ದಸರಾ ಅದ್ಧೂರಿಯಾಗಿ ನಡೆಸೋಣ: ಸಿದ್ದರಾಮಯ್ಯ

2 years ago

ಬೆಂಗಳೂರು: ದಸರಾ ಉತ್ಸವ ಜನರ ಉತ್ಸವ ಆಗಬೇಕು. ಕೊರೊನಾ – ಬರದ ಕಾರಣಕ್ಕೆ ಕಳೆದ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡಲಾಗಲಿಲ್ಲ, ಆದರೆ ಈ ಬಾರಿಯ ದಸರಾ ಅದ್ಧೂರಿಯಾಗಿ ನಡೆಸೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದಸರಾ ಮಹೋತ್ಸವ ಆಯೋಜನೆಯ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹೈ ಪವರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ ಎಂದರು.

ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು ಎಂದು ಸೂಚಿಸಿದರು.

ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳುವಳಿಕೆ ಮೂಡಿಸಬೇಕು. ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ. ಐತಿಹಾಸಿಕ ನಾಡ ಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನಾವು ನೀಡುತ್ತೇವೆ ಎಂದರು.

ದೀಪಾಲಂಕಾರ ಈ ಬಾರಿ 21 ದಿನ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಬೇಕು. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು ಎಂದು ಸಲಹೆ ನೀಡಿದರು.

‘ಕರ್ನಾಟಕ ಸಂಭ್ರಮ -50’ ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು. ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ಶೋ ನಡೆಸಲೂ ವಿನಂತಿಸಲಾಗುವುದು ಎಂದರು.

ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಆಯೋಜನೆ ಮಾಡುವುದಕ್ಕಿಂತ ಈ ಬಾರಿಯ ದಸರಾದಲ್ಲಿ ವಿಶೇಷತೆ ಇರಲಿ ಎಂದರು.

Leave a Reply