ಲೋಕಸಭಾ ಚುನಾವಣೆ: ಘಟಾನುಘಟಿಗಳಿಂದ ಪ್ರಚಾರ

2 years ago

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಅಂತ್ಯಕ್ಕೆ ಎರಡು ದಿನ ಬಾಕಿ ಇರುವಂತೆ ಘಟಾನುಘಟಿ‌ ನಾಯಕರು ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ.

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ನಟ ಕಮಲ ಹಾಸನ್  ಸೇರಿದಂತೆ ಅನೇಕ ನಾಯಕರು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಏ.24 ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳುವುದರಿಂದಾಗಿ ಪ್ರತಿಯೊಬ್ಬ ನಾಯಕರೂ ತಮಗೆ ನಿಯೋಜಿಸಿದ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಂಟಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ ಕೋಲಾರ ಲೋಕಸಭಾ ಕ್ಷೇತ್ರದ ಬಂಗಾರಪೇಟೆ, ಶಿಡ್ಲಘಟ್ಟದಲ್ಲಿ ರೋಡ್ ಶೋ ನಡೆಸಿ, ಸಂಜೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಆನೇಕಲ್, ಬೆಂಗಳೂರು ದಕ್ಷಿಣ ಮತ್ತು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಜಾಧ್ವನಿ-2 ಅನ್ನು ಮುಂದುವರೆಸಲಿದ್ದಾರೆ.

ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಚುನಾವಣೆ ನಡೆಯಲಿದೆ.

ಈ ಕ್ಷೇತ್ರಗಳಲ್ಲಿ ಹೆಚ್ಚಿನ ಮತ ಸೆಳೆಯಲು 3 ಪಕ್ಷಗಳು ಆಕ್ರಮಣಕಾರಿ ಪ್ರಚಾರ ತಂತ್ರಗಳನ್ನು ಅನುಸರಿಸುತ್ತಿವೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಕೇಂದ್ರದ ವಿರುದ್ಧ ತಾರತಮ್ಯದ ಅಸ್ತ್ರ ಪ್ರಯೋಗಿಸಿದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ನಿರ್ವಹಣೆ, ಬರ ನಿರ್ವಹಣೆ ಸೇರಿದಂತೆ ಹಲವಾರು ವಿಚಾರಗಳಲ್ಲಿ ವೈಫಲ್ಯ ಕಂಡಿದೆ ಎಂದು ವಾಗ್ದಾಳಿ ನಡೆಸುತ್ತಿವೆ.

Leave a Reply