ನಕಲಿ ವೈದ್ಯರ ಹಾವಳಿ ತಡೆಗಟ್ಟಲು ಕಾನೂನು ಕ್ರಮ: ಶರಣಪ್ರಕಾಶ್ ಪಾಟೀಲ್

2 years ago

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿ ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಕರ್ನಾಟಕ ಖಾಸಗಿ ಹೋಮಿಯೋಪಥಿಕ್ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘ ಏರ್ಪಡಿಸಿದ್ದವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾವುದೇ ವೈದ್ಯಕೀಯ ಕೋರ್ಸ್ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಇದರ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದರು.

ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದರು.

ಕೇವಲ ಸರ್ಕಾರದಿಂದ ಮಾತ್ರ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸಾಧ್ಯವಿಲ್ಲ. ಇದಕ್ಕೆ ಹೋಮಿಯೋಪಥಿಕ್ ವೈದ್ಯಕೀಯ ಮಹಾ ವಿದ್ಯಾಲಯಗಳ ಸಂಘದ ಸಹಭಾಗಿತ್ವವೂ ಅಷ್ಟೇ ಮುಖ್ಯ ಹೋಮಿಯೋಪತಿ ವೈದ್ಯರು ನಮ್ಮ ಜೊತೆ ಕೈ ಜೋಡಿಸಿದರೆ ಇಂತಹ ದಂಧೆಯನ್ನು ತಡೆಗಟ್ಟಬಹುದು ಎಂದರು.

Leave a Reply