ಕಾಂಗ್ರೆಸ್ ಶಾಸಕ ರಾಜೇಗೌಡ ನಿವಾಸ ಮತ್ತು ಕಚೇರಿ ಸೇರಿದಂತೆ ನಾಲ್ಕು ಕಡೆ ಲೋಕಾಯುಕ್ತ ದಾಳಿ

8 months ago

ಬೆಂಗಳೂರು: ನಿಗದಿತ ಆದಾಯ ಮೂಲ ಮೀರಿ ಅಪಾರ ಪ್ರಮಾಣದ ಆಸ್ತಿ ಸಂಪಾದಿಸಿದ್ದಾರೆ ಹಾಗೂ ಆ ಕುರಿತಾದ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸದೆ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾಗದ ದೂರಿನ ಬಗ್ಗೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಕಾಂಗ್ರೆಸ್ ಶಾಸಕ ರಾಜೇಗೌಡ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿ ದಾಖಲೆ ಪತ್ರ ಪರಿಶೀಲನೆ ನಡೆಸಿದರು.

ಆರೋಪ ಕುರಿತ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ನೀಡಿರುವ ಆದೇಶದಂತೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಗೌಡ, ಅವರ ಪತ್ನಿ ಡಿ.ಕೆ. ಪುಷ್ಪಾ, ಪುತ್ರ ರಾಜ್‌ದೇವ್ ಟಿ.ಆರ್. ವಿರುದ್ಧ  ಎಫ್‌ಐಆರ್ ದಾಖಲಿಸಿದ್ದಾರೆ.

ಇದರ ಮುಂದುವರೆದ ಭಾಗವಾಗಿ ಬೆಳಿಗ್ಗೆ ಶೃಂಗೇರಿ ತಾಲೂಕಿನ ಖಾಂಡ್ಯ ಹೋಬಳಿ ಬಸಾಪುರ ಗ್ರಾಮದಲ್ಲಿರುವ ರಾಜೇಗೌಡ ಅವರ ನಿವಾಸಕ್ಕೆ ತೆರಳಿರುವ ಅಧಿಕಾರಿಗಳು, ದಾಖಲೆಗಳ ಸಂಗ್ರಹಕ್ಕೆ ಶೋಧ ನಡೆಸಿದರು. ಬೆಂಗಳೂರಿನಲ್ಲಿ ಸಂಬಂಧಿಕರ ಮನೆ ಮತ್ತು ಅವರ ಫಾರಂ ಹೌಸ್‌ ಸೇರಿ ನಾಲ್ಕು ಕಡೆ ಶೋಧ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಿ.ಡಿ. ರಾಜೇಗೌಡ ಅವರು ಅಧಿಕಾರ ದುರುಪಯೋಗ ಮಾಡಿಕೊಳ್ಳುವ ಜತೆಗೆ ಸರ್ಕಾರಕ್ಕೆ ಮತ್ತು ಆದಾಯ ತೆರಿಗೆ ಇಲಾಖೆಗೆ ವಂಚನೆ ಮಾಡಿದ್ದಾರೆ. ಅವರ ವಿರುದ್ಧ ಸಮಗ್ರ ತನಿಖೆ ನಡೆಸಬೇಕು’ ಎಂದು ದಿನೇಶ್ ಎಚ್.ಕೆ. ದೂರಿನಲ್ಲಿ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಸೆ.16ರಂದು ಆದೇಶ ನೀಡಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚಿಸಿತ್ತು.

ರಾಜೇಗೌಡ ಅವರ ಕುಟುಂಬ ಸದಸ್ಯರು ತಮ್ಮ ಆದಾಯ ಮೂಲಗಳಿಗೆ ತಾಳೆಯಾಗದಷ್ಟು ಆಸ್ತಿ ಸಂಪಾದಿಸಿದ್ದಾರೆ. ಅವರ ಪಾಲುದಾರಿಕೆ ಸಂಸ್ಥೆಯಾದ ಮೆ.ಶಬಾನಾ ರಂಜಾನ್‌ನ ವ್ಯವಹಾರಗಳು ಸಾಕ್ಷಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್‌ಗೆ 55.75 ಕೋಟಿ, ಬ್ಯಾಂಕ್ ಆಫ್ ಬರೋಡಾಗೆ ₹66 ಕೋಟಿ ಹಾಗೂ ಕರ್ನಾಟಕ ಬ್ಯಾಂಕ್‌ಗೆ 81.95 ಲಕ್ಷ ಮರು ಪಾವತಿ ಮಾಡಲಾಗಿದೆ. ಆದರೆ, ಲೋಕಾಯುಕ್ತಕ್ಕೆ ರಾಜೇಗೌಡ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ವಾರ್ಷಿಕ ಆದಾಯ ಕೇವಲ 40 ಲಕ್ಷ ಎಂದು ಘೋಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

Leave a Reply