ರಾಜಕೀಯ ನಿವೃತ್ತಿ ಘೋಷಿಸಿದ ಎಂ.ವೀರಪ್ಪ ಮೊಯ್ಲಿ

2 years ago

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಯಲು ಕೊನೆಯ ಹಂತದವರೆಗೆ ಸತತ ಪ್ರಯತ್ನ ನಡೆಸಿ ವಿಫಲರಾದ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಮಂತ್ರಿಯಾಗಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ವೀರಪ್ಪ ಮೊಯ್ಲಿ, ಕಾಂಗ್ರೆಸ್ಸಿನ ಪ್ರಭಾವಿ ನಾಯಕರಲ್ಲಿ ಒಬ್ಬರು. ರಾಷ್ಟ್ರೀಯ ಕಾಂಗ್ರೆಸ್ ನಾಯಕತ್ವದ ವಿರುದ್ಧ ಅಪಸ್ವರ ಎತ್ತಿದ್ದ ಜಿ 20 ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಮೊಯ್ಲಿ ಅವರು ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ತೀವ್ರ ಹಿನ್ನಡೆ ಅನುಭವಿಸುತ್ತಿದ್ದರು.

ಇದು ತಮ್ಮ ಕೊನೆಯ ಚುನಾವಣೆಯಾಗಿದ್ದು ಇನ್ನು ಮುಂದೆ ಯಾವುದೇ ಚುನಾವಣೆ ಸ್ಪರ್ಧಿಸುವುದಿಲ್ಲ. ಹೀಗಾಗಿ ಇದೊಂದು ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ರಾಜ್ಯ ಕಾಂಗ್ರೆಸ್ ಮತ್ತು ಹೈ ಕಮಾಂಡ್ ಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಕೂಡ ಮೊಯ್ಲಿ ಅವರಿಗೆ ಮತ್ತೊಂದು ಅವಕಾಶ ನೀಡುವ ಕುರಿತಂತೆ ಪರಿಶೀಲನೆ ನಡೆಸಿತ್ತು. ಆದರೆ ಗೆಲುವಿನ ಸಾಧ್ಯತೆಗಳ ಕುರಿತು ನಡೆದ ಎಲ್ಲ ಸಮೀಕ್ಷೆಗಳಲ್ಲಿ ಮೊಯ್ಲಿ ಅವರ ವಿರುದ್ಧ ವರದಿಗಳು ಬಂದ ಹಿನ್ನೆಲೆಯಲ್ಲಿ ಹೈಕಮಾಂಡ್ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಇವರ ಬದಲಿಗೆ, ಯುವ ಮುಖಂಡ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ಘೋಷಿಸಿತ್ತು.

ರಕ್ಷಾ ರಾಮಯ್ಯ ಅವರು ಪಕ್ಷದ ಎಲ್ಲಾ ಮುಖಂಡರೊಂದಿಗೆ ವಿಶ್ವಾಸ ಗಳಿಸಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿರುವ ಬೆನ್ನಲ್ಲೇ ಮೊಯ್ಲಿ ಅವರು ದಿಡೀರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿ ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ.

Leave a Reply