ದಾವಣಗೆರೆ: ದತ್ತು ಸ್ವೀಕಾರ ಕೇಂದ್ರದಲ್ಲಿ ತಾಯಿಗೆ ಬೇಡವಾದ ಶಿಶುವನ್ನು ತಾಯಿಗಿಂತಲೂ ಮಿಗಿಲಾಗಿ ಆರೈಕೆ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತದೆ. ಸಾರ್ವಜನಿಕರು ಈ ಮಕ್ಕಳೊಂದಿಗೆ ಹುಟ್ಟುಹಬ್ಬ, ಹೊಸ ವರ್ಷವನ್ನು ಆಚರಿಸಿಕೊಳ್ಳಿ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶೇಷ ದತ್ತು ಸಂಸ್ಥೆ ಅಮೂಲ್ಯ(ಜಿ) ಕೇಂದ್ರ ಘಟಕ-2, ಮತ್ತು ಫಿಜಿಯೋತೆರೆಪಿ ಕೇಂದ್ರವನ್ನು ಉದ್ಘಾಟಿಸಿ ಮಾತಾನಾಡಿದರು.
ಎಲ್ಲೊ ಬಿಟ್ಟು ಹೋದ ಕೂಸು, ಹೆತ್ತ ತಾಯಿಗೇ ಬೇಡವಾದ ಶಿಶುಗಳನ್ನು ಮಕ್ಕಳ ದತ್ತು ಸ್ವೀಕಾರ ಕೇಂದ್ರದಲ್ಲಿ ತಾಯಿಯ ಕರುಳ ಬಳ್ಳಿಯಂತೆ ನೋಡಿಕೊಳ್ಳಲಾಗುತ್ತದೆ. ಎರಡು ದಿನದ ನವಜಾತ ಶಿಶುವಿನಿಂದ ಎರಡು ತಿಂಗಳವರೆಗಿನ ಶಿಶುಗಳು ದತ್ತು ಕೇಂದ್ರಕ್ಕೆ ತಲುಪುತ್ತವೆ ಎಂದರು.
ಕೇಂದ್ರದಲ್ಲಿ 10 ಮಕ್ಕಳನ್ನು ಪೋಷಿಸಲು ಮಾತ್ರ ಅವಕಾಶವಿದೆ. ಆದರೆ ಈಗ 27 ಮಕ್ಕಳು ದಾಖಲಾಗಿವೆ. ಇಂದು ಸುಮಾರು 2 ತಿಂಗಳಿಂದ 3 ತಿಂಗಳ 5 ಮಗುವಿಗೆ ನಾಮಕರಣ ಮಾಡಲಾಯಿತು. ವಾತ್ಸಲ್ಯಾ ಸದನಕ್ಕಾಗಿ ಸ್ಥಳದ ಕುರಿತು ಚರ್ಚೆಯನ್ನು ಕೂಡ ಮಾಡಲಾಗಿದೆ.
ಕೇಂದ್ರದಲ್ಲಿನ ಸೌಲಭ್ಯಗಳು: ನವಜಾತ ಶಿಶುಗಳನ್ನು ಎಷ್ಟೇ ನಿಗಾವಹಿಸಿ ಪೋಷಣೆ ಮಾಡಿದರೂ ಅನಾರೋಗ್ಯದಿಂದ ಶಿಶುಗಳು ಬಳಲುತ್ತವೆ. ಈ ದತ್ತು ಕೇಂದ್ರದಲ್ಲಿ ಅಷ್ಟೆ ಸುರಕ್ಷಿತವಾಗಿ ಪೋಷಿಸಲಾಗುತ್ತದೆ. ಸೊಳ್ಳೆಗಳ ತಡೆಗೆ ಮೆಸ್, ಹೊಸ ತೊಟ್ಟಿಲು, ಮಕ್ಕಳ ಬಟ್ಟೆ ತೊಳೆಯಲು ವಾಷಿಂಗ್ ಮೆಶಿನ್ಗಳಿವೆ. ಆಯಾಗಳು ಮಕ್ಕಳನ್ನು ಹೇಗೆ ಪೋಷಿಸುತ್ತಾರೆ ಎಂದು ನಿಗಾ ವಹಿಸಲು ಸಿಸಿ ಕ್ಯಾಮೆರಾ ಅಳವಡಿಸಿದೆ.
ಇಲ್ಲಿ ಎಂಟು ಜನ ಆಯಾಗಳು, ಇಬ್ಬರು ಸಾಮಾಜಿಕ ಕಾರ್ಯಕರ್ತ, ಇಬ್ಬರು ಸಂಯೋಜಕರು, ಒಬ್ಬ ನರ್ಸ್ ಸೇರಿ ಹದಿಮೂರು ಸಿಬ್ಬಂದಿ ದತ್ತು ಸ್ವೀಕಾರ ಕೇಂದ್ರದಲ್ಲಿದ್ದಾರೆ. ಆಯಾಗಳು ನಾಲ್ಕು ತಾಸಿಗೆ ಒಬ್ಬರಂತೆ ಮೂರು ಪಾಳಿಯಲ್ಲಿ ತಾಯಿಯಂತೆ ಕೆಲಸ ಮಾಡುತ್ತಿದ್ದಾರೆ.
ದತ್ತು ವಿಧಾನ: ಯಾವುದೇ ಮಗು ಕೇಂದ್ರಕ್ಕೆ ಬಂದ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ದಾಖಲು ಮಾಡಲಾಗುತ್ತದೆ. ಮಗು ಕುರಿತು ಪತ್ರಿಕೆಗಳಿಗೆ ಮಾಹಿತಿ ನೀಡಲಾಗುತ್ತದೆ. ಆನಂತರ ವಾರಸುದಾರರಿಗಾಗಿ ಎರಡು ತಿಂಗಳು ಕಾಯಲಾಗುತ್ತದೆ. ಯಾರೂ ಬರದಿದ್ದರೆ ಮಕ್ಕಳ ಸಂರಕ್ಷಣಾ ಸಮಿತಿಯಿಂದ ಈ ಮಗು ಅನಾಥ ಎಂದು ಅನುಮತಿ ಪಡೆದು ದತ್ತು ಸ್ವೀಕಾರ ಕೇಂದ್ರಕ್ಕೆ ಪಡೆಯಲಾಗುತ್ತದೆ. ನಂತರ ಮಗುವಿನ ವಿವರ ಆನ್ಲೈನ್ಗೆ ಹಾಕಲಾಗುತ್ತದೆ. ಆನ್ಲೈನ್ನಲ್ಲಿಯೇ ದತ್ತು ಪಡೆಯ ಬಯಸುವ ಪೋಷಕರು ಕೂಡ ತಮ್ಮ ಮಾಹಿತಿ ನಮೂದಿಸುತ್ತಾರೆ. ಅನಂತರ ಪೋಷಕರ ಹಿನ್ನೆಲೆ, ಉದ್ದೇಶಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ. ಎಲ್ಲವೂ ಸರಿಯೆಂದು ಕಂಡುಬಂದಲ್ಲಿ ಸಾಕುವ ಪೋಷಕರಿಗೆ ಮಗುವನ್ನು ದತ್ತು ನೀಡಲಾಗುತ್ತದೆ. ಆದರೆ ಒಂದು ಮಗು ದತ್ತು ಪಡೆಯಲು ಕನಿಷ್ಠ ಒಂದು ವರ್ಷ ಬೇಕಾಗುತ್ತದೆ. ಹೀಗೆ ಸ್ವೀಕರಿಸಿದ ನಂತರ ಎರಡು ವರ್ಷದವರೆಗೂ ದತ್ತು ಕೇಂದ್ರ ಮಗುವಿನ ಪೋಷಣೆ ಕುರಿತು ಕಾಲ ಕಾಲಕ್ಕೆ ವರದಿ ಸಂಗ್ರಹಿಸುತ್ತದೆ.
ದಾವಣಗೆರೆಯಲ್ಲಿ 2012ರಿಂದ ದತ್ತು ಸ್ವೀಕಾರ ಕೇಂದ್ರ ಆರಂಭವಾಗಿದ್ದು, ಇಲ್ಲಿಯವರೆಗೆ ಸುಮಾರು 212 ಮಕ್ಕಳನ್ನು ದಾಖಲಿಸಿಕೊಂಡಿದ್ದಾರೆ. ಈವರೆಗೆ 73 ಮಕ್ಕಳನ್ನು ದತ್ತು ನೀಡಲಾಗಿದೆ. ಅದರಲ್ಲಿ 64 ಮಕ್ಕಳ ಸ್ವದೇಶಿ ದಂಪತಿ, 9 ಮಕ್ಕಳು ವಿದೇಶದ ದಂಪತಿ ದತ್ತು ಸ್ವಿಕರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಅಧಿಕಾರಿ ಸುರೇಶ.ಬಿ.ಇಟ್ನಾಳ್, ಜಿಲ್ಲಾ ಸರ್ಜನ್ ಡಾ. ನಾಗೇಂದ್ರಪ್ಪ, ಡಿಹೆಚ್ಓ ಷಣ್ಮುಖಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಮೊದಲಾದವರು ಹಾಜರಿದ್ದರು.




