ಕೆಆರ್ ಇಡಿಎಲ್ ಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ

2 years ago

ಬೆಂಗಳೂರು: ಸುಸ್ಥಿರ ಇಂಧನ ಹಾಗೂ ಪರಿಸರ ಸಮತೋಲನ ಕಾಪಾಡುವ ಸಲುವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ(ಕೆಆರ್ ಇಡಿಎಲ್) ಕೈಗೊಂಡ ಕ್ರಮಗಳು ಇದೀಗ ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಗೆ‌ ಪಾತ್ರವಾಗಿವೆ.

ಕೆಆರ್ ಇಡಿಎಲ್ ನ ಈ ಸಾಧನೆಯನ್ನು ಪ್ರಶಂಸಿರುವ ಕೇಂದ್ರ ಇಂಧನ ಸಚಿವಾಲಯ ಪ್ರಸಕ್ತ ಸಾಲಿನ ಪ್ರತಿಷ್ಠಿತ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರಿಂದ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ‌ ಅವರು ಈ ಪ್ರತಿಷ್ಠಿತ  ಪ್ರಶಸ್ತಿಯನ್ನು ಸ್ವೀಕರಿಸಿದರು.

ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ.  ಇಂಧನ ದಕ್ಷತೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿಯ ಪ್ರಶಸ್ತಿ ದೊರೆತಿದೆ.

ರಾಜ್ಯಕ್ಕೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, ಈ ಪ್ರಶಸ್ತಿ ಹಿಂದೆ ಕ್ರೆಡಲ್‌ ಅಧಿಕಾರಗಳ ಶ್ರಮವಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ. ಇಂಧನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದರ ಜತೆಗೆ  ಇನ್ನೂ ಹೆಚ್ಚಿನ ದಕ್ಷತೆ ಸಾಧಿಸುವ ಬಗ್ಗೆ ಗಮನ ಹರಿಸಲಾಗುವುದು ಎಂದು  ತಿಳಿಸಿದ್ದಾರೆ.  

ಇಂಧನ ದಕ್ಷತೆಯ ನೀತಿ ಅನುಷ್ಠಾನದಲ್ಲಿ ಕರ್ನಾಟಕ ಮುಂದಿದೆ. ಇಂಧನ ಸಂರಕ್ಷಣಾ ಕಾಯ್ದೆ- 2001ರ ಅನ್ವಯ ಇಂಧನ ಕ್ಷೇತ್ರದಲ್ಲಿ ಸುಸ್ಥಿರ ಅಭಿವೃದ್ಧಿಯ  ಗುರಿ ಸಾಧನೆಗೆ ಶ್ರಮಿಸಲಾಗುವುದು ಎಂದು ಇಂಧನ  ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದ್ದಾರೆ.

ಮೂಲಸೌಕಷಪ್ರಶಸ್ತಿ ವಹಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ  ಕೆ.ಪಿ.ರುದ್ರಪ್ಪಯ್ಯ, ಒಳ್ಳೆಯ ಕೆಲಸ ಮಾಡಿದಾಗ ಅದನ್ನು ಗುರುತಿಸಿ ನೀಡುವ ಪ್ರಶಸ್ತಿ ಮತ್ತಷ್ಟು ಕೆಲಸ ಮಾಡುವ ಪ್ರೇರಣೆ ತುಂಬುತ್ತದೆ ಎಂದರು.

ಇಂಧನ ಸಂರಕ್ಷಣೆ ಮತ್ತು ದಕ್ಷತೆಯಲ್ಲಿ (ಇಸಿ ಮತ್ತು ಇಇ) ರಾಜ್ಯ ಮುಂಚೂಣಿಯಲ್ಲಿದೆ. 5 ವರ್ಷಗಳ ಅವಧಿಯಲ್ಲಿ 5 ಪ್ರಮುಖ ವಲಯಗಳಲ್ಲಿ ಸುಮಾರು 744 ಮಿಲಿಯನ್ ಯೂನಿಟ್ ಇಂಧನ ಉಳಿತಾಯ ಗುರಿ ಸಾಧಿಸಲು ಸರ್ಕಾರ ಮತ್ತು ಖಾಸಗಿಯವರೊಂದಿಗೆ ಕೆಲಸ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸತತ ಮೂರು ವರ್ಷಗಳಿಂದ, ಅಂದರೆ ಎಸ್‌.ಇ.ಇ.ಐ 2020 ಮತ್ತು ಎಸ್‌.ಇ.ಇ.ಐ 2021-2022, 2023ರ ಅವಧಿಯಲ್ಲಿ  “ಫ್ರಂಟ್ ರನ್ನರ್” ಎಂಬ ಮನ್ನಣೆಗೆ ಪಾತ್ರವಾಗಿದೆ.  ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ, ರಾಜ್ಯ ಇಂಧನ ದಕ್ಷತೆ ಸೂಚ್ಯಂಕ (ಎಸ್‌.ಇ.ಇ.ಐ) 2023ರ ಪ್ರಶಸ್ತಿಯನ್ನು ಘೋಷಿಸಿದ್ದು, ಕರ್ನಾಟಕವು 85.75 ಅತ್ಯಧಿಕ ಅಂಕಗಳನ್ನು ಗಳಿಸುವ ಮೂಲಕ ದೇಶದಲ್ಲೇ ಉತ್ತಮ ಕಾರ್ಯನಿರ್ವಹಣೆಯ ರಾಜ್ಯ ಎಂಬ ಸ್ಥಾನ ಪಡೆದಿದೆ ಎಂದರು.

Leave a Reply