ ಮಾಡುತ್ತಾರೆ. ಸಾರ್ವಜನಿಕರೂ ಸಹ ತಮ್ಮ ಸಮೀಪದ ಕಂದಾಯ ಕಚೇರಿಗೆ ತೆರಳಿ ಆಧಾರ್ ಜೋಡಣೆ ಮಾಡಿಸಲು ಸಹ ಅವಕಾಶ ನೀಡಲಾಗಿದೆ ಎಂದರು.

Leave a Reply