ಎಂ ಪಿ ರೇಣುಕಾಚಾರ್ಯ ಮತ್ತು ಇತರರದು ಲಫಂಗರ ತಂಡ: ಬಸನಗೌಡ ಪಾಟೀಲ್ ಯತ್ನಾಳ

1 year ago

ವಿಜಯಪುರ: ತಮ್ಮ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿರುವ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದ ತಂಡವನ್ನು ಲಫಂಗರು ಎಂದು ಸಂಬೋಧಿಸಿ ಕಿಡಿ ಕಾರಿರುವ ಬಸನಗೌಡ ಪಾಟೀಲ್ ಯತ್ನಾಳ್ ತಾಕತ್ತಿದ್ದರೆ ಪಕ್ಷದ ಅಧ್ಯಕ್ಷರು ತಮ್ಮ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸವಾಲೆಸೆದರು. 

ನಮ್ಮದು ಭಿನ್ನಮತೀಯ ಚಟುವಟಿಕೆ ಅಲ್ಲ. ವಕ್ಫ್ ವಿಷಯದಲ್ಲಿ ರಾಜ್ಯದ ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನಡೆಸುತ್ತಿರುವ ಹೋರಾಟವಾಗಿದೆ. ಈ ಬಗ್ಗೆ ಹೈಕಮಾಂಡ್ ಕೇಳಿದರೆ ವಿವರಣೆ ನೀಡಲು ಸಿದ್ಧ ಎಲ್ಲರೂ ಒಟ್ಟಾಗಿ ಹೋಗಿ ವಿವರಣೆ ನೀಡುತ್ತೇವೆ ಎಂದರು.

ಮತ್ತೊಂದೆಡೆ ದಿಡೀರ್ ದೆಹಲಿಗೆ ದೌಡಾಯಿಸಿದ ಪಕ್ಷದ ಅಧ್ಯಕ್ಷ ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಹೇಳಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಗಮನ ಸೆಳೆದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಭೇಟಿಗಾಗಿ ಕಾದು ಕುಳಿತಿದ್ದಾರೆ. 

ಈ ಬೆಳವಣಿಗೆಗಳ ನಡುವೆ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದು, ಎರಡು ಬಣಗಳ ನಡುವೆ ಮಾತುಕತೆ ನಡೆಸುವ ಸಾಧ್ಯತೆ ಇದೆ.ಡಿಸೆಂಬರ್ 3 ರಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಪಕ್ಷದ ಸಂಘಟನಾ ಕಾರ್ಯಕ್ರಮದ ನಿಮಿತ್ತ ಅವರು ರಾಜ್ಯಕ್ಕೆ ಆಗಮಿಸಿಸುತ್ತಿದ್ದರೂ, ಈ ಭೇಟಿಯ ಸಂದರ್ಭದಲ್ಲಿ ಭಿನ್ನಾಭಿಪ್ರಾಯಗಳ ಬಗ್ಗೆಯೂ ಮಾತುಕತೆ ನಡೆಸುವ ಸಾಧ್ಯತೆ ಇದೆ. ತರುಣ್ ಚುಗ್ ಬಳಿಕ ಬಿಜೆಪಿಯ ಭಿನ್ನಮತದ ಬಗ್ಗೆ ಒಂದು ಬಣ ಗಮನ ಸೆಳೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಆದರೆ ತಿಳಿಯಾಗುವ ಸಾಧ್ಯತೆ ಕಡಿಮೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

Leave a Reply