ಜೆಡಿಎಸ್ ಜೊತೆ ಮೈತ್ರಿ ಮೋದಿ, ಬಿಜೆಪಿ ವರ್ಚಸ್ಸು ರಾಜ್ಯದಲ್ಲಿ ಕುಗ್ಗಿದೆ ಎಂಬುದರ ಸಂಕೇತ: ಡಿ.ಕೆ.ಶಿವಕುಮಾರ್

3 years ago

#Modi #alliance #JDS, #sign, #influence #state #DKShivakumar

ಹಿಂದೆ ಒಳ ಒಪ್ಪಂದದಲ್ಲಿದ್ದ ಬಿಜೆಪಿ – ಜೆಡಿಎಸ್ ಈಗ ಬಹಿರಂಗವಾಗಿ ಒಂದಾಗಿವೆ: ಭೈರತಿ ಸುರೇಶ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಇನ್ನೆಂದಿಗೂ ಈ ಪಕ್ಷದ ಸಹವಾಸ ಬೇಡ ಎಂದು ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಜೆಡಿಎಸ್ ಜೊತೆ ನಾವು ಮೈತ್ರಿ ಮಾಡಿಕೊಂಡು ಅನುಭವ ಪಡೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ಮೈತ್ರಿ ಕಾಂಗ್ರೆಸ್ – ಜೆಡಿಎಸ್ ಮಧ್ಯೆ ಆಗುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ 4 ಸ್ಥಾನ ಬಿಟ್ಟುಕೊಡಲು ಸಮ್ಮತಿಸಿರುವುದಾಗಿ ಬಿಜೆಪಿ ಹೇಳಿರುವುದು ರಾಜ್ಯದಲ್ಲಿ ಆ ಪಕ್ಷದ ದಯನೀಯ ಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಕಳೆದ ಬಾರಿ 28 ಲೋಕಸಭಾ ಕ್ಷೇತ್ರಗಳ ಪೈಕಿ 25ರಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸ್ಥಿತಿ ತಲುಪಿದೆ. ಇದು ಮೋದಿ ಮತ್ತು ಬಿಜೆಪಿ ವರ್ಚಸ್ಸು ರಾಜ್ಯದಲ್ಲಿ ಕುಗ್ಗಿದೆ ಎಂಬುದರ ಸಂಕೇತವಾಗಿದೆ ಎಂದು ವ್ಯಾಖ್ಯಾನಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಪರಿಣಾಮ ಕೇವಲ 1 ಸ್ಥಾನದಲ್ಲಿ ಮಾತ್ರ ಗೆಲ್ಲುವಂತಾಯಿತು. ಈ ಬಾರಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿದೆ. ಇದು ನಮ್ಮ ಪಕ್ಷಕ್ಕೆ ದೊಡ್ಡ ಲಾಭ ಆಗಲಿದೆ ಎಂದು ಹೇಳಿದರು.

ಬಿಜೆಪಿ -ಜೆಡಿಎಸ್ ಮೊದಲಿನಿಂದಲೂ ಒಂದಾಗಿಯೇ ಇದ್ದವು. ಹಿಂದೆ ಒಳ ಒಪ್ಪಂದ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ – ಜೆಡಿಎಸ್ ಈಗ ಬಹಿರಂಗವಾಗಿ ಒಂದಾಗಿವೆ ಅಷ್ಟೆ. ಈ ಮೈತ್ರಿ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

Leave a Reply