ಮುಂದಿನ ಸಿಎಂ ಕುರಿತು ಚರ್ಚೆ ಮಾಡುವ ಅಗತ್ಯ ಕಾಣಿಸುತ್ತಿಲ್ಲ: ಪರಮೇಶ್ವರ್

2 years ago

ಬೆಂಗಳೂರು: ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ಹೈಕೋರ್ಟ್ ನಲ್ಲಿ ವಿಚಾರಣೆಗೆ ನಡೆಯುತ್ತಿರುವ ಬೆನ್ನಲ್ಲೇ ಮತ್ತೊಮ್ಮೆ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಬಿರುಸಾಗಿದೆ.

ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿರುವ ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಅನೇಕ ನಾಯಕರು ಹೈಕಮಾಂಡ್ ಮತ್ತು ಪಕ್ಷದ ಎಲ್ಲಾ ನಾಯಕರು ಸಿಎಂ ಸಿದ್ದರಾಮಯ್ಯ ಅವರ ಪರವಾಗಿದ್ದು, ನಾಯಕತ್ವ ಬದಲಾವಣೆ ವಿಚಾರ ಅಪಪ್ರಸ್ತುತ ಎಂದಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ಸಿನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ನಾಯಕರು ಭವಿಷ್ಯ ನುಡಿದಿದ್ದಾರೆ.

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಸಿಎಂ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಮುಂದಿನ ಸಿಎಂ ಕುರಿತು ಚರ್ಚೆ ಮಾಡುವ ಅಗತ್ಯವೂ ಇಲ್ಲ ಎಂದರು.

ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಹಂತದಲ್ಲಿರುವುದು ನಿಜ. ಅಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಎಲ್ಲದಕ್ಕೂ ಮೊದಲೇ ಮುಂದಿನ ಸಿಎಂ ಕುರಿತು ಚರ್ಚೆ ಮಾಡುವ ಅಗತ್ಯ ಸದ್ಯಕ್ಕಂತೂ ನನಗೆ ಕಾಣಿಸುತ್ತಿಲ್ಲ ಎಂದರು.

ಇತ್ತೀಚೆಗೆ ಎತ್ತಿನಹೊಳೆ ಯೋಜನೆ ಉದ್ಘಾಟನೆ ದಿನ ನಾನು ಮತ್ತು ಸಚಿವ ಎಂ.ಬಿ.ಪಾಟೀಲ್‌ ಹಾಸನಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರೂ ಜೊತೆಯಲ್ಲಿ ತೆರಳುವ ಕುರಿತು ಮಾತನಾಡಿಕೊಂಡಿದ್ದೆವು. ನಮ್ಮ ಮನೆಗೆ ಉಪಹಾರಕ್ಕೆ ಬನ್ನಿ ಎಂದು ಎಂ.ಬಿ.ಪಾಟೀಲ್‌ ಆಹ್ವಾನ ನೀಡಿದ್ದರು. ಹೀಗಾಗಿ ನಾನು, ಅವರು ತಿಂಡಿ ತಿಂದು ಮುಖ್ಯಮಂತ್ರಿಯವರು ಮನೆಬಿಟ್ಟ ತಕ್ಷಣವೇ ನಾವೂ ಜೊತೆಯಲ್ಲಿಯೇ ಹೋಗಿದ್ದೇವೆ. ಅದರಲ್ಲಿ ರಾಜಕೀಯ ವಿಚಾರಗಳೇನೂ ಇಲ್ಲ. ಅನಗತ್ಯವಾಗಿ ಇಂತಹದನ್ನು ದೊಡ್ಡದು ಮಾಡುವ ಅಗತ್ಯವಿಲ್ಲ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಕುಟುಂಬ ಸಮೇತರಾಗಿ ಅಮೆರಿಕಾಕ್ಕೆ ಖಾಸಗಿ ಪ್ರವಾಸ ತೆರಳಿದ್ದಾರೆ. ಅದು ಸರ್ಕಾರದಿಂದ ಪ್ರಾಯೋಜಿತವಾದ ಪ್ರವಾಸವಲ್ಲ. ಅವರ ಪ್ರವಾಸದ ಬಗ್ಗೆ ಕಾಂಗ್ರೆಸ್‌‍ ಸಭೆಯಲ್ಲೂ ಮಾಹಿತಿ ನೀಡಿದ್ದರು ಎಂದರು.

ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್, ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷವಿದ್ದು, ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿಯವರ ಹುನ್ನಾರ ಫಲಿಸುವುದಿಲ್ಲ ಎಂದರು. 

ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಅಹವಾಲು ಆಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕುರ್ಚಿಯನ್ನು ಅಲುಗಾಡಿಸಲು ಬಿಜೆಪಿ-ಜೆಡಿಎಸ್ ನಾಯಕರು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಅದ್ಯಾವುದೂ ಯಶಸ್ವಿಯಾಗುವುದಿಲ್ಲ. ಆದರೂ ಇಲ್ಲಸಲ್ಲದ ವಿಚಾರಗಳನ್ನು ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ನಲ್ಲಿ ಯಾರೂ ತಾವು ಮುಖ್ಯಮಂತ್ರಿಯಾಗಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡಿಲ್ಲ, ಅಪೇಕ್ಷೆಯನ್ನೂ ಪಟ್ಟಿಲ್ಲ. ಎಲ್ಲಾ ಸಚಿವರೂ ಪರಸ್ಪರ ಸಂಪರ್ಕದಲ್ಲಿದ್ದೇವೆ, ಎಲ್ಲದರದೂ ಒಂದೇ ಅಭಿಪ್ರಾಯವಾಗಿದೆ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಉತ್ತಮ ಸರ್ಕಾರ ನಡೆಯುತ್ತಿದೆ. ಎಲ್ಲರೂ ಅವರ ಬೆನ್ನಿಗಿದ್ದೇವೆ ಎಂದರು.

Leave a Reply