ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಹಲವರು ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಗುಡ್ ಬೈ ಹೇಳಿ ಇತರೆ ಪಕ್ಷ ಸೇರುವ ಪ್ರಕ್ರಿಯೆ ಮುಂದುವರೆಸಿದ್ದಾರೆ.
ಇದರ ಭಾಗವಾಗಿ ಮಾಜಿ ಸಚಿವ ಡಾ.ಎ.ಬಿ.ಮಾಲಕರೆಡ್ಡಿ, ಮಾಜಿ ಶಾಸಕರಾದ ಭಾರತೀ ಶಂಕರ್, ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗ ಎನ್.ಆರ್. ಸಂತೋಷ್, ದೇವರಾಜ ಪಾಟೀಲ್ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪದ್ಮನಾಭನಗರದ ನಿವಾಸದಲ್ಲಿ ಜೆಡಿಎಸ್ಗೆ ಸೇರ್ಪಡೆಯಾದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಪಕ್ಷದ ಶಾಲು ಹೊದಿಸಿ ಅವರನ್ನು ಸ್ವಾಗತಿಸಿದರು. ಜೆಡಿಎಸ್ಗೆ ಸೇರ್ಪಡೆಯಾದ ಭಾರತೀಶಂಕರ್ ಅವರು ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಈಗಾಲೇ ಘೋಷಣೆಯಾಗಿದ್ದ ಅಭ್ಯರ್ಥಿಅಭಿಷೇಕ್ ತಟಸ್ಥವಾಗಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿ ಬದಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಅದರಂತೆ ಭಾರತೀ ಶಂಕರ್ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ನಿನ್ನೆ ಸಂಜೆ 50 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಜೆಡಿಎಸ್ ಇಂದು ಆರು ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ವಲಸೆ ಬಂದವರಿಗೆ ಮಣೆ ಹಾಕಲಾಗಿದೆ. ಚಿತ್ರದುರ್ಗ- ರಘುಆಚಾರ್, ಮಡಿಕೇರಿ-ಎನ್.ಎಂ.ಮುತ್ತಪ್ಪ, ಮೂಡಬಿದರೆ- ಅಮರಶ್ರೀ, ವರುಣಾ-ಭಾರತೀ ಶಂಕರ, ಬಾಗಲಕೋಟೆ-ದೇವರಾಜ್ ಪಾಟೀಲ್, ಯಾದಗಿರಿ- ಡಾ.ಎ.ಬಿ.ಮಾಲಕರೆಡ್ಡಿ ಅವರ ಹೆಸರು ಪ್ರಕಟಿಸಲಾಗಿದೆ.




