ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ
ಭೋಗ್ಯಕ್ಕೆ ನೀಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಲಾಗುವುದು
ಕುಮ್ಕಿ ಜಮೀನಿನಿಂದ ಬಡವರ ಮನೆ ತೆರವು ಇಲ್ಲ..!
ಬೆಂಗಳೂರು: ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ನಾಯಕ ವಿ. ಸುನೀಲ್ ಕುಮಾರ್ ಕುಮ್ಕಿ ಜಮೀನಿನ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದರು. “ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಉಲ್ಬಣಿಸಿದ್ದು, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು ಕಲಂ ನಮೂನೆ 53-57 ಹಾಗು 93 ಸಿಸಿ ಪ್ರಕಾರ ಮಂಜೂರು ಮಾಡಬೇಕು” ಎಂದು ಮನವಿ ಮಾಡಿದರು.
ಕುಮ್ಕಿ ಜಮೀನಿನ ಮಂಜೂರಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಕೃಷ್ಣ ಬೈರೇಗೌಡ ಅವರು, “ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಯಾರಿಗೂ ಮಂಜೂರು ಮಾಡುವುದು ಸಾಧ್ಯವಿಲ್ಲ. ಆಗುತ್ತೆ, ನೋಡೋಣ ಎಂದು ಜನರಿಗೆ ತಪ್ಪು ಮಾಹಿತಿ ಅಥವಾ ತಪ್ಪು ನಿರೀಕ್ಷೆಗಳನ್ನು ನೀಡಲು ನಾವು ಸಿದ್ದರಿಲ್ಲ. ಕಹಿಯಾದರೂ ಸತ್ಯವನ್ನು ಹೇಳಲೇಬೇಕು. ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂಬುದೇ ಸತ್ಯ” ಎಂದು ಪುನರುಚ್ಚರಿಸಿದರು.
“ಕುಮ್ಕಿ ಜನೀನನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಸಂಪುಟ ಉಪ ಸಮಿತಿ ಸಭೆ ರಚನೆ ಮಾಡಿತ್ತು. ಈ ಸಭೆ ದೀರ್ಘ ಚರ್ಚೆ ನಡೆಸಿದ ನಂತರ ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ ಎಂದು ಈ ವಿಚಾರವನ್ನೇ ಕೈಬಿಟ್ಟಿತ್ತು” ಎಂಬ ಮಾಹಿತಿಯನ್ನು ಅವರು ಸದನಕ್ಕೆ ನೀಡಿದರು.
ಮುಂದುವರೆದು, “ಕೆಎಲ್ಆರ್ ಆಕ್ಟ್ ರೂಲ್ 79ರ ಪ್ರಕಾರ ಕುಮ್ಕಿ ಪ್ರದೇಶವನ್ನು ಉಪಯೋಗ ಮಾಡಿಕೊಳ್ಳುವ ಹಕ್ಕನ್ನು ಜನರಿಗೆ ನೀಡಲಾಗಿದೆ. ಜಮೀನಿಗೆ ಹೊಂದಿಕೊಂಡಿರುವ ಕಾಡಿನ ಭಾಗದ ಉಪ ಉತ್ಪನ್ನಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ನೀಡಲಾಗಿದೆ. ಆದರೆ, ಆ ಜಾಗಗಳನ್ನು ಮಂಜೂರು ಮಾಡಲಾಗುವುದಿಲ್ಲ ಎಂಬ ಅಂಶ ಕಾನೂನಿನಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಕುಮ್ಕಿ ಜಮೀನನ್ನು ಕನಿಷ್ಠ ಭೋಗ್ಯಕ್ಕೆ ನೀಡುವುದಾದರೂ ಸಾಧ್ಯವಿದೆಯಾ ಎಂಬ ಕುರಿತು ಗಂಭೀರವಾಗಿ ಪರಿಶೀಲಿಸಲಾಗುವುದು” ಎಂದು ಸ್ಪಷ್ಟೀಕರಣ ನೀಡಿದರು.
ಬಡವರ ಮನೆ ತೆರವು ಸಾಧ್ಯವಿಲ್ಲ: ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆ ಸಾಧ್ಯವಿಲ್ಲ ಎಂಬ ವಿಚಾರವನ್ನೂ ಸಚಿವ ಕೃಷ್ಣ ಬೈರೇಗೌಡ ಅವರು ಸದನದ ಗಮನಕ್ಕೆ ತಂದರು.
ಈ ಬಗ್ಗೆ ಗಮನ ಸೆಳೆದ ಸಚಿವರು, “ಕುಮ್ಕಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡವರ ಬಗ್ಗೆ ವಿಶೇಷ ದೃಷ್ಟಿಯಿಂದ ನೋಡುವ ಅಗತ್ಯವಿದೆ. ಗೋಮಾಳ ಜಾಗದಲ್ಲಿ 94 ಸಿಸಿ ಪ್ರಕಾರ ಮಂಜೂರು ಮಾಡದಿದ್ದರೆ, ಖಂಡಿತ ನನ್ನ ಬಳಿ ಬನ್ನಿ ಗ್ರ್ಯಾಂಟ್ ಮಾಡಿ ಕೊಡುತ್ತೇನೆ. ಆದರೆ, ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ. ಇದೇ ಸಂದರ್ಭದಲ್ಲಿ ಬಡವರ ಮನೆಯನ್ನೂ ತೆರವುಗೊಳಿಸಲಾಗದು. ಹಾಗಾಗಿ ಕಾನೂನಾತ್ಮಕವಾಗಿ ಸಕಾರಾತ್ಮಕವಾಗಿ ಮಾಡಬಹುದಾ ಎಂದು ಪ್ರಾಮಾಣಿಕವಾಗಿ ವಿಚಾರ ಮಾಡ್ತೀವಿ” ಎಂದರು.




