ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ: ಜಿ ಪರಮೇಶ್ವರ್

4 months ago

ಬೆಳಗಾವಿ: ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ ಪಾಕಿಸ್ತಾನ ಪರವಾಗಿ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪದಲ್ಲಿ ಒಟ್ಟು 12 ಮಂದಿಯ ಮೇಲೆ  ದೂರು ಪ್ರಕರಣ ದಾಖಲಿಸಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಮಾಜದ ಶಾಂತಿ ಕದಡುವ ಯತ್ನ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಹಾನಿ ಸೇರಿದಂತೆ ಇತರೆ ಆರೋಪಗಳಲ್ಲಿ ಕಳೆದ ಎರಡೂವರೆ ವರ್ಷದಲ್ಲಿ  ಪೊಲೀಸರು 61299 ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದರು.

ದಾಖಲು ಮಾಡಿರುವ ಸ್ವಯಂ ಪ್ರೇರಿತ ಪ್ರಕರಣ ಗಳಲ್ಲಿ  57646 ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಯಾವುದೇ ದೂರಗಳನ್ನು ಹಿಂಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸುವ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯತ್ನ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ,  ಅಕ್ರಮ ಚಟುವಟಿಕೆ ,ಸರಕಾರಿ ಕರ್ತವ್ಯಕ್ಕೆ ಅಡ್ಡಿ, ದ್ವೇಷ ಭಾಷಣ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ವಿಚಾರಕ್ಕೆ ಯಾರೂ ದೂರು ನೀಡದೆ ಹೋದರೆ  ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ  ಕೈಗೊಳ್ಳಲಾಗುತ್ತದೆ ಎಂದರು.

ಸಾರ್ವಜನಿಕರ ಪ್ರಾಣ ಮತ್ತು ಮಾನ ಕಾಪಾಡುವ ಸಂದರ್ಭಗಳಲ್ಲಿ ಸ್ವಯಂಪ್ರೇರಿತ ದೂರುಗಳನ್ನು ದಾಖಲಿಸಲಾಗುತ್ತಿದೆ. ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿಯಲ್ಲಿ ಕಾನೂನು ಬಾಹೀರ ಚಟುವಟಿಕೆಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತಹ ಸಂಜ್ಞೆಯ ಅಪರಾಧ, ಕೃತ್ಯದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದುರುಗಳನ್ನು ದಾಖಲಿಸಲಾಗುತ್ತಿದೆ ಎಂದರು.

ಬಿಗಿ ಕ್ರಮ: ಕಿಶೋರ್ ಕುಮಾರ್ ಪುತ್ತೂರು ಅವರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದ ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಈ ಮೂಲಕ ಕಾರಾಗೃಹದೊಳಗೆ ಮಾದಕ ವಸ್ತುಗಳು ಹಾಗೂ ಇತರೆ ನಿಷೇಧಿತ ವಸ್ತುಗಳು ತಲುಪದಂತೆ ಎಚ್ಚರ ವಹಿಸಲಾಗಿದೆ ಎಂದರು.

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಈಗಾಗಲೇ 332 ಸಂಖ್ಯೆ ಸಿ.ಸಿ. ಟಿವಿ ಕ್ಯಾಮರಾಗಳಿಗೆ ಎ.ಐ ಆಧಾರಿತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ ಎಲ್ಲಾ ಕಾರಾಗೃಹಗಳಲ್ಲಿ ಬಂದಿಗಳ ಚಲನ ವಲನಗಳನ್ನು ಸಿ.ಸಿ. ಟಿವಿಗಳ ಮೂಲಕ ನಿಗಾ ಇಡಲಾಗುತ್ತಿದೆ ಕೈದಿಗಳಿಗೆ ಯಾವುದೇ ರೀತಿಯ ವಿಶೇಷ ಸೌಲಭ್ಯ, ಮೊಬೈಲ್ ಬಳಕೆಗೆ ಕಾನೂನಾತ್ಮಕವಾಗಿ ಅವಕಾಶವಿರುವುದಿಲ್ಲ. ಆದಾಗ್ಯೂ ಕಾರಾಗೃಹಗಳಲ್ಲಿ ವಿಶೇಷ ತಪಾಸಣೆ ಕೈಗೊಂಡಾಗ ಬಂದಿಗಳ ಬಳಿ ದೊರೆತ ನಿಷೇಧಿತ ವಸ್ತುಗಳ ಕುರಿತಂತೆ ಒಟ್ಟು 153 ಪ್ರಕರಣಗಳು ದಾಖಲಾಗಿದೆ ಎಂದರು.

Leave a Reply