ಬೆಂಗಳೂರು: ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಕೆಲ ನಾಯಕರು ಬಿಜೆಪಿ ತೊರೆಯಲು ಮುಂದಾಗಿದ್ದಾರೆ ಎಂಬ ವರದಿಗಳು ಹೈಕಮಾಂಡ್ ಗೆ ತಲೆ ನೋವಾಗಿ ಪರಿಣಮಿಸಿದೆ.
ಸ್ವಂತ ಕಾಲ ಬಲದ ಮೇಲೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ವರಿಷ್ಠರು ತಂತ್ರ ರೂಪಿಸುತ್ತಿರುವ ಹೊತ್ತಿನಲ್ಲಿ ಕೆಲವು ಪ್ರಮುಖರು ಕಾಂಗ್ರೆಸ್ನತ್ತ ಮುಖ ಮಾಡಿರುವುದು ಪಕ್ಷ ವರಿಷ್ಠರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.ಈ ಹಿನ್ನೆಲೆಯಲ್ಲಿ ಬಿಕ್ಕಟ್ಟು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಈ ಇಬ್ಬರೂ ನಾಯಕರು ಸಭೆ ನಡೆಸಿ, ಪಕ್ಷ ತೊರೆಯಲು ಸಜ್ಜಾಗಿದ್ದಾರೆ ಎನ್ನಲಾದ ಸೋಮಣ್ಣ, ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ಶಿವರಾಮ ಹೆಬ್ಬಾರ್, ನಾರಾಯಣ ಗೌಡ, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರ ಜೊತೆ ದೂರವಾಣಿಯಲ್ಲಿ ಮಾತನಾಡಿದರು ಎನ್ನಲಾಗಿದೆ.
ಈ ವೇಳೆ ಒಂದೊಂದು ರೀತಿಯ ನೋವು ಹೇಳಿದ್ದು, ಸದ್ಯದಲ್ಲೇ ಈ ಸಂಬಂಧ ಸಭೆ ನಡೆಸಿ ಗೊಂದಲಗಳಿಗೆ ತೆರೆ ಎಳೆಯಲಾಗುತ್ತದೆ ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಕೈಗೊಳ್ಳದಂತೆ ಸಲಹೆ ಮಾಡಿದರೆನ್ನಲಾಗಿದೆ.
ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ಗೊಂದಲ ಮಾಡಿಕೊಳ್ಳಬಾರದು ಎಂದು ಸಭೆಯಲ್ಲಿ ನಿರ್ಧಾರಕ್ಕೆ ಬಂದ ಇಬ್ಬರೂ ನಾಯಕರು, ಮುಂದಿನ ದಿನಗಳಲ್ಲಿ ಒಟ್ಟಾಗಿ ರಾಜ್ಯ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದರು.



