ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ದಿನಾಂಕ ಮುಕ್ತಾಯ

2 years ago

ಬೆಂಗಳೂರು: ಲೋಕಸಭೆಗೆ ರಾಜ್ಯದಲ್ಲಿ 2ನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದು ಮುಕ್ತಾಯಗೊಂಡಿದೆ. ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಭಗವಂತ್ ಖೂಬಾ ಸೇರಿದಂತೆ ಹಲವು ಘಟಾನುಘಟಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಏಪ್ರಿಲ್ 12ರಿಂದ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನದವರೆಗೂ ಒಟ್ಟು 271 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ 232 ಪುರುಷ, 20 ಮಹಿಳೆಯರು, 143 ಸ್ವತಂತ್ರ ಅಭ್ಯರ್ಥಿಗಳು ಸೇರಿದ್ದಾರೆ.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಗೆ ದಾವಣಗೆರೆಯಲ್ಲಿ, ಬಿಜೆಪಿಗೆ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಗಳು ತಲೆನೋವಾಗಿ ಪರಿಣಮಿಸಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ರಾಘವೇಂದ್ರ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿರುವ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅದೇ ರೀತಿ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾವತಿ ಮಲ್ಲಿಕಾರ್ಜುನ ವಿರುದ್ಧ ವಿನಯ್ ಕುಮಾರ್ ಬಂಡಾಯ ಸಾರಿದ್ದಾರೆ.

ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಚುನಾವಣೆಯಿಂದ ದೂರ ಉಳಿದಿದೆ. ಆದರೆ ಒಬ್ಬ ಅಭ್ಯರ್ಥಿ ಮಾತ್ರ ಬಿಜಾಪುರ ಕ್ಷೇತ್ರದಲ್ಲಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿಯ 14 ಅಭ್ಯರ್ಥಿಗಳಿಂದ 45 ನಾಮಪತ್ರಗಳು, ಕಾಂಗ್ರೆಸ್ನ 14 ಅಭ್ಯರ್ಥಿಗಳಿಂದ 48, ಎಎಪಿಯಿಂದ ಒಬ್ಬರು, ಬಿಎಸ್ಪಿಯಿಂದ 15 ನಾಮಪತ್ರಗಳು ಸಲ್ಲಿಕೆಯಾಗಿವೆ. ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ನಾಳೆ ನಡೆಯಲಿದ್ದು, ಏ.22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

Leave a Reply