ಮಾನಸಿಕ ಆರೋಗ್ಯ ಕುರಿತು ಅರಿವು ಕಾರ್ಯಕ್ರಮ
ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಜಾಗೃತಿ
ಬಳ್ಳಾರಿ: ದೈಹಿಕ ಮತ್ತು ಮಾನಸಿಕ ಆರೋಗ್ಯ ಒಂದಕ್ಕೊಂದು ಪೂರಕವಾಗಿದ್ದು, ಮನುಷ್ಯ ಆರೋಗ್ಯವಾಗಿ ಜೀವಿಸಲು ಮಾನಸಿಕ ನೆಮ್ಮದಿ ಬಹುಮುಖ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಹೇಳಿದರು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ನ್ಯಾಯಾಂಗ ನೌಕರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ‘ಸದೃಢ ಮನಸ್ಸು-ಸದೃಢ ಜಗತ್ತು’ ಎಂಬ ಘೋಷವಾಕ್ಯದೊಂದಿಗೆ ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯದ ವಿಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾನಸಿಕ ಆರೋಗ್ಯ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಕೃತಿಯಲ್ಲಿನ ಗಾಳಿ, ನದಿ ಸೇರಿದಂತೆ ಪ್ರತಿಯೊಂದಕ್ಕೂ ನಿರ್ದಿಷ್ಟ ದಿಕ್ಕು ಇರುತ್ತದೆ. ಆದರೆ ಮನುಷ್ಯನ ಮನಸ್ಸು ಮಾತ್ರ ಹತೋಟಿಯಲ್ಲಿರದೆ ವಿವಿಧ ದಿಕ್ಕುಗಳಲ್ಲಿ ಚಲಿಸುತ್ತದೆ. ಹಾಗಾಗಿ ಮನಸನ್ನು ಹರಿಬಿಡದೆ ಹಿಡಿತದಲ್ಲಿ ಇಟ್ಟುಕೊಂಡರೆ ಸದೃಢ ಮಾನಸಿಕ ಆರೋಗ್ಯ ಹೊಂದುತ್ತೇವೆ ಹಾಗೂ ಸಂತೋಷದ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದರು.
ಮನುಷ್ಯನು ಸಣ್ಣ ವಿಚಾರಗಳಿಂದ ಹತಾಶೆಗೊಳ್ಳದೇ, ಕೆಲಸ-ಕಾರ್ಯಗಳ ಒತ್ತಡಗಳನ್ನು ನಿಗ್ರಹಿಸಿಕೊಂಡು ವೈಯಕ್ತಿಕ ಮತ್ತು ವೃತ್ತಿ ಜೀವನ ನಡೆಸಿದಾಗ ಮಾತ್ರ ಮಾನಸಿಕ ಸದೃಢರಾಗುತ್ತಾರೆ ಎಂದರು.
ಪೋಷಕರು ಕೂಡ ತಮ್ಮ ಮಕ್ಕಳನ್ನು ಉತ್ತಮ ಹಾದಿಯಲ್ಲಿ ಬೆಳೆಸುವ ಜವಾಬ್ದಾರಿ ಹೊಂದಿರುತ್ತಾರೆ. ಇಂದಿನ ಯುವ ಸಮೂಹವು ಕ್ಷುಲ್ಲಕ ಕಾರಣಗಳಿಗೆ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಾರೆ. ಮಾನಸಿಕ ಆರೋಗ್ಯ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮನೆಯಿಂದಲೇ ಪ್ರಾರಂಭವಾದಾಗ ಮಾತ್ರ ಮಾನಸಿಕ ಒತ್ತಡ ನಿರ್ವಹಿಸಿಕೊಂಡು ಉತ್ತಮ ಪ್ರಜೆಗಳಾಗುತ್ತಾರೆ ಎಂದರು.
ಸದೃಢ ದೇಹ ಹೊಂದಲು ವ್ಯಾಯಾಮ, ಕ್ರೀಡಾ ಚಟುವಟಿಕೆಗಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮಾನಸಿಕವಾಗಿ ಆರೋಗ್ಯವಂತರಾಗಲು ಯೋಗ, ಧ್ಯಾನ, ಮಾಡುವುದರಿಂದ ಆರೋಗ್ಯವಂತರಾಗಿ ಸಕರಾತ್ಮಕ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜಿಲ್ಲಾ ಆಸ್ಪತ್ರೆಯ ಮನರೋಗ ತಜ್ಞ ಡಾ.ರೋಹನ್ ವನಗುಂದಿ ಮಾತನಾಡಿ, ನಿಮ್ಹಾನ್ಸ್ ಸಹಯೋಗದಿಂದ 1985ರಲ್ಲಿ ದೇಶದಲ್ಲಿಯೇ ಮೊಟ್ಟ ಮೊದಲು ಮಾನಸಿಕ ಆರೋಗ್ಯ ಕಾರ್ಯಕ್ರಮ ಬಳ್ಳಾರಿಯಲ್ಲಿ ಪ್ರಾರಂಭವಾಗಿದ್ದು ವಿಶೇಷ. ಈ ಮಾನಸಿಕ ಆರೋಗ್ಯ ಕಾರ್ಯಕ್ರಮ ಯಶಸ್ವಿಯಾದ ಕಾರಣ “ಬಳ್ಳಾರಿ ಮಾದರಿ” ಎಂಬ ಹೆಸರಿನಲ್ಲಿ ದೇಶದಲ್ಲೇ ಪ್ರಸ್ತುತಿ ಪಡೆದಿದೆ ಎಂದರು.
ವೈಯಕ್ತಿಕ ಜೀವನ, ವೃತ್ತಿ ಜೀವನ, ಕೌಟುಂಬಿಕ ಜೀವನ, ಸಾಮಾಜಿಕ ಜೀವನದಲ್ಲಿ ಎಲ್ಲಾ ವರ್ಗದ ಜನರಿಗೆ ಒತ್ತಡ ಬರುವುದು ಸಹಜ. ಅದನ್ನು ಸಮತೋಲನ ಭಾವನೆಯಿಂದ ನಿರ್ವಹಿಸಬೇಕು. ಮನುಷ್ಯ ಭಾವನಾತ್ಮಕ ಜೀವಿ. ಭಾವನೆಗಳನ್ನು ಸಮ-ಭಾವದಿಂದ ಸ್ವೀಕರಿಸಿ ಮಾನಸಿಕ ಆರೋಗ್ಯ ಹೊಂದಬೇಕು ಎಂದರು.
ಜನಸಾಮಾನ್ಯರು ದೈಹಿಕವಾಗಿ ಸದೃಢರಾಗಲು ವ್ಯಾಯಾಮ, ಡಯಟ್ನಂತಹ ಜೀವನ ಶೈಲಿಗೆ ಮೊರೆಹೋಗುತ್ತಾರೆ. ಆದರೆ ಮಾನಸಿಕವಾಗಿ ಆರೋಗ್ಯದಿಂದಿರಲು ಯೋಗ, ಧ್ಯಾನ, ದೃಢವಾದ ಆತ್ಮವಿಶ್ವಾಸ ಹಾಗೂ ಧನಾತ್ಮಕ ಯೋಚನೆಗಳಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಒಂದನೇ ಹೆಚ್ಚುವರಿ ನ್ಯಾಯಾಧೀಶ ವಿದ್ಯಾಧರ್ ಶಿರಹಟ್ಟಿ, ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಸಿದ್ದಲಿಂಗ ಪ್ರಭು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್ ಹೊಸಮನೆ, ಹಿರಿಯ ಸಿವಿಲ್ ನ್ಯಾಯಾಧೀಶ ಇಬ್ರಾಹಿಂ ಮುಜಾವರ್, ಅರ್ಪಣ ಸೇರಿದಂತೆ ಜಿಲ್ಲಾ ನ್ಯಾಯಾಲಯದ ವಿವಿಧ ನ್ಯಾಯಾಧೀಶರು, ನ್ಯಾಯಾಲಯದ ನೌಕರರು, ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.




