ಮುಂದಿನ ಸಿಎಂ ಚರ್ಚೆ ಅನವಶ್ಯಕ: ಸಿದ್ದರಾಮಯ್ಯ

5 years ago

ಬಳ್ಳಾರಿ: ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ನಮ್ಮ ಪಕ್ಷದ ಕೆಲವು ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯ, ನಮ್ಮ ಪಕ್ಷದ ನಿಲುವಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರಾದ ಜಮೀರ್ ಅಹಮದ್, ಅಮರೇಗೌಡ ಮೊದಲಾದವರು ಮುಂದಿನ ಸಿಎಂ ಸಿದ್ದರಾಮಯ್ಯ ಎಂಬರ್ಥದಲ್ಲಿ ಮಾತಾಡಿದ್ದರು. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ,. ಚುನಾವಣೆಯಲ್ಲಿ ಬಹುಮತ ಬಂದ ನಂತರ ಮುಖ್ಯಮಂತ್ರಿ ಯಾರೆಂದು ಶಾಸಕಾಂಗ ಪಕ್ಷದ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನಿಸಲಿದೆ. ಈಗಲೇ ಮುಖ್ಯಮಂತ್ರಿ ಸ್ಥಾನದ ಬಗೆಗಿನ ಚರ್ಚೆ ಅನವಶ್ಯಕ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮುಂದಿರುವ ಮುಖ್ಯ ಗುರಿ. ನಮ್ಮ ಎಲ್ಲ ನಾಯಕರು ಈ ಗುರಿಸಾಧನೆಗೆ ತಮ್ಮದೆ ರೀತಿಯಲ್ಲಿ ಕೆಲಸಮಾಡುತ್ತಿದ್ದಾರೆ. ನಮ್ಮ ವಿರೋಧಿ ಪಕ್ಷಗಳು ನಮ್ಮ ನಡುವೆ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕುವ ಪ್ರಯತ್ನ ಮಾಡುತ್ತಿದೆ. ಅವರ ದುರುದ್ದೇಶ ಈಡೇರುವುದಿಲ್ಲ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡು ಇನ್ನೂ ಉರಿಯುತ್ತಿದೆ. ದೆಹಲಿಯಿಂದ ಬಂದ ಪ್ರತಿನಿಧಿಯೂ ಕೈಚೆಲ್ಲಿ ಹಿಂದಿರುಗಿದ್ದಾರೆ. ಈ ಒಳಜಗಳದಿಂದಾಗಿ ಇಡೀ ಸರ್ಕಾರ ಸ್ಥಬ್ದವಾಗಿದೆ. ಈ ವೈಫಲ್ಯದಿಂದ ಜನರ ಗಮನ ಬೇರೆ ಕಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಜಗಳ ತಂದು ಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದಿದ್ದಾರೆ.

ಕೊರೊನಾ ಸೋಂಕಿತರ ಸಾವಿನ ಬಗ್ಗೆ ರಾಜ್ಯ ಸರ್ಕಾರ ನೀಡುತ್ತಿರುವ ಅಂಕಿ ಅಂಶಗಳು ಸಂಪೂರ್ಣ ಸುಳ್ಳು. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಮಂದಿ ಸಾವಿಗೀಡಾದಾಗ, ದುರಂತದಲ್ಲಿ ಸತ್ತವರ ಸಂಖ್ಯೆ ಕೇವಲ 4 ಎಂದು ಸುಳ್ಳು ಹೇಳಿತ್ತು. ಸರ್ಕಾರದ ಸುಳ್ಳು ಲೆಕ್ಕಕ್ಕೆ ಇದಕ್ಕಿಂತ ಬೇರೆ ನಿದರ್ಶನ ಬೇಕೇ? ಎಂದು ಪ್ರಶ‍್ನಿಸಿದ್ದಾರೆ.

ಅಧಿಕಾರದಾಸೆಗೆ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿ, ಬಿಜೆಪಿ ಸೇರಿರುವ ಶಾಸಕರನ್ನು ಮರಳಿ  ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಅವರು ಬಾಂಬೆಗಾದ್ರೂ ಹೋಗಲಿ, ದೆಹಲಿಗಾದ್ರೂ ಹೋಗಲಿ. ಅವರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ ಎಂದರು.

Leave a Reply