ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

2 years ago

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡುವ ಮೂಲಕ ಅವರ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದ ಸಾವಿರಾರು ಕಾರ್ಯಕರ್ತರು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪದಚ್ಯುತಿಗೆ ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿದರು.

ಮೆರವಣಿಗೆಯಲ್ಲಿ ಸಾಗಿ ಬಂದ ಕಾರ್ಯಕರ್ತರು ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಆನಂತರ ಫ್ರೀಡಂ ಪಾರ್ಕ್ ನಲ್ಲಿ ಸಮಾವೇಶಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ಘೋಷಣೆ ಮಾಡಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡುವಾಗ ಸಂವಿಧಾನದ ಮೂಲ ತತ್ವಗಳನ್ನು ಗಾಳಿಗೆ ತೂರಿದ್ದಾರೆ. ರಾಜಭವನವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಅಲ್ಲದೆ ರಾಜ್ಯಪಾಲರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದರು.

ಸ್ಥಿರ ಸರಕಾರವನ್ನು ವಾಮ ಮಾರ್ಗದಿಂದ ಕೆಡವಿ, ಮಜಾ ತೆಗೆದುಕೊಳ್ಳಲು ಹೊರಟಿರುವ ಜೆಡಿಎಸ್-ಬಿಜೆಪಿ ಪಕ್ಷಗಳು, ಇದಕ್ಕೆ ರಾಜಭವನವನ್ನ ದುರುಪಯೋಗಪಡಿಸಿಕೊಂಡಿವೆ. ಪ್ರಕರಣದಲ್ಲಿ ಇವರ ತಪ್ಪು ಇಲ್ಲದಿದ್ದರೂ ಕ್ಲೀನ್ ಇಮೇಜ್ ಹೊಂದಿರುವ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ರಾಜ್ಯಪಾಲರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿವೆ ಎಂದರು.

ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಹಾಗಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣೆಗೆ ಈ ಹೋರಾಟ ಅನಿವಾರ್ಯ. ರೈತರು, ಕಾರ್ಮಿಕರು, ದಲಿತರು, ಹಿಂದುಳಿದ ವರ್ಗಗಳ ಜನರು ಒಗ್ಗೂಡಿ ಜೆಡಿಎಸ್-ಬಿಜೆಪಿ ಕುತಂತ್ರವನ್ನು ಎದುರಿಸ ಬೇಕಾಗಿದೆ ಎಂದರು.

ಪ್ರತಿಭಟನೆಯಲ್ಲಿ ಮಾವಳ್ಳಿ ಶಂಕರ್, ಅನಂತ ನಾಯಕ್, ಕೆ ಎಂ ರಾಮಚಂದ್ರಪ್ಪ, ಎಂ ರಾಮಚಂದ್ರಪ್ಪ ಸೇರಿದಂತೆ ಹಲವು ನಾಯಕರು ಮುಖಂಡರು ಭಾಗವಹಿಸಿದ್ದರು.

Leave a Reply