ರಾಜ್ಯ ಬಿಜೆಪಿ ಘಟಕದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ತಿರಸ್ಕರಿಸಿದ ಹೈಕಮಾಂಡ್

2 years ago

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿ ಅಧಿಕಾರದ ಗದ್ದುಗೆ ಹಿಡಿಯಬೇಕೆಂದು ಪ್ರಯತ್ನಿಸುತ್ತಿರುವ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಘಟಕ ರವಾನಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಿರಸ್ಕರಿಸಿದೆ.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತು ರಾಜ್ಯ ನಾಯಕರು ನಡೆಸಿರುವ ಮಾನದಂಡಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೈಕಮಾಂಡ್, ಕೆಲವು ಸ್ಪಷ್ಟ ಮಾರ್ಗಸೂಚಿಗಳನ್ನು ರವಾನಿಸಿದೆ. ಅದರ ಆಧಾರದಲ್ಲಿಯೇ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸಿದ್ಧಪಡಿಸುವಂತೆ ಸೂಚನೆ ನೀಡಿದೆ.

ಸ್ಥಳೀಯ ಮಟ್ಟದ ಕಾರ್ಯಕರ್ತರ ಅಭಿಪ್ರಾಯ, ನಾಯಕರ ಸಲಹೆ ಮತ್ತು ಮತದಾರರ ಅಭಿಪ್ರಾಯ ಆಲಿಸಿ ಗೆಲುವಿನ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿರುವುದಾಗಿ ಪಕ್ಷದ ಉನ್ನತ ಮೂಲಗಳಿಂದ ಗೊತ್ತಾಗಿದೆ.

ರಾಷ್ಟ್ರ ಮಟ್ಟದಲ್ಲಿ ಹೈಕಮಾಂಡ್ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಆದರೆ,ರಾಜ್ಯ ಘಟಕ ರವಾನಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಎರಡನೇ ಪಟ್ಟಿ ಬಿಡುಗಡೆಯಲ್ಲೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯವಿಲ್ಲ ಎಂದು ಗೊತ್ತಾಗಿದೆ.

ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಗೆ ನೀಡಿರುವ ಹೊಸ ಮಾರ್ಗ ಸೂಚಿಗಳ ಬಗ್ಗೆ ಕಳೆದ ರಾತ್ರಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಸಮಲೋಚನೆ ನಡೆಸಲಾಗಿದೆ. ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿ ಜೊತೆಗೆ ರಾಜ್ಯಮಟ್ಟದ ಇಬ್ಬರು ನಾಯಕರನ್ನು ಕಳುಹಿಸಿ ಎರಡರಿಂದ ಮೂರು ದಿನಗಳ ಕಾಲ ಅವರು ಅಲ್ಲಿಯೇ ವಾಸ್ತವ್ಯ ಹೂಡಿ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಆಲಿಸಿ, ವರದಿ ನೀಡುವಂತೆ ಸೂಚಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಸದ್ಯ ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸದಸ್ಯರಾದ ಸದಾನಂದ ಗೌಡ, ಸಿ.ಟಿ.ರವಿ, ಪ್ರಹ್ಲಾದ ಜೋಶಿ ಸ್ವತಃ ಟಿಕೆಟ್ ಆಕಾಂಕ್ಷಿಗಳಾದರೆ, ಕೆ.ಎಸ್.ಈಶ್ವರಪ್ಪ ಮತ್ತು ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರರಿಗೆ ಟಿಕೆಟ್ ಕೊಡುವಂತೆ ಬೇಡಿಕೆ ಮಂಡಿಸುತ್ತಿದ್ದಾರೆ. ಇದರಿಂದ ಹೈಕಮಾಂಡ್ ಇಂತಹ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

Leave a Reply