ಬೆಂಗಳೂರು: ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಡಿ ಸದಸ್ಯತ್ವ ನೋಂದಣಿ ಅಭೂತಪೂರ್ವ ಯಶಸ್ಸು ಕಂಡಿದೆ. ಅಭಿಯಾನದ ಅನ್ವಯ ಒಟ್ಟು 40,50,351 ಸದಸ್ಯತ್ವ ನೋಂದಣಿ ಮಾಡಿದ್ದೇವೆ ಎಂದು ಉನ್ನತ ಶಿಕ್ಷಣ, ಸಚಿವ ಹಾಗೂ ಅಭಿಯಾನದ ಸಂಚಾಲಕ ಡಾ.ಅಶ್ವತ್ಥನಾರಾಯಣ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನದಲ್ಲಿ 58,186 ಬೂತ್ ಪೈಕಿ 39,572 ಬೂತ್ಗಳ ಸಂಪರ್ಕ ಮಾಡಲಾಗಿದೆ. 22,55,562 ಮನೆಗಳ ಸಂಪರ್ಕ ಮಾಡಿದ್ದೇವೆ. 13,35,254 ಮನೆಗಳ ಮೇಲೆ ಸ್ಟಿಕರ್ ಅಂಟಿಸಲಾಗಿದೆ. 4,91,067 ವಾಹನಗಳ ಮೇಲೆ ಸ್ಟಿಕರ್ ಅಂಟಿಸಲಾಗಿದೆ. 1.94 ಲಕ್ಷ ಗೋಡೆ ಬರಹ ಮಾಡಲಾಗಿದೆ. 31,260 ಬೂತ್ಗಳಲ್ಲಿ ಮನ್ ಕಿ ಬಾತ್ ಅನ್ನು 5 ಲಕ್ಷ ಜನರು ಆಲಿಸಿದ್ದಾರೆ. ಅಲ್ಲದೆ, 32,489 ಡಿಜಿಟಲ್ ವಾಲ್ ಪೈಂಟಿಂಗ್ ಮಾಡಲಾಗಿದೆ ಎಂದರು.
ಬಿಜೆಪಿಯೇ ಭರವಸೆ ಎಂಬ ಅಭಿಯಾನ ಇದಾಗಿತ್ತು. ಕನಿಷ್ಠ 150 ಕ್ಷೇತ್ರಗಳಲ್ಲಿ ಗೆಲ್ಲಲು ಇದು ಪೂರಕ. ಸಶಕ್ತ ಬೂತ್ ಮೂಲಕ ಬೂತ್ ವಿಜಯ ಅಭಿಯಾನ ನಡೆದಿದೆ. ಜನರ ಸಹಕಾರ, ಬೆಂಬಲ ಕೋರಿದ್ದೇವೆ ಎಂದರು.
ಮಂಗಳೂರು- ಉಡುಪಿಯಲ್ಲಿ ಶೇ 100 ಮನೆಗಳ ಸಂಪರ್ಕ ಆಗಿದೆ. ದ್ವೀಪವಾಸಿಗಳನ್ನೂ ಸಂಪರ್ಕಿಸಲಾಗಿದೆ. ಕೊಡಗು, ಶಿವಮೊಗ್ಗ, ಮೈಸೂರಿನಲ್ಲಿ ಶೇ 100 ಮನೆ ಸಂಪರ್ಕ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾಡುಗಳಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರನ್ನೂ ಸಂಪರ್ಕಿಸಲಾಗಿದೆ ಎಂದರು.
ವಿಜಯ ಸಂಕಲ್ಪ ಅಭಿಯಾನ ಪೂರ್ಣಗೊಂಡಿದ್ದು, ಮನೆಮನೆ ತಲುಪುವ ನಿಟ್ಟಿನಲ್ಲಿ ಅದನ್ನು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ- ರಾಜ್ಯ ಸರಕಾರಗಳ ಸಾಧನೆ ತಿಳಿಸುವುದು, ಗೋಡೆ ಬರಹ, ಕರಪತ್ರ ಹಂಚುವುದು, ಪಕ್ಷದ ಸದಸ್ಯತ್ವ ನೋಂದಣಿ ನಡೆದಿದೆ. 2 ಕೋಟಿ ಮನೆ, 1 ಕೋಟಿ ಸದಸ್ಯತ್ವ ನೋಂದಣಿ ಗುರಿ ಇತ್ತು ಎಂದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಅಲ್ಲದೆ ಸಾಮಾನ್ಯ ಕಾರ್ಯಕರ್ತರಂತೆ ಸಕ್ರಿಯವಾಗಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಜನವರಿ 21ರಿಂದ ಫೆಬ್ರವರಿ 5ರವರೆಗೆ ಅಭಿಯಾನ ಅವಧಿಯನ್ನು ನಿಗದಿಗೊಳಿಸಿದ್ದೆವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಲಮಂಗಲದ ಬಳಿ ಚಾಲನೆ ನೀಡಿದ್ದರು. ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಬೆಂಗಳೂರಿನಲ್ಲಿ ಚಾಲನೆ ಕೊಟ್ಟಿದ್ದರು ಎಂದರು.
ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯದ ಸಚಿವರು, ಎಲ್ಲ ಚುನಾಯಿತ ಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಎಲ್ಲ ಮೋರ್ಚಾಗಳು, ಪ್ರಕೋಷ್ಠಗಳು ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದವು ಎಂದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಅಭಿಯಾನದ ರಾಜ್ಯ ಸಹ ಸಂಚಾಲಕ ಸಿದ್ದರಾಜು, ರಾಜ್ಯ ಉಪಾಧ್ಯಕ್ಷ ನಂದೀಶ್, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಭಾಗವಹಿಸಿದ್ದರು




