ಮೋದಿ ವೈಫಲ್ಯಗಳು, ಕಾಂಗ್ರೆಸ್ ಸಾಧನೆಗಳು ಲೋಕಸಭೆ ಚುನಾವಣೆಯಲ್ಲಿ ನಮ್ಮ ಗೆಲುವು ಖಾತ್ರಿಪಡಿಸಿವೆ: ಸಿದ್ದರಾಮಯ್ಯ

2 years ago

ಮೈಸೂರು: ಬಿಜೆಪಿ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ದೇಶದಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವ ಅಂಶ ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಾರೆ ಎಂದು ಸಿಎಂ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದರು.

ಈ ಬಾರಿ 400 ದಾಟುತ್ತೇವೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿಕೊಂಡಿದ್ದಾರೆ. ಬಿಜೆಪಿ ಸರ್ಕಾರದ್ದು ಅಭಿವೃದ್ಧಿಯಲ್ಲಿ ಶೂನ್ಯ ಸಾಧನೆ. ಮೋದಿಯವರ ಸುಳ್ಳಿನ ಪಿಕ್ಚರ್ ಇನ್ನೂ ಬಾಕಿ ಇದೆ. ಸುಳ್ಳಿನ ಕನಸುಗಳನ್ನು ಬಿತ್ತುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸೀಟುಗಳವರೆಗೆ ಗೆದ್ದೇ ಗೆಲ್ಲುತ್ತದೆ. ಸೋಲುವ ಭಯಕ್ಕೆ ಒಳಗಾಗಿರುವ ಬಿಜೆಪಿಯವರು ಕರ್ನಾಟಕದಲ್ಲಿ ಬಿಜೆಪಿ 28 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು.

ಬಿಜೆಪಿಯವರಿಗೆ ಸಂಸ್ಕಾರವಿಲ್ಲ. ಯತೀಂದ್ರ ಅವರು ಸಿಬಿಐನವರು ಕೊಟ್ಟಿರುವ ರಿಪೋರ್ಟ್ ಆಧಾರದ ಮೇಲೆ ಹೇಳಿಕೆಯನ್ನು ನೀಡಿದ್ದಾರೆಯೇ ಹೊರತು, ಅಮಿತ್ ಶಾ ಅವರಿಗೆ ಅವಮಾನ ಮಾಡುವ ಉದ್ದೇಶ ಅವರಿಗೆ ಇಲ್ಲ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಬಹಳಷ್ಟು ಜನ ಸೇರ್ಪಡೆಯಾಗಲು ಉತ್ಸುಕರಿದ್ದಾರೆ. ಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷದಲ್ಲಿ ಸ್ವಾಗತವಿದೆ. ವಿಧಾನಸಭಾ ಚುನಾವಣೆಯಲ್ಲಿಯೂ ಮೋದಿಯವರು ಪ್ರಚಾರ ಕೈಗೊಂಡಿದ್ದರೂ, ಬಿಜೆಪಿ ಗೆಲ್ಲಲು ಸಾಧ್ಯವಾಗಲಿಲ್ಲ. ಕೇಂದ್ರದಲ್ಲಿ ಮೋದಿ ಸರ್ಕಾರದ ವೈಫಲ್ಯಗಳು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಗೆಲುವನ್ನು ಖಾತ್ರಿಪಡಿಸಿದೆ ಎಂದರು.

Leave a Reply