ಮೋದಿ ಹೇಳಿಕೆ ವಿರುದ್ಧ ದೇಶಾದ್ಯಂತ 20,000ಕ್ಕೂ ಹೆಚ್ಚು ದೂರುಗಳು ದಾಖಲು

2 years ago

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮಹಿಳೆಯರ ಮಂಗಳಸೂತ್ರವನ್ನು ಕೀಳುತ್ತಾರೆ ಎಂದು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ 20,000ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾಂಗ್ರೆಸ್ ಹಿರಿಯ ನಾಯಕ ಎಲ್.ಹನುಮಂತಯ್ಯ ಹಾಗೂ ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, 20,000ಕ್ಕೂ ಹೆಚ್ಚು ದೂರುಗಳು ದಾಖಲಾದರೂ ಚುನಾವಣಾ ಆಯೋಗ ಪ್ರಧಾನಿ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪಿಸಿದರು.

ಚುನಾವಣಾ ಆಯೋಗ ಒಂದು ರೀತಿಯಲ್ಲಿ ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದೆ. ಮತ್ತೊಂದು ಕಡೆಯಲ್ಲಿ ದೇಶದ ಪ್ರಧಾನಿ ಮಾಂಗಲ್ಯ ಸೂತ್ರದ ಬಗ್ಗೆ ಹೇಳಿಕೆ ನೀಡುವ ಮೂಲಕ ದೇಶದ ಸಂಸ್ಕೃತಿ ಹಾಗೂ ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆ ತಂದು ಅಪಮಾನ ಮಾಡಿದ್ದಾರೆ ಎಂಬ ಟೀಕೆಗಳಿವೆ. ಈ ಹಿನ್ನೆಲೆಯಲ್ಲಿ ದಾಖಲಾಗಿರುವ ದೂರುಗಳ ವಿಷಯದಲ್ಲಿ ಆಯೋಗ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ವಿಪಕ್ಷಗಳ ವಿರುದ್ಧ ದೂರು ದಾಖಲಾದರೆ ತಕ್ಷಣ ನೋಟೀಸ್ ನೀಡುವ ಆಯೋಗ, ಈವರೆಗೂ ಪ್ರಧಾನಿ ಅವರಿಗೆ ಒಂದೂ ನೋಟೀಸ್ ನೀಡಿಲ್ಲ. ಎಲ್ಲರಿಗೂ ಒಂದೇ ರೀತಿಯ ಕಾನೂನು ಅನ್ವಯವಾಗಬೇಕು. ಆಯೋಗ ಕೂಡಲೇ ಪ್ರಧಾನಿಯವರನ್ನು ಪ್ರಚಾರ ಹಾಗೂ ಚುನಾವಣಾ ಕಾರ್ಯದಿಂದ ವಿಮುಕ್ತಿಗೊಳಿಸಬೇಕು ಎಂದು ರಮೇಶ್ ಬಾಬು ಒತ್ತಾಯ ಮಾಡಿದರು.

ಪಂಚಖಾತ್ರಿ ಯೋಜನೆಗಳ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುತ್ತಿರುವ ಬಿಜೆಪಿ, ಜೆಡಿಎಸ್ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿವೆ. ಪಂಚಖಾತ್ರಿ ಯೋಜನೆಗಳಡಿ ರಾಜ್ಯಸರ್ಕಾರ 40 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ರಾಜ್ಯದ 5 ಕೋಟಿ ಫಲಾನುಭವಿಗಳಿಗೆ ಸೌಲಭ್ಯ ತಲುಪಿವೆ. ಬಿಜೆಪಿ ಮತ್ತು ಜೆಡಿಎಸ್ ನವರ ಅಪಪ್ರಚಾರಗಳಿಗೆ ಕಿವಿಗೊಡದೆ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಎಲ್.ಹನುಮಂತಯ್ಯ ಮಾತನಾಡಿ, ಜಾಗತಿಕ ಮಾನವ ಸೂಚ್ಯಂಕ ಅಭಿವೃದ್ಧಿಯಲ್ಲಿ ಭಾರತ, ಶ್ರೀಲಂಕಾ, ಭೂತಾನ್, ಬಾಂಗ್ಲಾ ದೇಶಕ್ಕಿಂತಲೂ ಕೆಳಗಿನ ಸ್ಥಾನದಲ್ಲಿವೆ. ದೇಶದಲ್ಲಿ ಬಡವ-ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಿದೆ. ಬಡ ಹಾಗೂ ಮಧ್ಯಮ ವರ್ಗದವರ ತಲಾ ಆದಾಯವನ್ನು ಹೆಚ್ಚಿಸುವ ಅಗತ್ಯವಿದೆ ಎಂಬುದು ರಾಹುಲ್ ಗಾಂಧಿ ಅವರ ಅಭಿಪ್ರಾಯ. ಇದನ್ನು ತಿರುಚಿ ಪ್ರಧಾನಿ ಸೇರಿದಂತೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ವೈಯಕ್ತಿಕ ಆಸ್ತಿಗಳನ್ನು ಕಿತ್ತುಕೊಂಡು ಇಲ್ಲದವರಿಗೆ ಹಂಚಬೇಕು ಎಂಬುದು ರಾಹುಲ್ ಗಾಂಧಿಯವರ ಅಭಿಪ್ರಾಯ ಮಾತ್ರವಲ್ಲ. ಬಡ ಹಾಗೂ ಮಧ್ಯಮ ವರ್ಗದವರ ಜೀವನಮಟ್ಟ ಸುಧಾರಣೆಯಾಗುವ ಕ್ರಮಗಳನ್ನು ಅನುಷ್ಠಾನಗೊಳಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಇದನ್ನು ಬಿಜೆಪಿಯವರಿಂದ ಸಹಿಸಲಾಗುತ್ತಿಲ್ಲ ಎಂದರು.

Leave a Reply