ರಾಜ್ಯ ಸರ್ಕಾರದ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ

7 months ago

ಬೆಂಗಳೂರು: ನೆನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿ ನೇಮಕಾತಿ ಆದೇಶ ಹೊರಬೀಳುತ್ತಿದ್ದಂತೆ ಸಂಪುಟ ಪುನರ್ ರಚನೆ ವಿಚಾರ ಮುನ್ನೆಲೆಗೆ ಬಂದಿದೆ. ನವೆಂಬರ್ ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡೂವರೆ ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸಲಿದೆ. ಈ ವೇಳೆ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಹೈಕಮಾಂಡ್ ಈ ಕುರಿತಂತೆ ಈಗಾಗಲೇ ಪ್ರಕ್ರಿಯೆ ಆರಂಭಿಸಿದ್ದು, ಸಂಪುಟದಿಂದ ಕೈಬಿಡುವವರ ಪಟ್ಟಿ ಮತ್ತು ಸೇರ್ಪಡೆಯಾಗುವವರ ಪಟ್ಟಿ ಸಿದ್ಧಪಡಿಸುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇದಕ್ಕೆ ಪೂರಕವೆಂಬಂತೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಸತಿ ಸಚಿವ ಜಮೀರ್ ಅಹಮದ್ ಖಾನ್, ಯಾವುದೇ ಸಮಯದಲ್ಲಿ ರಾಜ್ಯ ಸಂಪುಟ ಪುನರ್ರಚನೆ ಅಥವಾ ವಿಸ್ತರಣೆಯಾಗಲಿದೆ ಎಂದರು.

ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಸಂಪುಟ ಸರ್ಜರಿ ಕುರಿತಂತೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ಆರಂಭವಾಗಿದ್ದು, ಅವರು ಸೂಚಿಸಿದ ತಕ್ಷಣ ಸಿದ್ದರಾಮಯ್ಯ ಪ್ರಕ್ರಿಯೆ ಆರಂಭಿಸಲಿದ್ದಾರೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಮಂತ್ರಿ ಸ್ಥಾನ ತೊರೆದಿರುವ ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆಯಾಗುವುದು ನಿಶ್ಚಿತ ಎಂದು ಸ್ಪಷ್ಟಪಡಿಸಿದರು.

ಇವರ ವಿರುದ್ಧ ಕೇಳಿ ಬಂದ ಆರೋಪದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿತ್ತು. ಈ ತಂಡ ಈಗಾಗಲೇ ತನಿಖಾ ವರದಿ ನೀಡಿದೆ ಅದರಲ್ಲಿ ನಾಗೇಂದ್ರ ಅವರು ಯಾವುದೇ ರೀತಿಯ ಅಕ್ರಮ ಎಸೆದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪ ಮುಕ್ತರಾಗಿರುವ ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದರು. ಚಿ

ತಮ್ಮ ವಿರುದ್ಧ ಕೇಳಿ ಬಂದ ಆರೋಪದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗಲೇ ಸಿದ್ದರಾಮಯ್ಯ ಅವರು ನಿಮ್ಮ ವಿರುದ್ಧ ಮಾಡಲಾಗಿರುವ ಆರೋಪದ ಬಗ್ಗೆ ತನಿಖೆ ಪೂರ್ಣಗೊಂಡ ನಂತರ ಸಂಪುಟ ಸೇರ್ಪಡೆ ಮಾಡಿಕೊಳ್ಳುವ ಭರವಸೆ ನೀಡಿದ್ದರು. ಅದರಂತೆ ಅವರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದರು.

ಸದ್ಯ ನಡೆಯಲಿರುವ ಸಂಪುಟ ಪುನರ್ರಚನೆ ಪ್ರಕ್ರಿಯೆಯಲ್ಲಿ ಯಾರನ್ನು ಕೈ ಬಿಡಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ಹೈಕಮಾಂಡ್ ಮಾತ್ರವೇ ನಿರ್ಧಾರ ಕೈಗೊಳ್ಳಲು ಸಾಧ್ಯ. ಅವರು ನೀಡಿದ ಸೂಚನೆಯನ್ನು ನಾವೆಲ್ಲರೂ ಪಾಲಿಸುತ್ತೇವೆ ಎಂದರು.

Leave a Reply