ನಿರ್ಮಲಾ ಸೀತಾರಾಮನ್ ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನ ಮುಂದುವರೆಸಿದ್ದಾರೆ: ಸಿದ್ದರಾಮಯ್ಯ

1 year ago

ಬೆಂಗಳೂರು: ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಎಂದು ಹೇಳಿದ್ದಾರೆ.

ಬಜೆಟ್ ಬಗ್ಗೆ ಸುದೀರ್ಘ ಪ್ರತಿಕ್ರಿಯೆ ನೀಡಿರುವ ಅವರು, ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಮುಂದುವರೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಂಬಲ ಬೆಲೆಗೆ ಆಗ್ರಹಿಸಿ ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ ಈ ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹ ಎಂದು ಕಿಡಿಕಾರಿದ್ದಾರೆ.

ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್  ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ ಎಂದು ಒತ್ತಾಯಿಸಿದ್ದಾರೆ.

ಒಟ್ಟಾರೆ ಬಜೆಟ್ ಗಾತ್ರ 50,65,345 ಕೋಟಿ ರೂಪಾಯಿಗಳು. 2024-25ನೇ ಸಾಲಿಗೆ ಸಂಬಂಧಿಸಿದಂತೆ 48.20 ಲಕ್ಷ ಕೋಟಿ ರೂಪಾಯಿಗಳ ಬಜೆಟ್ಟನ್ನು ಮಂಡಿಸಿದ್ದರು. ಆದರೆ, ಪರಿಷ್ಕೃತ ಅಂದಾಜಿನ ಪ್ರಕಾರ 47.16 ಲಕ್ಷ ಕೋಟಿ ರೂಪಾಯಿಗಳಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಿದ್ದಾರೆ. ಅದರಂತೆ ಇದನ್ನು ನೋಡಿದರೆ ಕೇಂದ್ರ ಸರ್ಕಾರಕ್ಕೆ 1.04 ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಸಂಗ್ರಹ ಕಡಿಮೆಯಾಗುತ್ತದೆ ಎಂದು ಅಂದಾಜು ಮಾಡಿದ್ದಾರೆ. ಹಾಗಾಗಿ, ದೇಶದ ಆರ್ಥಿಕ ಸ್ಥಿತಿ ಸರಿಯಾಗಿಲ್ಲ ಎಂಬುದನ್ನು ಇದು ಸೂಚಿಸುತ್ತದೆ ಎಂದಿದ್ದಾರೆ. ದು

ಪ್ರಧಾನಿ ಮೋದಿಯವರು ನಮ್ಮದು ಒಕ್ಕೂಟ ವ್ಯವಸ್ಥೆಯ ಭಾರತ ಎನ್ನುವುದನ್ನು ಮರೆತೇ ಬಿಟ್ಟಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ಎಂದಾಕ್ಷಣ ಪ್ರತಿಯೊಂದು ರಾಜ್ಯದ ಜನತೆ ತಮ್ಮ ರಾಜ್ಯಕ್ಕೆ ಏನಾಧರೂ ಕೊಡುಗೆಗಳಿರಬಹುದೇ ಎಂದು ಆಸೆಕಂಗಳಿಂದ ನೋಡುತ್ತಾರೆ. ಇಂದು ಮಂಡಿಸಿದ ಬಜೆಟ್ ನಲ್ಲಿ ಒಂದೆಡೆ ಬಿಹಾರ ಇನ್ನೊಂದೆಡೆ ಆಂಧ್ರಪ್ರದೇಶ ಬಿಟ್ಟರೆ ಬೇರೆ ರಾಜ್ಯಗಳ ಪ್ರಸ್ತಾವವೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯಕ್ಕೆ ಹದಿನೈದನೇ ಹಣಕಾಸು ಆಯೋಗದ ಪ್ರಕಾರವೇ ನೀಡಬೇಕಿರುವ ರೂ. 5495 ಕೋಟಿ ಹಣವನ್ನು ನೀಡುವ ಸುಳಿವು ಕೂಡ ಇಲ್ಲ. ತೆರಿಗೆ ಹೆಚ್ಚು ನೀಡುವ ರಾಜ್ಯಗಳ ಅಭಿವೃದ್ಧಿಗೆ ಅನುದಾನವನ್ನು ಹೆಚ್ಚಿಸುವ ಬಗ್ಗೆ ತುಟಿ ಬಿಚ್ಚಿಲ್ಲ ಎಂದು ಟೀಕಿಸಿದ್ದಾರೆ.

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಗೌರವ ಧನದಲ್ಲಿ ಕೇಂದ್ರ ಸರ್ಕಾರದ ಪಾಲನ್ನು ರೂ.5000ಕ್ಕೆ ಮತ್ತು ಅಡುಗೆ ಕೆಲಸಗಾರರು ಮತ್ತು ಕಾರ್ಯಕರ್ತರ ಗೌರವ ಧನದಲ್ಲಿ  ಕೇಂದ್ರ ಸರ್ಕಾರದ ಪಾಲನ್ನು ಕನಿಷ್ಠ ರೂ.5000 ಹೆಚ್ಚಿಸಬೇಕು ಎಂಬ ನಮ್ಮ ಬೇಡಿಕೆಯನ್ನು ಪುರಸ್ಕರಿಸಿಲ್ಲ ಎಂದು ಆಪಾದಿಸಿದ್ದಾರೆ.

ಮಹದಾಯಿ, ಭದ್ರಾ ಮೇಲ್ದಂಡೆ ಮುಂತಾದ ಯಾವುದೇ ನೀರಾವರಿ ಯೋಜನೆಗಳಿಗೂ ಈ ಬಜೆಟ್‌ನಲ್ಲಿ ನಯಾಪೈಸೆ ಒದಗಿಸಿಲ್ಲ. ಕರ್ನಾಟಕ ರಾಜ್ಯವು ಬರ, ಪ್ರವಾಹ, ಗುಡ್ಡ ಕುಸಿತ, ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದೆ. ಅದಕ್ಕಾಗಿ ವಿಶೇಷ ಪ್ಯಾಕೇಜನ್ನು ನೀಡುವಂತೆ ಕೇಳಿದ್ದೆವು. ಅದರ ಬಗ್ಗೆ ಚಕಾರವನ್ನು ಎತ್ತಿಲ್ಲ ಎಂದಿದ್ದಾರೆ.

ಕರ್ನಾಟಕವು ಅತಿ ಹೆಚ್ಚು ಒಣ ಭೂಮಿ ಪ್ರದೇಶವುಳ್ಳ ರಾಜ್ಯವಾಗಿದೆ. ನೀರಾವರಿಗೆ ಹೆಚ್ಚಿನ ಆದ್ಯತೆ ಕೊಡಲು ವಿಶೇಷ ಅನುದಾನ ಒದಗಿಸಿ ಎಂದು ಕೇಳಿದ್ದೆವು. ಇದಕ್ಕೂ ಉತ್ತರವಿಲ್ಲ.  ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ಹಲವು ಯೋಜನೆಗಳನ್ನು ಒದಗಿಸಿ ಎಂದು ಕೇಳಿದ್ದೆವು. ಅದರ ಕುರಿತು ಬಜೆಟ್ ಮೌನವಾಗಿದೆ ಎಂದು ಟೀಕಿಸಿದ್ದಾರೆ.

ರಾಯಚೂರಿನಲ್ಲಿ ಏಮ್ಸ್ ಘೋಷಣೆ ಮಾಡಬಹುದು ಎಂದು ನಿರೀಕ್ಷೆ ಮಾಡಿದ್ದೆ, ಈ ಕುರಿತು ಕೇಂದ್ರ ಆರೋಗ್ಯ ಸಚಿವರು ಪತ್ರದ ಮೂಲಕ ಸಣ್ಣ ಭರವಸೆಯನ್ನೂ ನೀಡಿದ್ದರು. ಈ ವರ್ಷದ ಬಜೆಟ್‌ನಲ್ಲಿ ಕೂಡ ಏಮ್ಸ್ ಬಗ್ಗೆ ಪ್ರಸ್ತಾಪವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply