ಜಾತಿ ಪ್ರಮಾಣ ಪತ್ರಕ್ಕೂ ಸಮೀಕ್ಷೆಗೂ ಸಂಬಂಧವಿಲ್ಲ: ಈಶ್ವರ ಖಂಡ್ರೆ

7 months ago

ಬೆಂಗಳೂರು: ಮೀಸಲಾತಿಗಾಗಿ ನೀಡುವ ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೂ ಸಂಬಂಧವಿಲ್ಲ ಎಂದು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಜ ಜಾತಿ, ಶಾಲಾ ದಾಖಲಾತಿ ಇತ್ಯಾದಿ ಪರಾಮರ್ಶಿಸಿದ ಬಳಿಕವಷ್ಟೇ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ. ಹೀಗಾಗಿ  ಪ್ರತಿಯೊಬ್ಬರೂ ತಮ್ಮ ನೈಜ ಜಾತಿಯನ್ನೇ ಸಮೀಕ್ಷೆಯಲ್ಲಿ ಬರೆಸಬೇಕು, ನಮ್ಮ ಸಮುದಾಯದ ನೈಜ ಸಂಖ್ಯೆ ಹೊರಹೊಮ್ಮಲು ಸಹಕರಿಸಬೇಕು ಎಂದು ಸಮಸ್ತ ವೀರಶೈವ ಲಿಂಗಾಯತ ಸಮಾಜದ ಬಾಂಧವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪರವಾಗಿ ಮನವಿ ಮಾಡಿದರು.

ಎಲ್ಲ ಜಾತಿ, ಸಮುದಾಯಕ್ಕೂ ನ್ಯಾಯ ದೊರಕುವ ರೀತಿಯಲ್ಲಿ ಸಮೀಕ್ಷೆಯನ್ನು ನಡೆಸುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸರ್ಕಾರಕ್ಕೆ ಮನವಿ ಮಾಡಿದೆ. ಅದೇ ರೀತಿ ಎಲ್ಲ ಪರಮಪೂಜ್ಯ ಸ್ವಾಮೀಜಿಗಳಿಗೂ ಈ ಸಂಬಂಧ ಏಕಮತ್ಯದಿಂದ ಮತ್ತು ಒಕ್ಕೊರಲಿನಿಂದ ಸಮೀಕ್ಷೆಯಲ್ಲಿ ನೈಜವಾದ ಜಾತಿ ಹೆಸರು ಬರೆಸುವಂತೆ ಸಭಾ ಮನವಿ ಮಾಡಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಕಾರ್ಯದರ್ಶಿ ರೇಣುಕ ಪ್ರಸನ್ನ ಮತ್ತು ವೀಣಾ ಕಾಶಪ್ಪನವರ್ ಪಾಲ್ಗೊಂಡಿದ್ದರು.

Leave a Reply