ಬೆಳಗಾವಿ: ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆ ಕೈಗೊಂಡು, ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೋಗನಿರೋಧಕ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ವಿಧಾನ ಪರಿಷತ್ತಿನಲ್ಲಿ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೀದಿನಾಯಿಗಳ ಸಂತಾನಹರಣ ಚಿಕಿತ್ಸೆಗೆ ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ತಡೆಗಟ್ಟಲು ಸೂಕ್ತ ಪ್ರಮಾಣಿತ ಕಾರ್ಯಾಚರಣೆ ಅನುಷ್ಠಾನಗೊಳಿಸುವ ವಿಧಾನವನ್ನು ಕುರಿತು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ವತಿಯಿಂದ ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ತಡೆಗಟ್ಟುವ ಕಾಯ್ದೆ 2001 ರಡಿ ಪ್ರಾಣಿಗಳನ್ನು ರಕ್ಷಿಸಲು, ವಶಪಡಿಸಿಕೊಳ್ಳಲು ಮತ್ತು ಪ್ರಾಣಿಗಳ ಪಾಲನೆಗಾಗಿ ಶಿಷ್ಟಾಚಾರವನ್ನು ಜಾರಿಗೊಳಿಸಲಾಗಿದೆ ಎಂದರು.




