ಬೆಂಗಳೂರು: ಮೇಕೆದಾಟು ಯೋಜನೆ ಕುರಿತು ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ನಿಲುವನ್ನು ತಿಳಿಸಬೇಕು. ಮೈತ್ರಿ ಮುಖ್ಯವೋ ಅಥವಾ ರಾಜ್ಯದ ಹಿತ ಮುಖ್ಯವೋ ಎಂಬುದನ್ನು ಬಹಿರಂಗಪಡಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೋವಿಡ್ ಸಮಯದಲ್ಲಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದರು. ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್ ತಮ್ಮ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಜಾರಿಯಾಗಲು ಬಿಡಲ್ಲ ಎಂದು ಘೋಷಿಸಿದ್ದಾರೆ. ಅಂದು ಡಿ.ಕೆ.ಶಿವಕುಮಾರ್ ಮೇಕೆದಾಟುವಿನಲ್ಲಿ ಸ್ನಾನ ಮಾಡಿದ್ದರು. ಆದರೀಗ ಸ್ನಾನಕ್ಕಲ್ಲ, ಮುಖ ತೊಳೆಯಲು ಕೂಡ ನೀರಿಲ್ಲ ಎಂದರು.
ಬೆಂಗಳೂರಿನ ಜನರು ಕುಡಿಯಲು ನೀರಿಲ್ಲದೆ ವಲಸೆ ಹೋಗುತ್ತಿದ್ದಾರೆ. ಇಂತಹ ಸ್ಥಿತಿಯನ್ನು ಈವರೆಗೆ ನಾನಂತೂ ನೋಡಿಲ್ಲ. ಕಾಂಗ್ರೆಸ್ ನಾಯಕರು ಕೂಡಲೇ 136 ಶಾಸಕರನ್ನು ತಮಿಳುನಾಡಿಗೆ ಕರೆದುಕೊಂಡು ಹೋಗಿ ಅಲ್ಲಿ ಪ್ರತಿಭಟನೆ ಮಾಡಲಿ. ಕರ್ನಾಟಕದ ಕಾಂಗ್ರೆಸ್ಸಿಗರಿಗೆ INDIA ಅಲಯನ್ಸ್ ಮುಖ್ಯವೋ ಅಥವಾ ರಾಜ್ಯದ ಹಿತ ಮುಖ್ಯವೋ ಎಂಬುದನ್ನು ಈ ಮೂಲಕ ಸಾಬೀತುಪಡಿಸಬೇಕು. ಡಿಎಂಕೆ ಪ್ರಣಾಳಿಕೆ ಕುರಿತು ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸಬೇಕು. ಮೇಕೆದಾಟು ಬಗ್ಗೆ ನಿಜವಾಗಿಯೂ ಕಾಳಜಿ ಇದೆಯೇ ಎಂಬುದನ್ನು ತಿಳಿಸಬೇಕು ಎಂದರು.
ಡಿ.ಕೆ.ಶಿವಕುಮಾರ್ ಅವರು ಮೇಕದಾಟುವಿನಲ್ಲಿ ತರ್ಪಣ ಬಿಟ್ಟಿದ್ದರು. ಈ ಮೂಲಕ ರಾಜ್ಯದ ಜನರಿಗೆ ಅನ್ಯಾಯದ ತರ್ಪಣವನ್ನು ನೀಡಿದ್ದಾರೆ. ಕಾಂಗ್ರೆಸ್ಗೆ ಧೈರ್ಯವಿದ್ದರೆ ಡಿಎಂಕೆ ಪ್ರಣಾಳಿಕೆಯಿಂದ ಮೇಕೆದಾಟು ಅಂಶವನ್ನು ತೆಗೆದುಹಾಕಿಸಲು ಪ್ರಯತ್ನ ಮಾಡಲಿ. ಅಲ್ಲಿಯವರೆಗೂ ಕೇಂದ್ರ ಸರ್ಕಾರದ ಬಗ್ಗೆ ಆರೋಪ ಮಾಡುವ ನೈತಿಕತೆ ಕಾಂಗ್ರೆಸ್ ನಾಯಕರಿಗಿಲ್ಲ ಎಂದರು.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಎಲ್ಲ ರೀತಿಯ ಪ್ರಯತ್ನ ಮಾಡಲಾಗಿತ್ತು. ಸರ್ಕಾರ ನಮ್ಮ ನೀರನ್ನು ತಮಿಳುನಾಡಿಗೆ ಉದಾರವಾಗಿ ನೀಡಿದೆ. ಇದಕ್ಕೆ ಜನರು ಲೋಕಸಭೆ ಚುನಾವಣೆಯಲ್ಲಿ ಬುದ್ಧಿ ಕಲಿಸಲಿದ್ದಾರೆ ಎಂದರು.
ನೀರಿನ ಕೊರತೆ ನೀಗಿಸಬೇಕಾದ ರಾಜ್ಯ ಸರ್ಕಾರ ಟ್ಯಾಂಕರ್ ಮಾಫಿಯಾಗೆ ಬೆಂಡಾಗಿದೆ. ಜನರು ನೀರನ್ನು ಮಿತವಾಗಿ ಬಳಸಿ ಎಂದು ಸಲಹೆಗಳನ್ನು ಮಾತ್ರ ನೀಡುತ್ತಿದೆ. ಹೀಗಾಗಿ ಇದು ವೀಕ್ ಸರ್ಕಾರ ಹಾಗೂ ಸಿದ್ದರಾಮಯ್ಯನವರು ವೀಕ್ ಸಿಎಂ ಆಗಿದ್ದಾರೆ. ಸರ್ಕಾರದ ಖಜಾನೆಯಲ್ಲಿ ಹಣ ಇದೆ ಎನ್ನುವುದಾದರೆ ಕುಡಿಯುವ ನೀರು ನೀಡಲಿ, ಪ್ರತಿ ತಾಲೂಕಿಗೆ 50 ಕೋಟಿ ರೂ. ನೀಡಲಿ, ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸಿ 10 ಕೋಟಿ ರೂ. ನೀಡಲಿ ಎಂದರು.
ಚುನಾವಣಾ ಬಾಂಡ್ನಡಿ ಕಾಂಗ್ರೆಸ್ ಪಕ್ಷ 1,300 ಕೋಟಿ ರೂ. ದೇಣಿಗೆ ಪಡೆದಿದೆ. ಅದನ್ನು ಮರಳಿಸಿ ನಂತರ ಕಾಂಗ್ರೆಸ್ ನಾಯಕರು ಟೀಕೆ ಮಾಡಲಿ. ಶೇ.30 ರಷ್ಟು ಬಿಜೆಪಿ ಪಡೆದರೆ, ಉಳಿದ ಶೇ.70 ರಷ್ಟು ಹಣವನ್ನು ಬೇರೆ ಪಕ್ಷಗಳು ಪಡೆದಿವೆ. ಕಾಂಗ್ರೆಸ್ಗೆ ಯಾವ ನೈತಿಕತೆ ಇದೆ ಎಂದರು.
ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಷ್ಟೇ ಸೆಕ್ಷನ್ಗಳನ್ನು ಹಾಕಿದರೂ ಅದರ ವಿರುದ್ಧ ಹೋರಾಡಲು ಬಿಜೆಪಿ ಸಿದ್ಧವಿದೆ ಎಂದರು.




