ಮೋದಿಯವರು ಪ್ರಧಾನಮಂತ್ರಿಯಾಗಿ ಸುಳ್ಳುಗಳ ಮಾರುಕಟ್ಟೆ ತೆರೆದಿದ್ದಾರೆ: ಸಿದ್ದರಾಮಯ್ಯ

2 years ago

ಕಲಬುರಗಿ: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಜನರ ಮೇಲೆ ಹೆಚ್ಚು ಪರಿಣಾಮ ಬೀರಿವೆ ಎಂದು ನಂಬಿದ್ದೇನೆ. ಹೀಗಾಗಿ ಈ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್ನಲ್ಲಿ 2024ರ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಹಂತದ ಚುನಾವಣೆ ಮುಗಿದಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವರದಿ ಬಂದಿದೆ. ಎಲ್ಲಾ ಅಭ್ಯರ್ಥಿಗಳು ಹಾಗೂ ಜಿಲ್ಲಾ ಸಚಿವರೊಂದಿಗೆ ಮಾತನಾಡಿದ್ದೇನೆ. ಎಲ್ಲರೂ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಜನ ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದ್ದಾರೆ ಎಂದರು.

ನರೇಂದ್ರ ಮೋದಿಯವರು ದೇಶದ ಪ್ರಧಾನಮಂತ್ರಿಯಾಗಿ ಸುಳ್ಳುಗಳ ಮಾರುಕಟ್ಟೆ ತೆರೆದಿದ್ದಾರೆ. ಹಿಂದುಳಿದವರಿಗೆ ಮೀಸಲಾತಿ ಬಗ್ಗೆ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಮಂಡಲ್ ಆಯೋಗದ ವರದಿ ಜಾರಿಯಾದಾಗ ಮೀಸಲಾತಿ ವಿರೋಧಿಸಿದ್ದು, ಬಿಜೆಪಿಯವರು. ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ, ಅವಕಾಶ ವಂಚಿತರಾದವರಿಗೆ ಮೀಸಲಾತಿ ಕೊಡಬೇಕೆಂದು ಸಂವಿಧಾನ ಹೇಳಿದೆ ಎಂದರು.

ನರೇಂದ್ರ ಮೋದಿಯವರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸಂವಿಧಾನ ತಿದ್ದುಪಡಿ ಮಾಡಿ ಅವರಿಗೂ ಶೇ. 10 ಮೀಸಲಾತಿ ನೀಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚನೆ ಮಾಡಿರುವ ಮೂಲ ಸಂವಿಧಾನದಲ್ಲಿ ಅದು ಇಲ್ಲ. ಆದರೂ ಸಂವಿಧಾನ ತಿದ್ದುಪಡಿ ಮಾಡಿ ಮೀಸಲಾತಿ ನೀಡಿದೆ ಎಂದರು.

ಮೊದಲಿನಿಂದಲೂ ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಅರ್ಜುನ್ ಸಿಂಗ್ ಅವರು ಆಗ ಮಾನವ ಸಂಪನ್ಮೂಲ ಸಚಿವರಾಗಿದ್ದರು. ದೇಶಾದ್ಯಂತ. ಐಐಟಿ, ಐಐಎಂ ನಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಜಾರಿ ಮಾಡಿದರು. ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ 73, 74 ನೇ ತಿದ್ದುಪಡಿ ಮಾಡಿದರು. 73 ನೇ ತಿದ್ದುಪಡಿ ಮೂಲಕ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರಿಗೆ ಹಿಂದುಳಿದವರಿಗೆ ಮೀಸಲಾತಿ ತಂದರು. ನರಸಿಂಹರಾಯರು ಪ್ರಧಾನಿ ಮಂತ್ರಿಗಳಾಗಿದ್ದಾಗ ಜಾರಿಗೆ ಬಂತು. ಓಬಿಸಿ 2 (ಎ) ಮತ್ತು (ಬಿ )ಎಂದು ಮೀಸಲಾತಿ ತಂದು ಮಹಿಳೆಯರಿಗೆ 33% ಮೀಸಲಾತಿ ತಂದೆವು. ಹಿಂದುಳಿದವರಿಗೆ ಶೇ. 27.4 ಓಬಿಸಿ (ಎ) ಹಾಗೂ ಶೇ. 6.6 ಓಬಿಸಿ (ಬಿ) ಯವರಿಗೆ ಮಾಡಲಾಯಿತು. ಓಬಿಸಿ (ಎ) ನಲ್ಲಿ ಮುಸಲ್ಮಾನರನ್ನು ಸೇರಿಸಲಾಯಿತು ಎಂದು ವಿವರಗಳನ್ನು ನೀಡಿದರು.

ಹಿಂದುಳಿದವರಿಗೆ ನೀಡಲಾದ ಮೀಸಲಾತಿಯನ್ನು ರದ್ದುಪಡಿಸಿ ಮುಸಲ್ಮಾನರಿಗೆ ನೀಡಲಾಗುತ್ತದೆ ಎಂಬುದು ಅಪ್ಪಟ ಸುಳ್ಳು. ರಾಜಕೀಯವಾಗಿ ಬಿಜೆಪಿಯವರು ಈ ರೀತಿ ಮಾತನಾಡುತ್ತಿದ್ದಾರೆ. ಮತಗಳನ್ನು ಧ್ರುವೀಕರಣ ಮಾಡುವ ಉದ್ದೇಶದಿಂದ ಮೋದಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಅವರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply